ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಅವಘಡ; ಸರ್ಕಾರಕ್ಕೆ ಹೈಕೋರ್ಟ್ ಕೇಳಿದ ಪ್ರಶ್ನೆಗಳೇನು?
- by Ramya B T
- June 5, 2025
- 70 Views

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ರಾಜ್ಯ ಸರ್ಕಾರದ ಮುಂದೆ ಹಲವು ಪ್ರಶ್ನೆಗಳನ್ನಿಟ್ಟಿರುವ ಹೈಕೋರ್ಟ್, ಆ ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡಿ ಜೂನ್ 10ರಂದು ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಿದೆ.
ಗುರುವಾರ ಪ್ರಕರಣದ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ. ಕಾಮೇಶ್ವರ ರಾವ್ ನೇತೃತ್ವದ ವಿಭಾಗೀಯ ನ್ಯಾಯಪೀಠ, ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಜೂನ್ 4ರಂದು ದುರಾದೃಷ್ಟವಶಾತ್ ಕಾಲ್ತುಳಿತ ಸಂಭವಿಸಿ 11 ಜನ ಮೃತಪಟ್ಟ ಬಗ್ಗೆ ಮಾಧ್ಯಮಗಳು ವರದಿ ಮಾಡಿವೆ. ಈ ದುರಂತಕ್ಕೆ ದಾರಿಮಾಡಿಕೊಟ್ಟ ಕಾರಣಗಳು, ದುರಂತ ತಡೆಯಬಹುದೇ, ಭವಿಷ್ಯದಲ್ಲಿ ಇಂತಹ ದುರಂತ ತಡೆಗಟ್ಟಲು ಯಾವ ಪರಿಹಾರ ಕ್ರಮ ತೆಗೆದುಕೊಳ್ಳಬೇಕು? ಎಂಬುದನ್ನು ಕಂಡುಕೊಳ್ಳಲು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲು ನಿರ್ಧರಿಸಲಾಗಿದೆ ಎಂದು ತಿಳಿಸಿತಲ್ಲದೆ, ಈ ಸಂಬಂಧ ಸ್ವಯಂ ಪ್ರೇರಿತ ರಿಟ್ ಅರ್ಜಿ ದಾಖಲಿಸುವಂತೆ ರಿಜಿಸ್ಟ್ರಿಗೆ ಆದೇಶಿಸಿತು.
ಹೈಕೋರ್ಟ್ ಕೇಳಿರುವ ಪ್ರಶ್ನೆಗಳೇನು?
ಪ್ರಕರಣ ಸಂಬಂಧ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದ ನ್ಯಾಯಪೀಠ, ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ಹಲವು ಪ್ರಶ್ನೆಗಳನ್ನು ಕೇಳಿ, ಅವುಗಳಿಗೆ ಉತ್ತರಿಸುವಂತೆ ನಿರ್ದೇಶಿಸಿದೆ.
ವಿಜಯೋತ್ಸವವನ್ನು ಯಾವಾಗ, ಯಾರು ಮತ್ತು ಯಾವ ರೀತಿಯಲ್ಲಿ ನಡೆಸಲು ನಿರ್ಧರಿಸಿದರು? ಸಂಚಾರ ನಿಯಂತ್ರಣಕ್ಕೆ ಯಾವ ಕ್ರಮ ತೆಗೆದುಕೊಳ್ಳಲಾಗಿತ್ತು? ಸಾರ್ವಜನಿಕರು/ಜನಸಂದಣಿ ನಿಯಂತ್ರಿಸಲು ಕೈಗೊಂಡಿದ್ದ ಕ್ರಮಗಳೇನು? ಸ್ಥಳದಲ್ಲಿ ಯಾವ ರೀತಿ ವೈದ್ಯಕೀಯ ಸೌಲಭ್ಯ ಮತ್ತು ಇತರ ವ್ಯವಸ್ಥೆ ಮಾಡಲಾಗಿತ್ತು? ಸಂಭ್ರಮಾಚರಣೆಯಲ್ಲಿ ಎಷ್ಟು ಜನರು ಪಾಲ್ಗೊಳ್ಳಬಹುದು ಎಂಬ ಬಗ್ಗೆ ಮುಂಚಿತವಾಗಿ ಮೌಲ್ಯಮಾಪನ ಮಾಡಲಾಗಿತ್ತೇ? ಎಂಬ ಪ್ರಶ್ನೆಗಳಿಗೆ ಹೈಕೋರ್ಟ್ ಸರ್ಕಾರದಿಂದ ಉತ್ತರ ಬಯಸಿದೆ.
ಘಟನೆಯಲ್ಲಿ ಗಾಯಗೊಂಡವರಿಗೆ ಸ್ಥಳದಲ್ಲಿ ವೈದ್ಯಕೀಯ ತಜ್ಞರು ತಕ್ಷಣವೇ ಚಿಕಿತ್ಸೆ ನೀಡಿದ್ದಾರೆಯೇ? ಇಲ್ಲದಿದ್ದರೆ ಏಕೆ? ಗಾಯಾಳುಗಳನ್ನು ಆಸ್ಪತ್ರೆಗಳಿಗೆ ಕರೆದೊಯ್ಯಲು ಎಷ್ಟು ಸಮಯ ಹಿಡಿಯಿತು? ಯಾವುದೇ ಕ್ರೀಡಾಕೂಟ ಮತ್ತು ಈ ರೀತಿಯ ಆಚರಣೆಗಳಲ್ಲಿ 50 ಸಾವಿರ ಮತ್ತು ಅದಕ್ಕಿಂತ ಹೆಚ್ಚಿನ ಜನಸಂದಣಿ ನಿರ್ವಹಿಸಲು ಎಸ್ಒಪಿ ರೂಪಿಸಲಾಗಿದೆಯೇ? ಕಾರ್ಯಕ್ರಮ ಆಯೋಜಿಸಲು ಅನುಮತಿ ಕೋರಲಾಗಿತ್ತೇ? ಎಂಬ ಪ್ರಶ್ನೆಗಳನ್ನು ಕೇಳಿರುವ ಹೈಕೋರ್ಟ್, ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡಿ ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಿದೆ.
Related Articles
Thank you for your comment. It is awaiting moderation.
Comments (0)