ನಕಲಿ ಜಾತಿ ಪ್ರಮಾಣಪತ್ರ; ಕೈಗೊಂಡ ಕ್ರಮದ ವರದಿ ಸಲಿಸಲು ಸರ್ಕಾರಕ್ಕೆ 4 ವಾರ ಗಡುವು ನೀಡಿದ ಹೈಕೋರ್ಟ್
- by Jagan Ramesh
- June 24, 2025
- 68 Views

ಬೆಂಗಳೂರು: ರಾಜ್ಯದಲ್ಲಿ ನಕಲಿ ಅಥವಾ ಸುಳ್ಳು ಜಾತಿ ಪ್ರಮಾಣತ್ರಗಳನ್ನು ಪಡೆದುಕೊಂಡವರ ಹಾಗೂ ಅವುಗಳನ್ನು ವಿತರಿಸಿದವರ ವಿರುದ್ಧ ಕೈಗೊಂಡಿರುವ ಕ್ರಮಗಳ ಬಗ್ಗೆ ನಾಲ್ಕು ವಾರಗಳಲ್ಲಿ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ರಾಜ್ಯ ಎಸ್ಸಿ-ಎಸ್ಟಿ ನಕಲಿ ಜಾತಿ ಪ್ರಮಾಣಪತ್ರಗಳ ತಡೆ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಾರಪ್ಪ ನಾಯಕ್ ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮಂಗಳವಾರ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ. ಕಾಮೇಶ್ವರ್ ರಾವ್ ಹಾಗೂ ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ನಿರ್ದೇಶನ ನೀಡಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲೆ ಅಶ್ವಿನಿ ಓಬಳೇಶ್ ವಾದ ಮಂಡಿಸಿ, ನಕಲಿ ಅಥವಾ ಸುಳ್ಳು ಜಾತಿ ಪ್ರಮಾಣಪತ್ರ ಪಡೆದುಕೊಂಡವರ ಹಾಗೂ ಅದಕ್ಕೆ ಕಾರಣರಾದವರ ವಿರುದ್ಧ ಕೈಗೊಂಡ ಕ್ರಮಗಳ ಬಗ್ಗೆ ವರದಿ ನೀಡುವಂತೆ ಈ ಹಿಂದೆ ಹೈಕೋರ್ಟ್ ಆದೇಶಿಸಿತ್ತು. ಅದರಂತೆ, ಸಮಾಜ ಕಲ್ಯಾಣ ಇಲಾಖೆ ಆಯುಕ್ತರು ಹಾಗೂ ಪರಿಶಿಷ್ಟ ಪಂಗಡ ಕಲ್ಯಾಾಣ ನಿರ್ದೇಶಕರು ನ್ಯಾಯಾಲಯಕ್ಕೆ ವಸ್ತುಸ್ಥಿತಿ ವರದಿ ಸಲ್ಲಿಸಬೇಕಿತ್ತು. ಆದರೆ, ಈವರೆಗೂ ವರದಿ ಸಲ್ಲಿಸಿಲ್ಲ ಎಂದು ನ್ಯಾಯಪೀಠದ ಗಮನಕ್ಕೆ ತಂದರು.
ಸರ್ಕಾರದ ಪರ ವಕೀಲರು ಪ್ರತಿಕ್ರಿಯಿಸಿ, ಈ ವಿಚಾರಕ್ಕೆ ಸಂಬಂಧಿಸಿದಂತೆ ಈಗಷ್ಟೇ ವಿಶೇಷ ವಕೀಲರನ್ನು ನೇಮಕ ಮಾಡಲಾಗಿದೆ. ನ್ಯಾಯಾಲಯದ ಆದೇಶದಂತೆ ವರದಿ ಸಲ್ಲಿಸಲು ಕೊಂಚ ಕಾಲಾವಕಾಶಬೇಕು ಎಂದು ಕೋರಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ 4 ವಾರಗಳಲ್ಲಿ ವರದಿ ಸಲ್ಲಿಸುವಂತೆ ನಿರ್ದೇಶಿಸಿ ವಿಚಾರಣೆಯನ್ನು ಸೆಪ್ಟೆಂಬರ್ 9ಕ್ಕೆ ಮುಂದೂಡಿತು.
ಸುತ್ತೋಲೆ ಪ್ರಶ್ನಿಸಲು ಸಲಹೆ:
ಈ ಮಧ್ಯೆ, ಪರಿಶಿಷ್ಟ ಪಂಗಡದ ನಾಯಕ, ನಾಯಕ ಜಾತಿಯ ಸಮಾನಾಂತರ ಪರಿವಾರ ಮತ್ತು ತಳವಾರ ಜಾತಿಗಳಿಗೆ ಜಾತಿ ಪ್ರಮಾಣಪತ್ರ ವಿತರಿಸುವ ಸಂಬಂಧ ರಾಜ್ಯ ಸರ್ಕಾರ ಈ ವರ್ಷದ ಫೆಬ್ರವರಿಯಲ್ಲಿ ಹೊರಡಿಸಿರುವ ಸುತ್ತೋಲೆಯಿಂದ ಸಾಕಷ್ಟು ಗೊಂದಲು ನಿರ್ಮಾಣವಾಗಿದೆ. ಅರ್ಹ ಫಲಾನುಭವಿಗಳಿಗೆ ಜಾತಿ ಪ್ರಮಾಣಪತ್ರ ಸಿಗುತ್ತಿಲ್ಲ. ಇದರಿಂದ, ಉದ್ಯೋಗ, ಶಿಕ್ಷಣ ಮತ್ತಿತರ ಉದ್ದೇಶಗಳಿಗೆ ತೊಂದರೆ ಆಗುತ್ತಿದೆ ಎಂದು ಮಧ್ಯಂತರ ಅರ್ಜಿದಾರರಾದ ಕರ್ನಾಟಕ ರಾಜ್ಯ ತಳವಾರ ಮಹಾಸಭಾ ಪರ ವಕೀಲ ಎಚ್. ಸುನೀಲ್ ಕುಮಾರ್ ನ್ಯಾಯಾಲಯದ ಗಮನಕ್ಕೆ ತಂದರು. ಆಗ ನ್ಯಾಯಪೀಠ, ಸುತ್ತೋಲೆಯನ್ನು ಪ್ರತ್ಯೇಕವಾಗಿ ಪ್ರಶ್ನಿಸುವಂತೆ ಸಲಹೆ ನೀಡಿತು.
Related Articles
Thank you for your comment. It is awaiting moderation.
Comments (0)