ಮೆಟ್ರೊ ಟಿಕೆಟ್ ದರ ಏರಿಕೆ; ದರ ನಿಗದಿ ಸಮಿತಿ ವರದಿ ಬಹಿರಂಗಕ್ಕೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ತೇಜಸ್ವಿ ಸೂರ್ಯ

ಬೆಂಗಳೂರು: ಮದ್ರಾಸ್‌ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ತಾರಿಣಿ ಅವರ ನೇತೃತ್ವದ ಮೆಟ್ರೊ ರೈಲು ದರ ನಿಗದಿ ಸಮಿತಿ ಸಲ್ಲಿಸಿರುವ ವರದಿ ಸಾರ್ವಜನಿಕಗೊಳಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಹಾಗೂ ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತಕ್ಕೆ (ಬಿಎಂಆರ್‌ಸಿಎಲ್) ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ.

ಸಂಸದ ತೇಜಸ್ವಿ ಸೂರ್ಯ ಸಲ್ಲಿಸಿರುವ ಅರ್ಜಿಯನ್ನು ಸೋಮವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್‌. ಸುನೀಲ್‌ ದತ್‌ ಯಾದವ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ, ಪ್ರತಿವಾದಿಗಳಿಗೆ ನೋಟಿಸ್‌ ಜಾರಿಗೊಳಿಸಿ, ವಿಚಾರಣೆಯನ್ನು 2 ವಾರ ಮುಂದೂಡಿತು.

ನಿಮಗೂ ವರದಿ ಸಿಗುತ್ತಿಲ್ಲವೇ?
ವಿಚಾರಣೆ ವೇಳೆ ನ್ಯಾಯಪೀಠ ತೇಜಸ್ವಿ ಸೂರ್ಯ ಪರ ವಕೀಲರನ್ನು ಕುರಿತು, ನೀವು ತುಂಬ ಪ್ರಭಾವಿಯಾಗಿದ್ದೀರಿ, ನಿಮಗೂ ವರದಿ ಸಿಗುತ್ತಿಲ್ಲವೇ? ಬಿಎಂಆರ್‌ಸಿಎಲ್‌ ಆ ವರದಿ ಬಿಡುಗಡೆಗೊಳಿಸುವಂತೆ ಮಾಡಲು ನಿಮಗೆ ಸಾಧ್ಯವಿಲ್ಲವೇ ಎಂದು ಪ್ರಶ್ನಿಸಿತು.

ಅದಕ್ಕೆ ತೇಜಸ್ವಿ ಪರ ವಕೀಲರು, ಹೆಚ್ಚೆಂದರೆ ನಾವು ಬಿಎಂಆರ್‌ಸಿಎಲ್‌ಗೆ ಪತ್ರ ಬರೆಯಬಹುದು. ಸಾರ್ವಜನಿಕರು ಮೆಟ್ರೊ ನಿಗಮಕ್ಕೆ ವರದಿ ಬಹಿರಂಗಪಡಿಸಲು ಕೇಳುತ್ತಿದ್ದಾರೆ. ಬಿಎಂಆರ್‌ಸಿಎಲ್‌ ವ್ಯವಸ್ಥಾಪಕ ನಿರ್ದೇಶಕರನ್ನು ಅರ್ಜಿದಾರರು ನೇರವಾಗಿ ಭೇಟಿ ಮಾಡಿದ್ದಾರೆ. ಆದರೆ, ಅವರು ಪ್ರತಿಕ್ರಿಯಿಸುತ್ತಿಲ್ಲ. ರಾಜ್ಯ ಸರ್ಕಾರದ ಅನುಮತಿಗಾಗಿ ಕಾಯುತ್ತಿದ್ದೇವೆ ಎಂದು ಬಿಎಂಆರ್‌ಸಿಎಲ್‌ ಹೇಳುತ್ತಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಅರ್ಜಿಯಲ್ಲೇನಿದೆ?
ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತವು ಕೇಂದ್ರ ಮತ್ತು ರಾಜ್ಯ ಸರ್ಕಾರದ ಉದ್ದಿಮೆಯಾಗಿದೆ. ಸಾರ್ವಜನಿಕ ನಿಧಿಯನ್ನು ಬಳಕೆ ಮಾಡುತ್ತಿರುವ ನಿಗಮವು ಪಾರದರ್ಶಕವಾಗಿ ಸೇವೆ ಒದಗಿಸಬೇಕಿದ್ದು, ದರ ಏರಿಕೆಗೆ ಸಂಬಂಧಿಸಿದ ವರದಿ ಬಹಿರಂಗ ಪಡಿಸುವುದು ಬಿಎಂಆರ್‌ಸಿಎಲ್ ಕರ್ತವ್ಯವಾಗಿದೆ. ಸಾರ್ವಜನಿಕ ಆಡಳಿತದಲ್ಲಿ ಪಾರದರ್ಶಕತೆ ಮತ್ತು ನಿರ್ಧಾರ ಕೈಗೊಳ್ಳುವ ನಿಟ್ಟಿನಲ್ಲಿ ದರ ನಿಗದಿಗೆ ಸಂಬಂಧಿಸಿದ ವರದಿಯನ್ನು ಈ ಹಿಂದೆ ದೆಹಲಿ, ಮುಂಬೈ ಮತ್ತು ಹೈದರಾಬಾದ್‌ ಮೆಟ್ರೊ ರೈಲು ನಿಗಮಗಳು ಸಾರ್ವಜನಿಕಗೊಳಿಸಿದ್ದವು. ಆದ್ದರಿಂದ, ಸ್ವೇಚ್ಛೆಯಿಂದ ನಡೆದುಕೊಳ್ಳುವುದನ್ನು ಬಿಟ್ಟು ಬಿಎಂಆರ್‌ಸಿಎಲ್‌ ಸಹ ವರದಿ ಬಹಿರಂಗಗೊಳಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಅರ್ಜಿದಾರರು ಮೆಟ್ರೊ ರೈಲು ಸಂಚರಿಸುವ ಕ್ಷೇತ್ರ ಪ್ರತಿನಿಧಿಸುವ ಸಂಸದರಾಗಿದ್ದು, ಹಲವು ಸಂದರ್ಭಗಳಲ್ಲಿ ಮೆಟ್ರೊ ರೈಲಿನಲ್ಲಿ ಪ್ರಯಾಣಿಸಿದ್ದಾರೆ. ಆದ್ದರಿಂದ, ವರದಿಯಲ್ಲಿನ ಅಂಶಗಳನ್ನು ತಿಳಿದುಕೊಳ್ಳಲು ಅವಕಾಶ ನೀಡಬೇಕು. ವರದಿ ಬಹಿರಂಗ ಪಡಿಸುವಂತೆ 2025ರ ಏಪ್ರಿಲ್ ತಿಂಗಳಿನಿಂದ ಈವರೆಗೂ 3 ಬಾರಿ ಮನವಿ ಸಲ್ಲಿಸಿದ್ದು, ವರದಿ ಬಹಿರಂಗಪಡಿಸುವಲ್ಲಿ ಬಿಎಂಆರ್‌ಸಿಎಲ್ ವಿಫಲವಾಗಿದೆ. ಸಾರ್ವಜನಿಕ ಪ್ರಾಧಿಕಾರವಾಗಿರುವ ನಿಗಮವು ಜನರ ಮೇಲೆ ಪರಿಣಾಮ ಬೀರುವಂತಹ ನಿರ್ಧಾರಗಳನ್ನು ತೆಗೆದುಕೊಂಡ ಸಂದರ್ಭದಲ್ಲಿ ಅದನ್ನು ಬಹಿರಂಗ ಪಡಿಸಬೇಕಾಗುತ್ತದೆ. ವರದಿಯನ್ನು ಬಹಿರಂಗ ಪಡಿಸದಂತೆ ಯಾವುದೇ ಕಾನೂನಿನಲ್ಲಿ ತಿಳಿಸಿಲ್ಲ. ಆದ್ದರಿಂದ, ಸಾರ್ವಜನಿಕ ಪ್ರಾಧಿಕಾರವಾಗಿರುವ ಬಿಎಂಆರ್‌ಸಿಎಲ್‌ಗೆ ವರದಿ ಬಹಿರಂಗ ಪಡಿಸುವಂತೆ ನಿರ್ದೇಶಿಸಬೇಕೆಂದು ಅರ್ಜಿದಾರರು ಮನವಿ ಮಾಡಿದ್ದಾರೆ.

ಫೆಬ್ರವರಿಯಲ್ಲಿ ದರ ಏರಿಸಿದ್ದ ಬಿಎಂಆರ್‌ಸಿಎಲ್:
ಮೆಟ್ರೊ ರೈಲು (ಕಾರ್ಯನಿರ್ವಹಣೆ ಮತ್ತು ನಿರ್ವಹಣೆ) ಕಾಯ್ದೆ ಸೆಕ್ಷನ್‌ 34ರ ಅನ್ವಯ 2024ರ ಸೆಪ್ಟೆಂಬರ್‌ 7ರಂದು ನಿವೃತ್ತ ನ್ಯಾಯಮೂರ್ತಿ ತಾರಣಿ ಅವರ ನೇತೃತ್ವದಲ್ಲಿ ಪರಿಷ್ಕೃತ ದರ ಪಟ್ಟಿ ಶಿಫಾರಸು ಮಾಡುವಂತೆ ದರ ನಿಗದಿ ಸಮಿತಿಯನ್ನು ಬಿಎಂಆರ್‌ಸಿಎಲ್‌ ರಚಿಸಿತ್ತು. ಇದರ ಅನ್ವಯ ಸಮಿತಿಯು ದೇಶದ ವಿವಿಧೆಡೆ ಮತ್ತು ಸಿಂಗಾಪುರ ಮತ್ತು ಹಾಂಕಾಂಗ್‌ ಸೇರಿ ಜಾಗತಿಕ ಮೆಟ್ರೊ ರೈಲು ಪ್ರಯಾಣ ದರಗಳನ್ನು ಅಧ್ಯಯನ ಮಾಡಿ 2024ರ ಡಿಸೆಂಬರ್‌ 16ರಂದು ವರದಿ ಸಲ್ಲಿಸಿತ್ತು. 2025ರ ಫೆಬ್ರವರಿ 8ರಂದು ಇದನ್ನು ಬಿಎಂಆರ್‌ಸಿಎಲ್‌ ಮಾಧ್ಯಮ ಹೇಳಿಕೆಯ ಮೂಲಕ ಜನರಿಗೆ ತಿಳಿಸಿತ್ತು. ಇದರ ಭಾಗವಾಗಿ 2025ರ ಫೆಬ್ರವರಿ 9ರಂದು ಕೆಲವು ಕಡೆ ಶೇ. 100ರ ಮೆಟ್ರೊ ರೈಲು ಟಿಕೆಟ್‌ ದರ ಹೆಚ್ಚಳ ಮಾಡಲಾಗಿತ್ತು. ಇದಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ 2025ರ ಫೆಬ್ರವರಿ 14ರಂದು ಬಿಎಂಆರ್‌ಸಿಎಲ್‌ ಶೇ. 71ಕ್ಕೆ ಗರಿಷ್ಠ ಟಿಕೆಟ್‌ ದರ ಮಿತಿಗೊಳಿಸಿತ್ತು.

Related Articles

Comments (0)

Leave a Comment