ಬಿಜೆಪಿ ವಿರುದ್ಧ ಆಕ್ಷೇಪಾರ್ಹ ಜಾಹೀರಾತು ನೀಡಿದ ಆರೋಪ; ಕೆಪಿಸಿಸಿ, ಡಿಕೆಶಿ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ
- by Jagan Ramesh
- July 4, 2025
- 12 Views

ಬೆಂಗಳೂರು: ಬಿಜೆಪಿ ನೇತೃತ್ವದ ಹಿಂದಿನ ರಾಜ್ಯ ಸರ್ಕಾರ ವಿವಿಧ ಹುದ್ದೆಗಳಿಗೆ ದರ ನಿಗದಿಪಡಿಸಿದೆ ಎಂದು ಆರೋಪಿಸಿ ರಾಜ್ಯದ ಪ್ರಮುಖ ಪತ್ರಿಕೆಗಳ ಮುಖಪುಟದಲ್ಲಿ ‘ಭ್ರಷ್ಟಾಚಾರ ದರ ಪಟ್ಟಿ’ ಎಂಬ ಜಾಹೀರಾತು ಪ್ರಕಟಿಸಿದ ಸಂಬಂಧ ದಾಖಲಾಗಿರುವ ಮಾನನಷ್ಟ ಪ್ರಕರಣದಲ್ಲಿ ಕೆಪಿಸಿಸಿ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ ನೀಡಿದೆ.
ಆಕ್ಷೇಪಾರ್ಹ ಜಾಹೀರಾತು ಪ್ರಕಟಿಸುವ ಮೂಲಕ ಬಿಜೆಪಿ ವರ್ಚಸ್ಸಿಗೆ ಧಕ್ಕೆ ತರಲಾಗಿದೆ ಎಂದು ಆರೋಪಿಸಿ ಬಿಜೆಪಿ ರಾಜ್ಯ ಘಟಕದ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಎಸ್. ಕೇಶವ ಪ್ರಸಾದ್ ಸಲ್ಲಿಸಿದ್ದ ಖಾಸಗಿ ದೂರಿನ ಅನ್ವಯ ದಾಖಲಾಗಿರುವ ಪ್ರಕರಣ ರದ್ದು ಕೋರಿ ಕೆಪಿಸಿಸಿ ಹಾಗೂ ಡಿ.ಕೆ. ಶಿವಕುಮಾರ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಅರ್ಜಿಯನ್ನು ಶುಕ್ರವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್. ಕೃಷ್ಣ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿದಾರರ ವಿರುದ್ಧದ ಮಾನನಷ್ಟ ಮೊಕದ್ದಮೆಯ ವಿಚಾರಣೆಗೆ ತಡೆ ನೀಡಿ, ಮಧ್ಯಂತರ ಆದೇಶ ಹೊರಡಿಸಿತು.
ಡಿ.ಕೆ. ಶಿವಕುಮಾರ್ ಪರ ಹಿರಿಯ ವಕೀಲ ಕೆ. ಶಶಿಕಿರಣ್ ಶೆಟ್ಟಿ ಮತ್ತು ಸೂರ್ಯ ಮುಕುಂದರಾಜ್, ಕೆಪಿಸಿಸಿಯನ್ನು ವಕೀಲರಾದ ಎಸ್.ಎ. ಅಹ್ಮದ್ ಮತ್ತು ಸಂಜಯ್ ಯಾದವ್ ಪ್ರತಿನಿಧಿಸಿದ್ದರು.
ಪ್ರಕರಣವೇನು?
ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಭ್ರಷ್ಟಾಚಾರವನ್ನು ಪ್ರಧಾನ ಅಸ್ತ್ರವಾಗಿಸಿದ್ದ ಕಾಂಗ್ರೆಸ್ ಪಕ್ಷ 2023ರ ಮೇ 5ರಂದು ಎಲ್ಲ ಪ್ರಮುಖ ಪತ್ರಿಕೆಗಳ ಮುಖಪುಟದಲ್ಲಿ ‘ಭ್ರಷ್ಟಾಚಾರ ದರ ಪಟ್ಟಿ’ ಎಂಬ ಹೆಸರಿನಡಿ ವಿವಿಧ ಹುದ್ದೆಗಳಿಗೆ ಬಿಜೆಪಿ ಲಂಚ ನಿಗದಿಪಡಿಸಿದೆ ಎಂದು ಆರೋಪಿಸಿ ಜಾಹೀರಾತು ನೀಡಿತ್ತು.
ಜತೆಗೆ, ಕೋವಿಡ್ ಸಾಮಗ್ರಿಗಳ ಪೂರೈಕೆ, ಲೋಕೋಪಯೋಗಿ ಗುತ್ತಿಗೆಗಳು, ಮಠಗಳಿಗೆ ಅನುದಾನ, ಶಾಲೆಗಳಿಗೆ ಮೊಟ್ಟೆ ಪೂರೈಕೆ, ರಸ್ತೆ ಕಾಮಗಾರಿಗಳಲ್ಲಿ ಶೇ 25-30 ಕಮಿಷನ್ ಪಡೆಯಲಾಗುತ್ತಿದೆ ಎಂದು ಆರೋಪಿಸಿದ್ದ ಕಾಂಗ್ರೆಸ್, ಪತ್ರಿಕೆಗಳಿಗೆ ನೀಡಿದ ಜಾಹೀರಾತಿನ ಕೊನೆಯಲ್ಲಿ ಶೇ. 40 ಕಮಿಷನ್ನ (ಬಿಜೆಪಿ) ಸರ್ಕಾರ 1.5 ಲಕ್ಷ ಕೋಟಿ ರೂ.ಗಳನ್ನು ಕಳೆದ 4 ವರ್ಷಗಳಲ್ಲಿ ಲೂಟಿ ಮಾಡಿದೆ ಎಂದು ಆರೋಪಿಸಿತ್ತು.
ಇದರ ವಿರುದ್ಧ ದೂರು ದಾಖಲಿಸಿದ್ದ ಬಿಜೆಪಿ, ಡಬಲ್ ಇಂಜಿನ್ ಸರ್ಕಾರಕ್ಕೆ ಬದಲಾಗಿ ಟ್ರಬಲ್ ಇಂಜಿನ್ ಸರ್ಕಾರ ಎಂದು ಹೇಳುವ ಮೂಲಕ ಪಕ್ಷದ ವರ್ಚಸ್ಸಿಗೆ ಕಾಂಗ್ರೆಸ್ ಹಾನಿ ಮಾಡಿದೆ. ಚುನಾವಣೆಯಲ್ಲಿ ಗೆಲುವಿಗೆ ಅಡ್ಡಿಪಡಿಸಲಾಗಿದೆ. ಕೊನೆಯಲ್ಲಿ ಕಾಂಗ್ರೆಸ್ಗೆ ಮತ ನೀಡಿ ಎಂದು ಆರೋಪಿಗಳು ಕೇಳಿದ್ದಾರೆ. ಸುಳ್ಳು ಜಾಹೀರಾತು ನೀಡಲು ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಹಾಗೂ ರಾಹುಲ್ ಗಾಂಧಿ ನೇರ ಕಾರಣವಾಗಿದ್ದಾರೆ ಎಂದು ಆಕ್ಷೇಪಿಸಿತ್ತು.
ರಾಹುಲ್ ಗಾಧಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಈ ಸುಳ್ಳು ಜಾಹೀರಾತು ಹಂಚಿಕೊಳ್ಳುವ ಮೂಲಕ ಬಿಜೆಪಿಗೆ ಮಾನಹಾನಿ ಮಾಡುವ ಪ್ರಯತ್ನ ಮಾಡಲಾಗಿದೆ. ಆದ್ದರಿಂದ, ಕಾಂಗ್ರೆಸ್ ಪಕ್ಷ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಮತ್ತು ರಾಹುಲ್ ಗಾಂಧಿ ವಿರುದ್ಧ ಐಪಿಸಿ ಸೆಕ್ಷನ್ 499 ಮತ್ತು 500ರ ಅಡಿ ಮಾನಹಾನಿ ಪ್ರಕರಣ ದಾಖಲಿಸಬೇಕು ಎಂದು ಬಿಜೆಪಿ ಖಾಸಗಿ ದೂರು ದಾಖಲಿಸಿತ್ತು.
ಈ ಪ್ರಕರಣದಲ್ಲಿ ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರು ಜಾಮೀನು ಪಡೆದುಕೊಂಡಿದ್ದು, ರಾಹುಲ್ ಗಾಂಧಿ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ಈಗಾಗಲೇ ತಡೆ ನೀಡಿದೆ.
Related Articles
Thank you for your comment. It is awaiting moderation.
Comments (0)