ಕೊಲೆ ಪ್ರಕರಣ ಸಿಐಡಿಗೆ ವರ್ಗಾವಣೆಗೊಂಡ ಬಳಿಕ ತನಿಖೆಗೆ ಹಾಜರಾಗಲು ನೋಟಿಸ್ ನೀಡಿಲ್ಲ; ಬೈರತಿ ಬಸವರಾಜ್ ವಕೀಲರ ವಾದ

ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವು ಅಲಿಯಾಸ್ ಶಿವಕುಮಾರ್ ಕೊಲೆ ಪ್ರಕರಣ ಸಿಐಡಿಗೆ ವರ್ಗಾವಣೆಯಾದ ಬಳಿಕ ತನಿಖೆಗೆ ಹಾಜರಾಗುವಂತೆ ಸೂಚಿಸಿ ಶಾಸಕ ಬೈರತಿ ಬಸವರಾಜ್ ಅವರಿಗೆ ಒಮ್ಮೆಯೂ ನೋಟಿಸ್ ಜಾರಿ ಮಾಡಿಲ್ಲ ಎಂದು ಬಸವರಾಜ್ ಪರ ವಕೀಲರು ಹೈಕೋರ್ಟ್‌‌ ಮುಂದೆ ವಾದ ಮಂಡಿಸಿದರು.

ಕೊಲೆ ಪ್ರಕರಣದಲ್ಲಿ 5ನೇ ಆರೋಪಿಯಾಗಿರುವ ಬಿ.ಎ. ಬಸವರಾಜ ಅಲಿಯಾಸ್ ಬೈರತಿ ಬಸವರಾಜ್ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಎಸ್‌. ಸುನೀಲ್‌ ದತ್‌ ಯಾದವ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ‌ ಮಂಗಳವಾರ ವಿಚಾರಣೆ ನಡೆಸಿತು.

ಬಸವರಾಜ್‌ ಪರ ಹಿರಿಯ ವಕೀಲ ಸಂದೇಶ್‌ ಚೌಟ ವಾದ ಮಂಡಿಸಿ, ಪ್ರಕರಣದ ತನಿಖೆಯನ್ನು 2025ರ ಜುಲೈ 24ರಂದು ಸಿಐಡಿ ಪೊಲೀಸರಿಗೆ ವರ್ಗಾಯಿಸಲಾಗಿದೆ. ಅಲ್ಲಿಂದ ಈವರೆಗೂ ತನಿಖೆಗೆ ಹಾಜರಾಗಲು ಅರ್ಜಿದಾರರಿಗೆ ತನಿಖಾಧಿಕಾರಿಗಳು ನೋಟಿಸ್‌ ನೀಡಿಲ್ಲ. ಅದಕ್ಕೂ ಮುನ್ನ ಜುಲೈ 19 ಮತ್ತು 23ರಂದು ಭಾರತಿನಗರ ಠಾಣೆ ಪೊಲೀಸರ ಮುಂದೆ ಬಸವರಾಜ್‌ ಹಾಜರಾಗಿ ಹೇಳಿಕೆ ದಾಖಲಿಸಿದ್ದರು. ಆ ಹೇಳಿಕೆಗಳು ಸುಳ್ಳು ಎನ್ನುವುದು ನಿರೀಕ್ಷಣಾ ಜಾಮೀನು ರದ್ದತಿಗೆ ಕೋರಲು ಆಧಾರವಾಗುವುದಿಲ್ಲ ಎಂದು ಪ್ರತಿಪಾದಿಸಿದರು.

ಮುಂದುವರಿದು, ಅರ್ಜಿದಾರರನ್ನು ಬಂಧಿಸಿ ವಿಚಾರಣೆ ನಡೆಸುವ ಅಗತ್ಯವಿದೆ ಎನ್ನುವ ಸಿಐಡಿ ತನಿಖಾಧಿಕಾರಿಗಳು, ತನಿಖೆಗೆ ಅವರು ಸಹಕರಿಸುತ್ತಿಲ್ಲ, ಸಾಕ್ಷಿಗಳ ಮೇಲೆ ಪ್ರಭಾವ ಬೀರುತ್ತಿದ್ದಾರೆ, ಸಾಕ್ಷ್ಯಧಾರಗಳನ್ನು ನಾಶಪಡಿಸಲು ಯತ್ನಿಸಿದ್ದಾರೆ, ತನಿಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ಕಾರಣಗಳನ್ನು ನೀಡುತ್ತಿಲ್ಲ. ಅರ್ಜಿದಾರರು ತನಿಖೆಗೆ ಸಹಕರಿಸಲು ಸಿದ್ಧವಿರುವುದಾಗಿ ಪದೇಪದೆ ಹೇಳಿದ್ದಾರೆ. ಅದರ ಭಾಗವಾಗಿಯೇ ಎಫ್‌ಐಆರ್‌ ರದ್ದತಿಗೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸಹ ಹಿಂಪಡೆದುಕೊಂಡಿದ್ದಾರೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಪ್ರಕರಣದ ಇತರ ಆರೋಪಿಗಳ ವಿರುದ್ಧ ತನಿಖೆ ನಡೆಸಿ ದೋಷಾರೋಪ ಪಟ್ಟಿ ಸಲ್ಲಿಸಿರುವ ಸಿಐಡಿ ತನಿಖಾಧಿಕಾರಿಗಳು, ಬಸವರಾಜ್‌ ವಿರುದ್ಧ ಮಾತ್ರ ದೋಷಾರೋಪ ಪಟ್ಟಿ ಸಲ್ಲಿಸಿಲ್ಲ. ಅವರ ವಿರುದ್ಧದ ತನಿಖೆ ನಡೆಸಲಾಗುವುದು ಎಂದಷ್ಟೆ ಹೇಳಿದ್ದಾರೆ. ತನಿಖೆಗೆ ಹೈಕೋರ್ಟ್‌ ಯಾವುದೇ ತಡೆಯಾಜ್ಞೆ ನೀಡದಿದ್ದರೂ, ತನಿಖೆಗೆ ಹಾಜರಾಗಲು ತನಿಖಾಧಿಕಾರಿಗಳು ಬಸವರಾಜ್‌ಗೆ ನೋಟಿಸ್‌ ನೀಡಿಲ್ಲ. ಈಗ ಮಾತ್ರ ಬಂಧಿಸಿ ವಿಚಾರಣೆ ನಡೆಸುವ ಅಗತ್ಯವಿದೆ ಎಂದು ಹೇಳುತ್ತಿರುವುದು ನ್ಯಾಯಸಮ್ಮತವಲ್ಲ ಎಂದು ಆಕ್ಷೇಪಿಸಿದರು.

ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಸವರಾಜ್‌ ಭಾಗಿಯಾಗಿಲ್ಲ. ಅವರು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬುದಕ್ಕೆ ತನಿಖಾಧಿಕಾರಿಗಳು ದಾಖಲೆ ತೋರಿಸುತ್ತಿಲ್ಲ. ಅರ್ಜಿದಾರರು ತನಿಖೆಗೆ ಸಹಕರಿಸಲು ಸಿದ್ಧರಾಗಿರುವ ಕಾರಣ ಪರಿಗಣಿಸಿ ತನಿಖೆಗೆ ತಪ್ಪದೇ ಹಾಜರಾಗಬೇಕು ಹಾಗೂ ಸೀಮಿತ ಅವಧಿಗೆ ಕಸ್ಟಡಿಗೆ ಒಳಗಾಗಬಹುದು ಎಂಬಂತಹ ಷರತ್ತುಗಳನ್ನು ವಿಧಿಸಿ ನಿರೀಕ್ಷಣಾ ಜಾಮೀನು ನೀಡಬಹುದು ಎಂದರು.

ವಾದ ಆಲಿಸಿದ ನ್ಯಾಯಪೀಠ, ಅರ್ಜಿ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿತು.

Related Articles

Comments (0)

Leave a Comment