ಋತುಚಕ್ರದ ರಜೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಬೆಂಗಳೂರು ಎಂಪ್ಲಾಯರ್ಸ್ ಅಸೋಸಿಯೇಷನ್; ಸರ್ಕಾರಕ್ಕೆ ನೋಟಿಸ್
- by Ramya B T
- April 8, 2026
- 5 Views
ಬೆಂಗಳೂರು: ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನಸಹಿತ ರಜೆ ನೀಡುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆ ಪ್ರಶ್ನಿಸಿ ಹೈಕೋರ್ಟ್ಗೆ ಮತ್ತೊಂದು ಅರ್ಜಿ ಸಲ್ಲಿಕೆಯಾಗಿದೆ.
ಸರ್ಕಾರದ ಅಧಿಸೂಚನೆ ಪ್ರಶ್ನಿಸಿ ಈಗಾಗಲೇ ಕರ್ನಾಟಕ ಎಂಪ್ಲಾಯರ್ಸ್ ಅಸೋಸಿಯೇಷನ್, ಬೆಂಗಳೂರು ಹೋಟೆಲ್ಸ್ ಅಸೋಸಿಯೇಷನ್ ಹಾಗೂ ವಿವಿಧ ಖಾಸಗಿ ವಲಯಗಳಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಉದ್ಯೋಗಿಗಳು ಅರ್ಜಿ ಸಲ್ಲಿಸಿದ್ದಾರೆ. ಇದೀಗ ಬೆಂಗಳೂರು ಎಂಪ್ಲಾಯರ್ಸ್ ಅಸೋಸಿಯೇಷನ್ ಸಹ ಹೈಕೋರ್ಟ್ ಮೆಟ್ಟಿಲೇರಿದೆ.
ಮತ್ತೊಂದೆಡೆ, ಸರ್ಕಾರದ ಕ್ರಮ ಸಮರ್ಥಿಸಿ ಹಾಗೂ ಉದ್ಯೋಗಸ್ಥ ಮಹಿಳೆಯರ ಪರವಾಗಿ ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ್ (ಎಐಸಿಸಿಟಿಯು), ಆಲ್ ಇಂಡಿಯಾ ಡೆಮಾಕ್ರಟಿಕ್ ಓಮೆನ್ಸ್ ಅಸೋಸಿಯೇಷನ್ (ಎಐಡಿಡಬ್ಲ್ಯುಎ) ಸಂಘಟನೆಗಳು ಹಾಗೂ 15 ಮಂದಿ ಮಹಿಳಾ ವಕೀಲರು ಮಧ್ಯಂತರ ಅರ್ಜಿಗಳನ್ನು ಸಲ್ಲಿಸಿದ್ದಾರೆ.
ಈ ಎಲ್ಲ ಅರ್ಜಿಗಳು ನ್ಯಾಯಮೂರ್ತಿ ಅನಂತ ರಾಮನಾಥ ಹೆಗ್ಡೆ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿದ್ದವು.
ಅರ್ಜಿದಾರರು, ಸರ್ಕಾರ ಹಾಗೂ ಮಧ್ಯಂತರ ಅರ್ಜಿದಾರರ ಪರ ವಕೀಲರ ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಎಲ್ಲ ಮಧ್ಯಂತರ ಅರ್ಜಿಗಳನ್ನು ವಿಚಾರಣೆಗೆ ಅಂಗೀಕರಿಸಿತಲ್ಲದೆ, ಬೆಂಗಳೂರು ಎಂಪ್ಲಾಯರ್ಸ್ ಅಸೋಸಿಯೇಷನ್ ಸಲ್ಲಿಸಿರುವ ಅರ್ಜಿ ಸಂಬಂಧ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಏಪ್ರಿಲ್ 15ಕ್ಕೆ ಮುಂದೂಡಿತು.
Related Articles
Thank you for your comment. It is awaiting moderation.



Comments (0)