ಕೆಆರ್‌ಎಸ್ ಬಳಿ ಕಾವೇರಿ ಆರತಿ ಆಯೋಜನೆಗೆ ಆಕ್ಷೇಪ; ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ಪಿಐಎಲ್

ಬೆಂಗಳೂರು: ಕೃಷ್ಣರಾಜಸಾಗರ (ಕೆಆರ್‌ಎಸ್) ಜಲಾಶಯದ ಬಳಿ ‘ಗಂಗಾ ಆರತಿ’ ಮಾದರಿಯಲ್ಲಿ ‘ಕಾವೇರಿ ಆರತಿ’ ಆಯೋಜಿಸುವ ರಾಜ್ಯ ಸರ್ಕಾರದ ತೀರ್ಮಾನ ಆಕ್ಷೇಪಿಸಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.

ರೈತ ನಾಯಕಿ ಮಂಡ್ಯ ಜಿಲ್ಲೆಯ ಸುನಂದಾ ಜಯರಾಮ್ ಸಲ್ಲಿಸಿರುವ ಅರ್ಜಿಯು ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ. ಕಾಮೇಶ್ವರ್‌ ರಾವ್ ಹಾಗೂ ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆಗೆ ನಿಗದಿಯಾಗಿತ್ತು.

ಅರ್ಜಿದಾರರ ಪರ ವಕೀಲ ಎಂ. ಶಿವಪ್ರಕಾಶ ವಾದ ಮಂಡಿಸಿ, ಮೈಸೂರು ಮಹಾರಾಜರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಭಾರತ ರತ್ನ ಸರ್.ಎಂ ವಿಶ್ವೇಶ್ವರಯ್ಯ ಸೇರಿ 1908ರಲ್ಲಿ ಕೆಆರ್‌ಎಸ್ ಜಲಾಶಯ ನಿರ್ಮಿಸಿದ್ದಾರೆ. ಶತಮಾನದ ಇತಿಹಾಸ ಹೊಂದಿರುವ ಈ ಜಲಾಶಯ ರಾಷ್ಟ್ರೀಯ ಸಂರಕ್ಷಿತ ಸ್ಮಾರಕ ಪಟ್ಟಿಗೆ ಸೇರಿದೆ. ಇದೀಗ ಸರ್ಕಾರ ಈ ಜಲಾಯಶದ ಬಳಿ ಕಾವೇರಿ ಆರತಿ ಎಂಬ ಹೆಸರಲ್ಲಿ ಕಾರ್ಯಕ್ರಮ ಆಯೋಜಿಸುತ್ತಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಕಾರ್ಯಕ್ರಮಕ್ಕಾಗಿ 100 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ. ಜಲಾಶಯದ 40 ಮೀಟರ್ ಅಂತರದಲ್ಲಿ 20ರಿಂದ 25 ಸಾವಿರ ಜನರ ಸೇರುವಷ್ಟು ಸಾಮರ್ಥ್ಯದ ಸ್ಟೇಡಿಯಂ ನಿರ್ಮಾಣ ಮಾಡಲಾಗುತ್ತಿದೆ. ಕನ್ನಂಬಾಡಿ ಕಟ್ಟೆ ಬಳಿ 5 ಸಾವಿರ ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುತ್ತಿದೆ. ಇದು ಜಲಾಶಯದ ಸುರಕ್ಷತೆ ಮತ್ತು ಭದ್ರತೆಗೆ ಅಪಾಯಕಾರಿಯಾಗಿದೆ. ಅಲ್ಲದೇ ಜಲ, ಪರಿಸರ ಹಾಗೂ ವಾಯು ಮಾಲಿನ್ಯಕ್ಕೂ ಕಾರಣವಾಗಲಿದೆ. ಸರ್ಕಾರದ ಈ ನಿರ್ಧಾರ 2021ರ ಜಲಾಶಯ ಸುರಕ್ಷತಾ ಕಾಯ್ದೆಗೆ ವಿರುದ್ಧವಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಈ ವೇಳೆ ನ್ಯಾಯಪೀಠ, ಕಾವೇರಿ ಆರತಿ ಯೋಜನೆಗೆ ತಾಂತ್ರಿಕ ಸಲಹೆ ಪಡೆಯಲಾಗಿಲ್ಲ ಎಂಬುದು ನಿಮ್ಮ ಆಕ್ಷೇಪವಾಗಿದ್ದರೆ, ಅದನ್ನು ಸಾಬೀತುಪಡಿಸುವ ದಾಖಲೆ ಸಲ್ಲಿಸಿ ಎಂದು ಅರ್ಜಿದಾರರ ಪರ ವಕೀಲರಿಗೆ ಸೂಚಿಸಿ, ವಿಚಾರಣೆಯನ್ನು ಶುಕ್ರವಾರಕ್ಕೆ (ಜೂನ್ 27) ಮುಂದೂಡಿತು.

ಅರ್ಜಿದಾರರ ಮನವಿ ಏನು?
ಕಾವೇರಿ ಆರತಿ ಆಯೋಜನೆ ಸಂಬಂಧ 2025ರ ಮೇ 3ರಂದು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ರದ್ದುಪಡಿಸಬೇಕು. ಮೈಸೂರು, ಮಂಡ್ಯ, ಬೆಂಗಳೂರು ದಕ್ಷಿಣ ಜಿಲ್ಲೆಗಳಲ್ಲಿ ಬರುವ ಕಾವೇರಿ ನದಿ ಪಾತ್ರದ ಕೆರೆ ಕಾಲುವೆಗಳನ್ನು ದುರಸ್ತಿಗೊಳಿಸಿ ಹೂಳು ತೆಗೆಯುವಂತೆ ಕಾವೇರಿ ನೀರಾವರಿ ನಿಗಮಕ್ಕೆ ನಿರ್ದೇಶಿಸಬೇಕು. ಬೃಂದಾವನ ಗಾರ್ಡನ್ ಸುತ್ತಮುತ್ತ ಯಾವುದೇ ನಿರ್ಮಾಣ ಕಾಮಗಾರಿ ಕೈಗೊಳ್ಳದಂತೆ ನಿರ್ಬಂಧಿಸಬೇಕು ಎಂದು ಕೋರಿರುವ ಅರ್ಜಿದಾರರು, ಪಿಐಎಲ್ ಇತ್ಯರ್ಥಗೊಳ್ಳುವವರೆಗೆ ಸರ್ಕಾರದ ಆದೇಶಕ್ಕೆ ತಡೆ ನೀಡಬೇಕು ಎಂದು ಮಧ್ಯಂತರ ಮನವಿ ಮಾಡಿದ್ದಾರೆ.

Related Articles

Comments (0)

Leave a Comment