ನಾಡಗೀತೆಯ ಧಾಟಿ ವಿವಾದ; ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಮೇಲ್ಮನವಿ ವಜಾಗೊಳಿಸಿದ ಹೈಕೋರ್ಟ್
- by Ramya B T
- January 5, 2026
- 28 Views
ಬೆಂಗಳೂರು: ರಾಷ್ಟ್ರಕವಿ ಕುವೆಂಪು ವಿರಚಿತ ‘ಜಯ ಭಾರತ ಜನನಿಯ ತನಿಜಾತೆ’ ನಾಡಗೀತೆಗೆ ದಿವಂಗತ ಮೈಸೂರು ಅನಂತಸ್ವಾಮಿ ಸಂಯೋಜಿಸಿದ ಧಾಟಿಯನ್ನು ಅಳವಡಿಸಿಕೊಳ್ಳುವ ಕುರಿತು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಮೈಸೂರು ಅನಂತಸ್ವಾಮಿ ಸಂಯೋಜಿಸಿದ ಧಾಟಿಯಲ್ಲಿ ನಾಡಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಕಿಕ್ಕೇರಿ ಕೃಷ್ಣಮೂರ್ತಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಕಿಕ್ಕೇರಿ ಕೃಷ್ಣಮೂರ್ತಿ ಸಲ್ಲಿಸಿದ್ದ ಮೇಲ್ಮನವಿಯನ್ನು ಸೋಮವಾರ ವಜಾಗೊಳಿಸಿರುವ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ವಿಭಾಗೀಯ ನ್ಯಾಯಪೀಠ, ಏಕಸದಸ್ಯ ನ್ಯಾಯಪೀಠದ ಆದೇಶವನ್ನು ಎತ್ತಿಹಿಡಿದಿದೆ.
ಇದಕ್ಕೂ ಮುನ್ನ ವಿಚಾರಣೆ ವೇಳೆ ಮೇಲ್ಮನವಿದಾರರ ಪರ ವಕೀಲ ಆರ್. ಸುಬ್ರಹ್ಮಣ್ಯ ವಾದ ಮಂಡಿಸಿ, ಎರಡು ಚರಣಗಳಿಗೆ ಮಾತ್ರ ಮೈಸೂರು ಅನಂತಸ್ವಾಮಿ ಅವರು ರಾಗ ಸಂಯೋಜಿಸಿದ್ದಾರೆ. ಇಡೀ ನಾಡಗೀತೆಗಲ್ಲ ಎಂಬುದು ಒಪ್ಪಿತ ವಿಚಾರ. ಈ ಸಂಬಂಧ 2013 ಹಾಗೂ 2014ರಲ್ಲಿ ಸರ್ಕಾರ ಎರಡು ಸಮಿತಿ ರಚಿಸಿತ್ತು. ಈ ಸಮಿತಿಗಳ ಯಾವುದೇ ಮಾಹಿತಿಯನ್ನು ಪರಿಗಣಿಸಿಲ್ಲ. 18 ಸದಸ್ಯರ ಸಮಿತಿಯ ಅಭಿಪ್ರಾಯ ಆಧರಿಸಿ ಈ ಆಕ್ಷೇಪಾರ್ಹ ಆದೇಶ ಮಾಡಲಾಗಿದೆ. ಸಾರ್ವಜನಿಕರು ಅಥವಾ ಸಂಬಂಧಿತರ ಆಕ್ಷೇಪಣೆಯನ್ನು ಪರಿಗಣಿಸಲಾಗಿಲ್ಲ ಎಂದು ನ್ಯಾಯಪೀಠಕ್ಕೆ ವಿವರಿಸಿದರು.
ನಿರ್ದಿಷ್ಟ ರಾಗದಲ್ಲೇ ಹಾಡಬೇಕು ಎಂದು ಸರ್ಕಾರ ಆದೇಶ ಮಾಡಿದೆ. ಆದರೆ, ಇಡೀ ನಾಡಗೀತೆಗೆ ಒಂದೇ ರೀತಿಯ ರಾಗ ಸಂಯೋಜನೆ ಇಲ್ಲ. ಮೇಲ್ಮನವಿದಾರರು ಈ ಹಿಂದೆ ಸಲ್ಲಿಸಿದ್ದ ಮನವಿಯನ್ನು ಸರ್ಕಾರ ಪರಿಗಣಿಸಿಲ್ಲ. ರಾಷ್ಟ್ರಗೀತೆಯನ್ನು ಇಂಥದ್ದೇ ರಾಗದಲ್ಲಿ ಹಾಡಬೇಕು ಎಂಬ ನಿಯಮವಿಲ್ಲ. ಆದ್ದರಿಂದ, ನಾಡಗೀತೆಯನ್ನೂ ಇಂಥದ್ದೇ ರಾಗದಲ್ಲಿ ಹಾಡಬೇಕು ಎಂದು ನಿರ್ದೇಶಿಸಲು ರಾಜ್ಯ ಸರ್ಕಾರಕ್ಕೆ ಯಾವುದೇ ಅಧಿಕಾರವಿಲ್ಲ. ಇಡೀ ನಾಡಗೀತೆಗೆ ಸಂಯೋಜಿಸುವ ರಾಗ ಸಂಯೋಜನೆಯನ್ನು ಪಾಲಿಸಬೇಕು ಎಂದು ಹಿಂದಿನ ಎರಡು ಸಮಿತಿಗಳು ಹೇಳಿವೆ ಎಂದು ತಿಳಿಸಿದರು.
ಆಗ ನ್ಯಾಯಪೀಠ, ಶಾಸನಬದ್ಧವಾಗಿ ಇಂಥದ್ದೇ ರಾಗದಲ್ಲಿ ಹಾಡಬೇಕು ಎಂದು ಸರ್ಕಾರ ಆದೇಶ ಮಾಡಿದೆ. ಇದರಲ್ಲಿ ಯಾವುದೇ ಸ್ವೇಚ್ಛೆಯ ಕ್ರಮವಿಲ್ಲ ಎಂದು ಹೇಳಿತು. ಅದಕ್ಕೆ ಸುಬ್ರಹ್ಮಣ್ಯ ಅವರು, ಸಂವಿಧಾನದ ಪರಿಚ್ಛೇದ 19(1)(ಎ) ಸಹ ಇಲ್ಲಿ ಚಾಲ್ತಿಗೆ ಬರುತ್ತದೆ. ಮೇಲ್ಮನವಿದಾರರು ಕಲಾವಿದರಾಗಿದ್ದಾರೆ. ರಾಜ್ಯ ಸರ್ಕಾರ ಎಲ್ಲರ ಆಕ್ಷೇಪಣೆ ಪರಿಗಣಿಸಿ ನಿರ್ಧಾರ ಮಾಡಬೇಕಿತ್ತು ಎಂದರು.
ಇದಕ್ಕೆ ನ್ಯಾಯಪೀಠ, ನಿಮಗೆ ಬೇಕಾದಂತೆ ಹಾಡದಂತೆ ನಿಮ್ಮನ್ನು ತಡೆಯುತ್ತಿರುವವರು ಯಾರು? ನಿಮ್ಮ ಇಚ್ಛೆಯಂತೆ ಹಾಡಬಾರದು ಎಂದು ರಾಜ್ಯ ಸರ್ಕಾರ ಹೇಳಿಲ್ಲ. ಸಂವಿಧಾನಬದ್ಧವಾಗಿ 19(1)(ಎ) ಅಡಿ ನಿಮಗೆ ಹಕ್ಕಿದೆ. ಇದನ್ನು ಮಾಡದಂತೆ ನಿಮಗೆ ನಿಷೇಧ ವಿಧಿಸಿರುವ ಸರ್ಕಾರದ ಕ್ರಮ ತೋರಿಸಬೇಕು. ನಿರ್ದಿಷ್ಟ ರಾಗದಲ್ಲಿ ಹಾಡಬೇಕು ಎಂದು ಸರ್ಕಾರ ಆದೇಶಿಸಿದೆ. ಆದರೆ, ಅದು ನಿಮ್ಮ ಸಂವಿಧಾನಬದ್ಧ ಹಕ್ಕಿಗೆ ಚ್ಯುತಿ ಉಂಟು ಮಾಡಿಲ್ಲ. ಆಕ್ಷೇಪಣೆ ಪರಿಗಣಿಸಿದೆಯೇ ಇಲ್ಲವೇ ಎಂಬುದರ ಹೊರತಾಗಿ ಅದು ನಿಮ್ಮ ಮೂಲಭೂತ ಹಕ್ಕಿಗೆ ಚ್ಯುತಿ ಉಂಟು ಮಾಡಿದೆಯೇ? ಎಂದು ಪ್ರಶ್ನಿಸಿತು.
ಈ ಹಂತದಲ್ಲಿ ಸುಬ್ರಹ್ಮಣ್ಯ ಅವರು, ಇಡೀ ಚರಣಗಳಿಗೆ ಸಂಯೋಜಿಸುವ ರಾಗವನ್ನು ಇಡೀ ರಾಗಕ್ಕೆ ಅನ್ವಯಿಸುವುದು ಅಸಮರ್ಥನೀಯ ಎಂದರು.
ಅಂತಿಮವಾಗಿ ನ್ಯಾಯಪೀಠ, ನಿಮಗೆ ಬೇಕಾದ ರಾಗದಲ್ಲಿ ಹಾಡಿ. ಆದರೆ, ಮೇಲ್ಮನವಿಯಲ್ಲಿ ಯಾವುದೇ ಮೆರಿಟ್ ಇಲ್ಲ. ಸೂಕ್ತ ಕಾರಣಗಳನ್ನು ಆದೇಶದಲ್ಲಿ ನೀಡಲಾಗುವುದು ಎಂದು ತಿಳಿಸಿ, ಮೇಲ್ಮನವಿ ವಜಾಗೊಳಿಸಿತು.
ಪ್ರಕರಣವೇನು?
ರಾಷ್ಟ್ರಕವಿ ಕುವೆಂಪು ರಚಿಸಿರುವ ‘ಜಯ ಭಾರತ ಜನನಿಯ ತನುಜಾತೆ’ ನಾಡಗೀತೆಯನ್ನು ಅನಂತಸ್ವಾಮಿ ಅವರು ಸಂಯೋಜಿಸಿದ ಧಾಟಿಯನ್ನು ಅಳವಡಿಸಿಕೊಂಡು ಅದರ ಪೂರ್ಣಪಾಠ ಬಳಸಬೇಕು ಹಾಗೂ ಆಲಾಪವಿಲ್ಲದೇ, ಪುನರಾವರ್ತನೆ ಇಲ್ಲದೆ 2 ನಿಮಿಷ 30 ಸೆಕೆಂಡುಗಳಲ್ಲಿ ಹಾಡಬೇಕು ಎಂದು ರಾಜ್ಯ 2022ರ ಸೆಪ್ಟೆಂಬರ್ 25ರಂದು ಹೊರಡಿಸಿರುವ ಆದೇಶ ಪ್ರಶ್ನಿಸಿ ಕಿಕ್ಕೇರಿ ಕೃಷ್ಣಮೂರ್ತಿ ಅವರು ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದರು.
ಅನಂತಸ್ವಾಮಿ ಅವರು ನಾಡಗೀತೆಯ ಕೇವಲ ಒಂದು ಪಲ್ಲವಿ ಮತ್ತು ಎರಡು ಚರಣಗಳಿಗೆ ರಾಗ ಸಂಯೋಜಿಸಿದ್ದಾರೆ. ಗಾಯಕ ಮತ್ತು ಸಂಗೀತ ಸಂಯೋಜಕ ಸಿ. ಅಶ್ವತ್ಥ್ ಅವರು ನಾಡಗೀತೆಯ ಎಲ್ಲ ಚರಣಗಳಿಗೆ ರಾಗ ಸಂಯೋಜಿಸಿದ್ದಾರೆ. ಆದ್ದರಿಂದ, ಸರ್ಕಾರದ ಆದೇಶ ರದ್ದುಪಡಿಸಬೇಕು ಹಾಗೂ ಸಿ. ಅಶ್ವತ್ಥ್ ಅವರು ಸಂಯೋಜಿಸಿರುವ ಧಾಟಿಯಲ್ಲೇ ನಾಡಗೀತೆ ಹಾಡುವುದನ್ನು ಕಡ್ಡಾಯಗೊಳಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿದ್ದರು.
ಈ ರಿಟ್ ಅರ್ಜಿಯನ್ನು 2024ರ ಏಪ್ರಿಲ್ 24ರಂದು ಏಕಸದಸ್ಯ ನ್ಯಾಯಪೀಠ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಕಿಕ್ಕೇರಿ ಕೃಷ್ಣಮೂರ್ತಿ ವಿಭಾಗೀಯ ನ್ಯಾಯಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು.
Related Articles
Thank you for your comment. It is awaiting moderation.


Comments (0)