ಕಾಲ್ತುಳಿತದಿಂದ 11 ಜನರ ಸಾವು; ಮುಚ್ಚಿದ ಲಕೋಟೆಯಲ್ಲಿ ವಸ್ತುಸ್ಥಿತಿ ವರದಿ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಜೂನ್ 4ರಂದು ಸಂಭವಿಸಿದ ಕಾಲ್ತುಳಿತದಿಂದಾಗಿ 11 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದ ವಸ್ತುಸ್ಥಿತಿ ವರದಿಯನ್ನು ಜೂನ್ 12ರಂದು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

ಕಾಲ್ತುಳಿತ ಪ್ರಕರಣ ಸಂಬಂಧ ಮಾಧ್ಯಮಗಳ ವರದಿ ಆಧರಿಸಿ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮಂಗಳವಾರ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ. ಕಾಮೇಶ್ವರ ರಾವ್‌ ಹಾಗೂ ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ನಿರ್ದೇಶನ‌ ನೀಡಿತು.

ಇದಕ್ಕೂ ಮುನ್ನ ಅರ್ಜಿ ವಿಚಾರಣೆಗೆ ಬರುತ್ತಿದ್ದಂತೆ ಅಡ್ವೊಕೇಟ್‌ ಜನರಲ್‌ ಕೆ. ಶಶಿಕಿರಣ್‌ ಶೆಟ್ಟಿ, ಅರ್ಜಿಗೆ ನಮ್ಮ ಪ್ರತಿಕ್ರಿಯೆ ಸಲ್ಲಿಸಲಾಗಿಲ್ಲ. ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕೆಲ್‌ ಕುನ್ಹಾ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚಿಸಲಾಗಿದ್ದು, ವರದಿ ನೀಡಲು 1 ತಿಂಗಳ ಕಾಲಮಿತಿ ನಿಗದಿಪಡಿಸಲಾಗಿದೆ. ಬೆಂಗಳೂರು ಪೊಲೀಸ್‌ ಆಯುಕ್ತರು ಸೇರಿ ಐವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಆರ್‌ಸಿಬಿ, ಡಿಎನ್‌ಎ ಅಧಿಕಾರಿಗಳ ಜಾಮೀನು ಅರ್ಜಿಗಳು ಬಾಕಿ ಇವೆ. ಈ ಅರ್ಜಿಯಲ್ಲಿ ಸರ್ಕಾರ ಹೇಳುವ ಅಂಶಗಳನ್ನು ಅವರು ಜಾಮೀನು ಅರ್ಜಿ ವಿಚಾರಣೆಯಲ್ಲಿ ಬಳಕೆ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಆಗ ನ್ಯಾಯಪೀಠ, ನ್ಯಾಯಾಲಯದ ನಿರ್ದೇಶನಕ್ಕೆ ನೀವು ಪ್ರತಿಕ್ರಿಯೆ ಸಲ್ಲಿಸುವುದಿಲ್ಲ ಎಂದು ಹೇಳುತ್ತಿರುವಿರೇ ಎಂದು ಪ್ರಶ್ನಿಸಿತು. ಅದಕ್ಕೆ ಎಜಿ, ಪ್ರಕರಣದಲ್ಲಿ ಕೆಲ ವಿಚಾರಗಳಿವೆ, ಈ ಅರ್ಜಿಯ ವಿಚಾರಣೆಯನ್ನು ನಾಳೆಗೆ ಮುಂದೂಡಬೇಕು ಎಂದು ಕೋರಿದರು. ನ್ಯಾಯಪೀಠ, ಸಮಸ್ಯೆ ಏನಿದೆ? ಎಂದು ಮತ್ತೊಮ್ಮೆ ಪ್ರಶ್ನಿಸಿತು. ಅದಕ್ಕೆ ಪ್ರತಿಕ್ರಿಯಿಸಿದ ಎಜಿ, ಮುಕ್ತ ನ್ಯಾಯಾಲಯದಲ್ಲಿ ಹೇಳುವುದರಿಂದ ಪೂರ್ವಾಗ್ರಹ ಉಂಟಾಗಲಿದೆ. ಸ್ವತಂತ್ರ ವಿಚಾರಣಾ ಆಯೋಗದ ವರದಿ ಕೈಸೇರಲಿ. ಇದು ಒಂದು ತಿಂಗಳ ವಿಚಾರವಷ್ಟೇ ಎಂದರು. ಆಗ ನ್ಯಾಯಪೀಠ, ಮುಚ್ಚಿದ ಲಕೋಟೆಯಲ್ಲಿ ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿತು.

ಈ ಮಧ್ಯೆ, ವಿಧಾನ ಪರಿಷತ್‌ನ ಮಾಜಿ ಸದಸ್ಯರೊಬ್ಬರು ಅರ್ಜಿಯಲ್ಲಿ ಮಧ್ಯಪ್ರವೇಶಿಸಲು ಕೋರುತ್ತಿದ್ದಾರೆ ಎಂದು ವಕೀಲ ದಿವಾಕರ್ ನ್ಯಾಯಾಲಯಕ್ಕೆ ತಿಳಿಸಿದರು. ಮತ್ತೊಬ್ಬ ವಕೀಲರು, ಆಕ್ಷೇಪಣೆ ಸಲ್ಲಿಸಲು ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಗೆ (ಕೆ‌ಎಸ್‌ಸಿಎ) ನೋಟಿಸ್‌ ಜಾರಿ ಮಾಡಬೇಕು. ಅವರೇ ನಿಜವಾದ ದೋಷಿಗಳು ಎಂದರು. ಹಿರಿಯ ವಕೀಲ ಎಸ್‌.ಎಸ್‌. ನಾಗಾನಂದ್‌ ಅವರು, ಪ್ರಕರಣದಲ್ಲಿ ಸಂತ್ರಸ್ತರಾಗಿರುವವರೂ ವಾದ ಮಂಡಿಸಲು ಬಯಸಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ವಾದ ಆಲಿಸಿದ ನ್ಯಾಯಪೀಠ, ಅಡ್ವೊಕೇಟ್ ಜನರಲ್ ಅವರು ಗುರುವಾರ ವಸ್ತುಸ್ಥಿತಿ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನೇರವಾಗಿ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಆದೇಶಿಸಿತಲ್ಲದೆ, ಮಧ್ಯಪ್ರವೇಶಕ್ಕೆ ಕೋರಿರುವ ಅರ್ಜಿಗಳ ಸಂಬಂಧ ಈಗಲೇ ಏನನ್ನೂ ಹೇಳುವುದಿಲ್ಲ. ಸರ್ಕಾರ ಪ್ರತಿಕ್ರಿಯೆ ಸಲ್ಲಿಸಲಿ, ಆನಂತರ, ಮಧ್ಯಪ್ರವೇಶಿಸುವಿಕೆ ಅರ್ಜಿಗಳನ್ನು ಪರಿಶೀಲಿಸಲಾಗುವುದು ಎಂದು ತಿಳಿಸಿ, ವಿಚಾರಣೆಯನ್ನು ಗುರುವಾರಕ್ಕೆ (ಜೂನ್ 12) ಮುಂದೂಡಿತು.

Related Articles

Comments (0)

Leave a Comment