ಕಲಬುರಗಿ ಡಿಸಿ ಕುರಿತು ಎಂಎಲ್ಸಿ ರವಿ ಕುಮಾರ್ ವಿವಾದಾತ್ಮಕ ಹೇಳಿಕೆ; ಮಧ್ಯಂತರ ಆದೇಶ ವಿಸ್ತರಿಸಿದ ಹೈಕೋರ್ಟ್
- by Prashanth Basavapatna
- June 20, 2025
- 227 Views

ಬೆಂಗಳೂರು: ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರನ್ನು ಅಪಮಾನಿಸುವಂಥ ಹೇಳಿಕೆ ನೀಡಿದ ಆರೋಪ ಸಂಬಂಧ ವಿಧಾನ ಪರಿಷತ್ನ ಬಿಜೆಪಿ ಸದಸ್ಯ ಎನ್. ರವಿಕುಮಾರ್ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಬಲವಂತದ ಕ್ರಮ ಕೈಗೊಳ್ಳದಂತೆ ಈ ಹಿಂದೆ ನೀಡಿದ್ದ ಮಧ್ಯಂತರ ಆದೇಶವನ್ನು ಹೈಕೋರ್ಟ್ ವಿಸ್ತರಿಸಿದೆ.
ಪ್ರಕರಣ ಸಂಬಂಧ ಕಲಬುರಗಿಯ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ರವಿಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಆರ್. ಕೃಷ್ಣ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.
ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಈ ಹಿಂದಿನ ವಿಚಾರಣೆಯ ವೇಳೆ ನ್ಯಾಯಪೀಠ ನೀಡಿದ ಸೂಚನೆಯಂತೆ ಅರ್ಜಿದಾರರು ಡಿಸಿ ಬಳಿ ತೆರಳಿ ಕ್ಷಮೆಯಾಚಿಸಿದ್ದಾರೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು. ಸರ್ಕಾರದ ಪರ ವಕೀಲರು, ಕ್ಷಮೆ ಕೇಳಲು ತೆರಳುವಾಗ ಅರ್ಜಿದಾರರು ದೊಡ್ಡ ರ್ಯಾಲಿ ನಡೆಸಿದ್ದಾರೆಂದು ಆಕ್ಷೇಪ ವ್ಯಕ್ತಪಡಿಸಿದರು.
ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಪ್ರಕರಣ ಸಂಬಂಧ ಅರ್ಜಿದಾರರ ವಿರುದ್ಧ ಬಲಬಂತದ ಕ್ರಮಕೈಗೊಳ್ಳದಂತೆ ಪೊಲೀಸರಿಗೆ ಸೂಚಿಸಿ ಮೇ 29ರಂದು ಹೊರಡಿಸಿದ್ದ ಮಧ್ಯಂತರ ಆದೇಶ ವಿಸ್ತರಿಸಿ, ಅರ್ಜಿ ವಿಚಾರಣೆ ಮುಂದೂಡಿತು.
ಪ್ರಕರಣವೇನು?
ಕಳೆದ ಮೇ 24ರಂದು ಬಿಜೆಪಿಯ ಕಲಬುರಗಿ ಚಲೋ ಪ್ರತಿಭಟನೆ ವೇಳೆ ಮಾತನಾಡಿದ್ದ ರವಿಕುಮಾರ್, ಜಿಲ್ಲಾಡಳಿತವು ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಪ್ರಭಾವದಿಂದ ಕಾರ್ಯನಿರ್ವಹಿಸುತ್ತಿದೆ. ಕಲಬುರಗಿ ಜಿಲ್ಲಾಧಿಕಾರಿಯ ಕಚೇರಿ ತನ್ನ ಸ್ವಾತಂತ್ರ್ಯ ಕಳೆದುಕೊಂಡಿದೆ. ಜಿಲ್ಲಾಧಿಕಾರಿ ಮೇಡಮ್ ಪಾಕಿಸ್ತಾನದಿಂದ ಬಂದಿದ್ದಾರೋ ಅಥವಾ ಇಲ್ಲಿ ಐಎಎಸ್ ಅಧಿಕಾರಿಯೋ ನನಗೆ ಗೊತ್ತಿಲ್ಲ ಎಂದು ಹೇಳಿದ್ದರು. ಇದರಿಂದ, ಕಲಬುರಗಿಯ ಸ್ಟೇಷನ್ ಬಜಾರ್ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಇದರಿಂದ, ಎಫ್ಐಆರ್ ರದ್ದುಕೋರಿ ರವಿಕುಮಾರ್ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದರು.
Related Articles
Thank you for your comment. It is awaiting moderation.
Comments (0)