ಕಸಾಪ ಆರ್ಥಿಕ ಅವ್ಯವಹಾರ ಆರೋಪ; ವಿಚಾರಣಾ ಪ್ರಕ್ರಿಯೆ ನ್ಯಾಯಾಲಯದ ಅಂತಿಮ ಆದೇಶಕ್ಕೆ ಒಳಪಡಲಿದೆ – ಹೈಕೋರ್ಟ್

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್‌‌ನ (ಕಸಾಪ) 2023-24ನೇ ಸಾಲಿನ ಆದಾಯ, ಅನುದಾನ, ಖರೀದಿ ಮತ್ತು ಮಾರಾಟ ಸೇರಿ ಆರ್ಥಿಕ ವಹಿವಾಟಿನಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಬಗ್ಗೆ ವಿಚಾರಣೆ ನಡೆಸಲು ವಿಚಾರಣಾಧಿಕಾರಿಯನ್ನು ನೇಮಕ ಮಾಡಿ ಸಹಕಾರ ಸಂಘಗಳ ಉಪ ನಿಬಂಧಕರು ಹೊರಡಿಸಿದ್ದ ಆದೇಶಕ್ಕೆ ತಡೆ ನೀಡಲು ನಿರಾಕರಿಸಿರುವ ಹೈಕೋರ್ಟ್, ವಿಚಾರಣಾ ಪ್ರಕ್ರಿಯೆಯು ಅರ್ಜಿ ಕುರಿತು ನ್ಯಾಯಾಲಯ ಹೊರಡಿಸುವ ಅಂತಿಮ ಆದೇಶಕ್ಕೆ ಒಳಪಡಲಿದೆ ಎಂದೂ ಸ್ಪಷ್ಟಪಡಿಸಿದೆ.

ಇದೇ ವೇಳೆ, ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಆಯೋಜಿಸಬೇಕಿದ್ದ ಕಸಾಪದ 2023-24ನೇ ಸಾಲಿನ ವಾರ್ಷಿಕ ಸರ್ವಸದಸ್ಯರ ಸಭೆಯನ್ನು ರದ್ದುಪಡಿಸಿದ್ದ ಸಹಕಾರ ಸಂಘಗಳ ಉಪ ನಿಬಂಧಕರ ಕ್ರಮವನ್ನು ತಳ್ಳಿಹಾಕಿರುವ ಹೈಕೋರ್ಟ್, ಯಾವ ಪ್ರದೇಶದಲ್ಲಿ ಸರ್ವಸದಸ್ಯರ ಸಭೆ ನಡೆಸಬೇಕು ಎಂಬುದನ್ನು ನಿರ್ಧರಿಸುವುದು ಕಸಾಪ ಕಾರ್ಯಕಾರಿ ಸಮಿತಿಯ ವಿವೇಚನೆಗೆ ಬಿಟ್ಟಿರುತ್ತದೆ ಎಂದು ಮಧ್ಯಂತರ ಆದೇಶದಲ್ಲಿ ಹೇಳಿದೆ.

ಕಸಾಪದ 2023-24ನೇ ಸಾಲಿನ ವಾರ್ಷಿಕ ಸರ್ವಸದಸ್ಯರ ಸಭೆ ರದ್ದುಪಡಿಸಿ ಹಾಗೂ ಪದಾಧಿಕಾರಿಗಳ ಕಾರ್ಯವೈಖರಿ, ಅನುದಾನ ಮತ್ತು ಖರ್ಚು-ವೆಚ್ಚಗಳ ಕುರಿತು ವಿಚಾರಣೆ ನಡೆಸಲು ತನಿಖಾಧಿಕಾರಿ ನೇಮಕ ಮಾಡಿ ಸಹಕಾರ ಸಂಘಗಳ ಉಪ ನಿಬಂಧಕರು 2025ರ ಜೂನ್ 26 ಹಾಗೂ 30ರಂದು ಹೊರಡಿಸಿರುವ ಎರಡು ಪ್ರತ್ಯೇಕ ಆದೇಶಗಳನ್ನು ರದ್ದು ಕೋರಿ ಕಸಾಪ ಅಧ್ಯಕ್ಷ ನಾಡೋಜ ಡಾ. ಮಹೇಶ್ ಜೋಷಿ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು.

ಅರ್ಜಿ ಇತ್ಯರ್ಥವಾಗುವವರೆಗೆ ಉಪ ನಿಬಂಧಕರ ಎರಡೂ ಆದೇಶಗಳಿಗೆ ತಡೆ ನೀಡಬೇಕೆಂಬ ಅರ್ಜಿದಾರರ ಮಧ್ಯಂತರ ಮನವಿ ಕುರಿತು ವಿಚಾರಣೆ ಪೂರ್ಣಗೊಳಿಸಿ, ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಎಸ್. ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ಪ್ರಕಟಿಸಿತು.

ವಾರ್ಷಿಕ ಸಭೆಗಿಲ್ಲ ಅಡ್ಡಿ:
ವಾರ್ಷಿಕ ಸರ್ವಸದಸ್ಯರ ಸಭೆ ನಡೆಸಲು ಬಳ್ಳಾರಿಯ ಸಂಡೂರು ಸೂಕ್ತವಾಗಿಲ್ಲ ಎಂದು ನಿಬಂಧಕರು ಆದೇಶ ಹೊರಡಿಸಿದ್ದಾರೆ. ಆದರೆ, ಅರ್ಜಿದಾರರ ಪರ ವಕೀಲರು ತೋರಿಸಿರುವಂತೆ ಕನ್ನಡ ಸಾಹಿತ್ಯ ಪರಿಷತ್‌ನ ಬೈಲಾಗಳ ಪ್ರಕಾರ ಬೆಂಗಳೂರು ಸೇರಿದಂತೆ ಕರ್ನಾಟಕ ಯಾವುದೇ ಪ್ರದೇಶದಲ್ಲಿ ವಾರ್ಷಿಕ ಸರ್ವಸದಸ್ಯರ ಸಭೆ ನಡೆಸಬಹುದಾಗಿದ್ದು, ಈ ವಿಚಾರವು ಕಾರ್ಯಕಾರಿ ಸಮಿತಿಯ ಸದಸ್ಯರ ವಿವೇಚನೆಗೆ ಬಿಟ್ಟಿರುತ್ತದೆ. ಸದಸ್ಯರು ಎಲ್ಲಿ ಸಭೆ ನಡೆಸಬೇಕು ಎಂಬುದನ್ನು ಚರ್ಚಿಸಿ ತೀರ್ಮಾನ ಕೈಗೊಳ್ಳಬಹುದಾಗಿದೆ ಎಂದು ನ್ಯಾಯಪೀಠ ಆದೇಶದಲ್ಲಿ ಸ್ಪಷ್ಟಪಡಿಸಿದೆ.

ವಿಚಾರಣೆಗಿಲ್ಲ ತಡೆಯಾಜ್ಞೆ:
ಕಸಾಪ 2023-24ನೇ ಸಾಲಿನ ಆದಾಯ, ಅನುದಾನ, ಖರೀದಿ ಮತ್ತು ಮಾರಾಟ ಸೇರಿದಂತೆ ಆರ್ಥಿಕ ವಹಿವಾಟಿನಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ವಿಚಾರಣಾಧಿಕಾರಿಯನ್ನು ನೇಮಕ ಮಾಡಿರುವ ಬಗ್ಗೆ ನಿಯಮಗಳು ಹಾಗೂ ಪ್ರಕರಣದ ದಾಖಲೆಗಳ ಆಧಾರ ಮೇಲೆ ವಿಸ್ತೃತವಾಗಿ ವಿಚಾರಣೆ ನಡೆಸಿ ತೀರ್ಮಾನ ಕೈಗೊಳ್ಳಬೇಕಿದೆ. ಆದ್ದರಿಂದ, ವಿಚಾರಣಾಧಿಕಾರಿ ನೇಮಕ ಆದೇಶಕ್ಕೆ ಈ ಹಂತದಲ್ಲಿ ತಡೆಯಾಜ್ಞೆ ನೀಡುವುದು ಸೂಕ್ತವಲ್ಲ. ಆದರೆ, ವಿಚಾರಣಾ ಪ್ರಕ್ರಿಯೆಯು ಅರ್ಜಿ ಕುರಿತು ನ್ಯಾಯಾಲಯ ಹೊರಡಿಸಲಿರುವ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ ಎಂದು ಸ್ಪಷ್ಟಪಡಿಸಿರುವ ಹೈಕೋರ್ಟ್, ಅರ್ಜಿ ವಿಚಾರಣೆಯನ್ನು 2 ವಾರಗಳ ಕಾಲ ಮುಂದೂಡಿದೆ.

ಪ್ರಕರಣವೇನು?
ಜಾಣಗೆರೆ ವೆಂಕಟರಾಮಯ್ಯ ಹಾಗೂ ಡಾ. ವಸುಂಧರಾ ಭೂಪತಿ ಸಲ್ಲಿಸಿದ ದೂರಿನ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆ ಸಂಡೂರಿನಲ್ಲಿ ಆಯೋಜಿಸಲು ನಿರ್ಧರಿಸಲಾಗಿದ್ದ 2023-24ನೇ ಸಾಲಿನ ವಾರ್ಷಿಕ ಸರ್ವಸದಸ್ಯರ ಸಭೆಯನ್ನು ರದ್ದುಪಡಿಸಿ ಜೂನ್ 27ರಂದು ಸಹಕಾರ ಸಂಘಗಳ ಉಪನಿಬಂಧಕರು ಆದೇಶ ಹೊರಡಿಸಿದ್ದರು.‌

ಜತೆಗೆ, ಎನ್. ಹನುಮೇಗೌಡ ಹಾಗೂ ಇತರರು ನೀಡಿದ ದೂರಿನ ಹಿನ್ನೆೆಲೆಯಲ್ಲಿ 2023-24ರಿಂದ ಇಲ್ಲಿಯವರೆಗೆ ಪರಿಷತ್ತು ಅನುಮೋದಿಸಿರುವ ತಿದ್ದುಪಡಿಗಳು, ಆಡಳಿತ ಮಂಡಳಿ ಪದಾಧಿಕಾರಿಗಳಿಗೆ ಪರಿಷತ್ತಿನ ಅಧ್ಯಕ್ಷರು ನಿಯಮಬಾಹಿರವಾಗಿ ನೀಡಿರುವ ನೋಟಿಸ್‌ಗಳು, 2023-24ನೇ ಸಾಲಿನಲ್ಲಿ ಪರಿಷತ್ತಿಗೆ ಸಂಗ್ರಹವಾಗಿರುವ ಆದಾಯ ದುರುಪಯೋಗಪಡಿಸಿಕೊಂಡಿರುವ, ಈ ಅವಧಿಯಲ್ಲಿನ ಖರೀದಿ ಮತ್ತು ಮಾರಾಟದಲ್ಲಿ ಆಗಿರುವ ಅವ್ಯವಹಾರ ಮತ್ತಿತರ ವಿಷಯಗಳನ್ನು ಪರಿಶೀಲಿಸಿ ಸೂಕ್ತ ವಿಚಾರಣೆ ನಡೆಸಲು ತನಿಖಾಧಿಕಾರಿಯನ್ನು ನೇಮಕ ಮಾಡಿ ಜೂನ್ 30ರಂದು ಆದೇಶಿಸಲಾಗಿತ್ತು. ಈ ಎರಡೂ ಆದೇಶಗಳನ್ನು ರದ್ದುಪಡಿಸುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಅರ್ಜಿದಾರರ ಪರವಾಗಿ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸುತ್ತಿದ್ದಾರೆ.

Related Articles

Comments (0)

Leave a Comment