ಜಿಲ್ಲಾ ಕಾರಾಗೃಹದಲ್ಲಿನ ಜಾಮರ್ಗಳಿಂದ ಕೋರ್ಟ್ ಕಲಾಪಗಳಿಗೆ ಸಮಸ್ಯೆ; ತಾಂತ್ರಿಕ ವರದಿ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ
- by Jagan Ramesh
- November 5, 2025
- 14 Views
ಬೆಂಗಳೂರು: ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಹೊಸದಾಗಿ ಅಳವಡಿಸಲಾಗಿರುವ 5 ಜಾಮರ್ಗಳಿಂದ ಕೊಡಿಯಾಲಬೈಲ್ನಲ್ಲಿರುವ ಜಿಲ್ಲಾ ಕೋರ್ಟ್ ಸಂಕೀರ್ಣದ ಕಲಾಪಗಳಿಗೆ ಅಡ್ಡಿಯಾಗುತ್ತಿದೆ ಎಂಬ ಆಕ್ಷೇಪ ಹಿನ್ನೆಲೆಯಲ್ಲಿ, ಕಾರಾಗೃಹ ಹಾಗೂ ನ್ಯಾಯಾಲಯದ ಆವರಣದಲ್ಲಿನ ಮೊಬೈಲ್ ಸಿಗ್ನಲ್ ಸಾಮರ್ಥ್ಯ ಕುರಿತ ತಾಂತ್ರಿಕ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ಜಿಲ್ಲಾ ಕಾರಾಗೃಹದಲ್ಲಿ ಅಳವಡಿಸಲಾಗಿರುವ ಜಾಮರ್ಗಳನ್ನು ತಕ್ಷಣವೇ ತೆರವುಗೊಳಿಸಲು ಗೃಹ ಇಲಾಖೆ, ಜೈಲು ಅಧೀಕ್ಷಕರು ಸೇರಿ ಸಂಬಂಧಪಟ್ಟ ಪ್ರಾಧಿಕಾರಗಳಿಗೆ ನಿರ್ದೇಶಿಸುವಂತೆ ಕೋರಿ ಮಂಗಳೂರು ವಕೀಲರ ಸಂಘ ಮತ್ತದರ ಅಧ್ಯಕ್ಷ ಎಚ್.ವಿ. ರಾಘವೇಂದ್ರ ಹಾಗೂ ಪ್ರಧಾನ ಕಾರ್ಯದರ್ಶಿ ಶ್ರೀಧರ ಹೊಸಮನೆ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ನಿರ್ದೇಶನ ನೀಡಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಪಿ.ಪಿ. ಹೆಗ್ಡೆ ವಾದ ಮಂಡಿಸಿ, ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಇತ್ತೀಚೆಗೆ ಮೊಬೈಲ್ ಜಾಮರ್ಗಳನ್ನು ಅಳವಡಿಸಲಾಗಿದ್ದು, ಇದರಿಂದ, ಸುತ್ತ ಒಂದೂವರೆಯಿಂದ ಎರಡು ಕಿ.ಮೀ. ವ್ಯಾಪ್ತಿಯಲ್ಲಿ ನೆಟ್ವರ್ಕ್ ಸಮಸ್ಯೆ ಉಂಟಾಗುತ್ತಿದೆ. ಕಾರಾಗೃಹದ ಒಂದು ಕಿ.ಮೀ. ಪರಿಧಿಯೊಳಗೆ ನ್ಯಾಯಾಲಯ ಸಂಕೀರ್ಣ ಹಾಗೂ ಮಂಗಳೂರು ವಕೀಲರ ಸಂಘದ ಕಚೇರಿ ಇದೆ. ಜಾಮರ್ಗಳ ಅಳವಡಿಕೆಯಿಂದ ಕೋರ್ಟ್ ಹಾಗೂ ಸಂಘದ ಕಾರ್ಯಚಟುವಟಿಕೆಗೆ ಸಮಸ್ಯೆ ಉಂಟಾಗುತ್ತಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.
ಜಾಮರ್ಗಳು ಕಾರಾಗೃಹದ ಆವರಣದೊಳಗಷ್ಟೇ ಕಾರ್ಯನಿರ್ವಹಿಸಿದರೆ ನಮಗೆ ಯಾವುದೇ ಸಮಸ್ಯೆ ಇಲ್ಲ. ಆದರೆ, ಸುತ್ತಮುತ್ತಲ ಪ್ರದೇಶದಲ್ಲೂ ಸಮಸ್ಯೆ ಎದುರಾಗಿದೆ. ಜಾಮರ್ಗಳಿಂದಾಗಿ ವಕೀಲರು, ನ್ಯಾಯಾಧೀಶರು ಹಾಗೂ ಕಕ್ಷಿದಾರರು ಕಷ್ಟ ಅನುಭವಿಸುತ್ತಿದ್ದಾರೆ. ಮೊಬೈಲ್ ನೆಟ್ವರ್ಕ್ ಹಾಗೂ ಸರ್ವರ್ ಸಮಸ್ಯೆಯಿಂದ ಸಂಪರ್ಕಗಳು ಕಡಿತಗೊಂಡು ಪರದಾಡುವಂತಾಗಿದೆ. ಜಾಮರ್ಗಳಿಂದ ಉಂಟಾಗಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಸಂಬಂಧಪಟ್ಟ ಪ್ರಾಧಿಕಾರಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು.
ವಾದ ಆಲಿಸಿದ ನ್ಯಾಯಪೀಠ, ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಪಡೆದು ನ್ಯಾಯಾಲಯಕ್ಕೆ ತಿಳಿಸುವಂತೆ ಸರ್ಕಾರದ ಪರ ವಕೀಲರಿಗೆ ಒಂದು ವಾರ ಕಾಲಾವಕಾಶ ನೀಡಿತಲ್ಲದೆ, ಕಾರಾಗೃಹದ ಆವರಣದೊಳಗಿನ ವಿವಿಧ ಸ್ಥಳಗಳಲ್ಲಿ ಹಾಗೂ ಕಾರಾಗೃಹದಿಂದ ಕೋರ್ಟ್ವರೆಗೆ ಮತ್ತು ನ್ಯಾಯಾಲಯದ ವಿವಿಧ ಸ್ಥಳಗಳಲ್ಲಿ ಮೊಬೈಲ್ ಸಿಗ್ನಲ್ ಸಾಮರ್ಥ್ಯ ಎಷ್ಟಿದೆ ಎಂಬುದನ್ನು ಖಚಿತಪಡಿಸುವ ತಾಂತ್ರಿಕ ವರದಿ ಸಲ್ಲಿಸಬೇಕು. ಜಾಮರ್ಗಳಿಂದ ಬರುವ ಜಾಮಿಂಗ್ ಸಿಗ್ನಲ್ಗಳು ನ್ಯಾಯಾಲಯದಲ್ಲಿ ಮೊಬೈಲ್ ಸಿಗ್ನಲ್ಗಳ ಮೇಲೆ ಯಾವುದೇ ಪ್ರತಿಕೂಲ ಪರಿಣಾಮ ಬೀರುತ್ತವೆಯೇ ಎಂಬ ಬಗ್ಗೆಯೂ ವರದಿಯಲ್ಲಿ ವಿವರಿಸಿರಬೇಕು ಎಂದು ನಿರ್ದೇಶಿಸಿ, ವಿಚಾರಣೆಯನ್ನು ನವೆಂಬರ್ 18ಕ್ಕೆ ಮುಂದೂಡಿತು.
Related Articles
Thank you for your comment. It is awaiting moderation.


Comments (0)