ಬೆಟ್ಟಿಂಗ್ ಆರೋಪ; ತುಮಕೂರು ಡಿಸಿ ಶುಭಾ ಕಲ್ಯಾಣ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ

ಬೆಂಗಳೂರು: ತುಮಕೂರು ನಗರದಲ್ಲಿ ಕಳೆದ ವರ್ಷ ಅಕ್ಟೋಬರ್‌ನಲ್ಲಿ ನಡೆದಿದ್ದ ಕಬಡ್ಡಿ ಪಂದ್ಯಾವಳಿಯಲ್ಲಿ ಕಾನೂನುಬಾಹಿರ ಬೆಟ್ಟಿಂಗ್‌ನಲ್ಲಿ ತೊಡಗಿಸಿಕೊಂಡ ಆರೋಪ ಸಂಬಂಧ ತುಮಕೂರು ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರೂ ಆರೋಪಿಯಾಗಿರುವ ಬೆಟ್ಟಿಂಗ್ ಪ್ರಕರಣದ ಸಂಬಂಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸಲು ಪೊಲೀಸರಿಗೆ ನಿರ್ದೇಶಿಸಿದ್ದ ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯದ ಆದೇಶ ಪ್ರಶ್ನಿಸಿ ಶುಭಾ ಕಲ್ಯಾಣ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್. ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ‌ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ 2026ರ ಏಪ್ರಿಲ್ 21ರಂದು ಎಸಿಜೆಎಂ ನ್ಯಾಯಾಲಯ ನೀಡಿರುವ ಆದೇಶವನ್ನು ಸಹ-ಆರೋಪಿಯಾಗಿರುವ ಗೃಹ ಸಚಿವರು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದು, ಅವರ ವಿರುದ್ಧದ ಮುಂದಿನ ಪ್ರಕ್ರಿಯೆಗಳಿಗೆ ಈ ಹಿಂದೆಯೇ ನ್ಯಾಯಾಲಯ ಮಧ್ಯಂತರ ತಡೆ ನೀಡಿದೆ. ಅದೇ ರೀತಿಯ ವಾದಗಳನ್ನು ಮುಂದಿಟ್ಟಿರುವ ಅರ್ಜಿದಾರರಿಗೂ (ಜಿಲ್ಲಾಧಿಕಾರಿ) ಸಮಾನತೆಯ ಆಧಾರದ ಮೇಲೆ ಅದೇ ಆದೇಶವನ್ನು ಅನ್ವಯಿಸಬಹುದು ಎಂದು ಅಭಿಪ್ರಾಯಪಟ್ಟು, ಡಿಸಿ ಶುಭಾ ಕಲ್ಯಾಣ್ ವಿರುದ್ಧದ ಪ್ರಕರಣರ ಮುಂದಿನ ಎಲ್ಲ ಪ್ರಕ್ರಿಯೆಗಳಿಗೆ ತಡೆ ನೀಡಿತು.

ಜತೆಗೆ, ಅರ್ಜಿ ಸಂಬಂಧ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದ ನ್ಯಾಯಪೀಠ, ಡಾ. ಜಿ. ಪರಮೇಶ್ವರ್ ಅವರ ಅರ್ಜಿಯೊಂದಿಗೇ ಈ ಅರ್ಜಿಯನ್ನೂ ವಿಚಾರಣೆಗೆ ಪಟ್ಟಿ ಮಾಡುವಂತೆ ರಿಜಿಸ್ಟ್ರಿಗೆ ಸೂಚಿಸಿತು.

ಅರ್ಜಿ ವಿಚಾರಣೆ ವೇಳೆ ಡಿಸಿ ಶುಭಾ ಕಲ್ಯಾಣ್ ಪರ ವಕೀಲರು ವಾದ ಮಂಡಿಸಿ, ಅರ್ಜಿದಾರರ ವಿರುದ್ಧ ಮಾಡಲಾದ ಕ್ಷುಲ್ಲಕ ಬೆಟ್ಟಿಂಗ್ ಆರೋಪದ ದೂರು ಇದಾಗಿದೆ. ಅಲ್ಲದೆ, ಇದೇ ಪ್ರಕರಣದಲ್ಲಿ ರಾಜ್ಯದ ಗೃಹ ಸಚಿವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಎಸಿಜೆಎಂ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಿದೆ. ಆದ್ದರಿಂದ, ಈ ಅರ್ಜಿಯಲ್ಲೂ ಅಂಥದೇ ಆದೇಶ ನೀಡಬೇಕು ಎಂದು ಮನವಿ ಮಾಡಿದರು.

ಪ್ರಕರಣದ ಹಿನ್ನೆಲೆ:
ಕಳೆದ ವರ್ಷ ಅಕ್ಟೋಬರ್ 19ರಂದು ತುಮಕೂರು ನಗರದಲ್ಲಿ ನಡೆದ ಕಬಡ್ಡಿ ಪಂದ್ಯದ ವೇಳೆ ಕೊರಟೆಗೆರೆ ಶಾಸಕರೂ ಆದ ಗೃಹ ಸಚಿವ ಜಿ. ಪರಮೇಶ್ವರ್ ಹಾಗೂ ತುಮಕೂರು ಡಿಸಿ ಶುಭಾ ಕಲ್ಯಾಣ್ ಅವರು ಪರಸ್ಪರ ಬೆಟ್ಟಿಂಗ್ ಕಟ್ಟಿದ್ದಾರೆ ಹಾಗೂ ಈ ಬಗ್ಗೆ ಮಾಧ್ಯಮಗಳ ಮುಂದೆ ಹೇಳಿಕೆಯನ್ನ ನೀಡಿದ್ದಾರೆ. ಈ ಮೂಲಕ ದೊಡ್ಡ ಮಟ್ಟದಲ್ಲಿ ಸಾರ್ವಜನಿಕರನ್ನು ಬೆಟ್ಟಿಂಗ್‌ಗೆ ಪ್ರೇರೇಪಿಸಿದ್ದಾರೆ ಎಂದು ಆರೋಪಿಸಿ ಎಚ್.ಆರ್. ನಾಗಭೂಷಣ್ ಎಂಬುವರು ಖಾಸಗಿ ದೂರು ಸಲ್ಲಿಸಿದ್ದರು.

ಖಾಸಗಿ ದೂರನ್ನು‌ ಏಪ್ರಿಲ್ 21ರಂದು ವಿಚಾರಣೆ ನಡೆಸಿದ್ದ ಬೆಂಗಳೂರಿನ 42ನೇ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್‌ (ಎಸಿಜೆಎಂ) ಕೆ.ಎನ್‌. ಶಿವಕುಮಾರ್ ಅವರು, ಜಿ. ಪರಮೇಶ್ವರ್ ಹಾಗೂ ಶುಭಾ ಕಲ್ಯಾಣ್ ವಿರುದ್ಧ ಎಫ್ಐ‌ಆರ್ ದಾಖಲಿಸಿ ತನಿಖೆ ನಡೆಸುವಂತೆ ತುಮಕೂರಿನ ಕೊರಟಗೆರೆ ತಾಲೂಕಿನ‌ ಕೊಡಿಗೇಹಳ್ಳಿ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್‌ಗೆ ನಿರ್ದೇಶಿಸಿ, ವಿಚಾರಣೆಯನ್ನು ಏಪ್ರಿಲ್ 30ಕ್ಕೆ ಮುಂದೂಡಿದ್ದರು.

ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶ ಪ್ರಶ್ನಿಸಿ ಜಿ. ಪರಮೇಶ್ವರ್ ಸಲ್ಲಿಸಿದ್ದ ಅರ್ಜಿಯನ್ನು ಏಪ್ರಿಲ್ 23ರಂದು ವಿಚಾರಣೆ ನಡೆಸಿದ್ದ ಹೈಕೋರ್ಟ್, ಎಸಿಜೆಎಂ ನ್ಯಾಯಾಲಯದ ಆದೇಶ ಹಾಗೂ ಆನಂತರದ ಪ್ರಕ್ರಿಯೆಗೆ ತಡೆ ನೀಡಿ ಮಧ್ಯಂತರ ಆದೇಶ ಹೊರಡಿಸಿತ್ತು.

Related Articles

Comments (0)

Leave a Comment