ಸಂಸದೆ ಪ್ರಭಾ ಮಲ್ಲಿಕಾರ್ಜುನ್‌ ಆಯ್ಕೆ ಅಸಿಂಧು ಕೋರಿದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಕಾಂಗ್ರೆಸ್‌ನ ಗ್ಯಾರಂಟಿ ಕಾರ್ಡ್‌ಗಳಲ್ಲಿ ಮತದಾರರಿಗೆ ಹಲವು ಉಚಿತ ಸೌಲಭ್ಯಗಳು ಹಾಗೂ ಹಣದ ಆಮಿಷ ಒಡ್ಡುವ ಮೂಲಕ ಚುನಾವಣಾ ಅಕ್ರಮವೆಸಗಿದ ಆರೋಪದಲ್ಲಿ ದಾವಣಗೆರೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ವಿರುದ್ಧ ಸಲ್ಲಿಸಲಾಗಿದ್ದ ಚುನಾವಣಾ ತಕರಾರು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಪ್ರಭಾ ಮಲ್ಲಿಕಾರ್ಜುನ್ ಅವರ ಆಯ್ಕೆ ಅಸಿಂಧುಗೊಳಿಸಬೇಕು ಎಂದು ಕೋರಿ ಬಿಜೆಪಿ ಪರಾಜಿತ ಅಭ್ಯರ್ಥಿ ಜಿ.ಎಸ್. ಗಾಯತ್ರಿ ಸಿದ್ದೇಶ್ವರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ಏಕಸದಸ್ಯ ನ್ಯಾಯಪೀಠ ತಿರಸ್ಕರಿಸಿದೆ.

ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯ ಭಾಗವಾಗಿದ್ದು, ಚುನಾವಣಾ ಪ್ರಣಾಳಿಕೆಯು ಪಕ್ಷದ ನೀತಿ ನಿರ್ಣವಾಗಿದೆ. ಅದು ಪ್ರತ್ಯೇಕವಾಗಿ ಅಭ್ಯರ್ಥಿಗೆ ಸಂಬಂಧಿಸಿರುವುದಿಲ್ಲ. ಮುಖ್ಯವಾಗಿ ಮತದಾರರನ್ನು ಸೆಳೆಯಲು ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಲಾಗುವ ಭರವಸೆ ಅಥವಾ ಘೋಷಣೆಗಳನ್ನು ಪ್ರಜಾಪ್ರತಿನಿಧಿ ಕಾಯ್ದೆ-1951ಎ ಸೆಕ್ಷನ್ 123(1)(ಎ)(ಬಿ) ಅಡಿ ಚುನಾವಣಾ ಅಕ್ರಮಗಳೆಂದು ಹೇಳಲಾಗದು ಎಂದು ಸಚಿವ ಜಮೀರ್ ಅಹ್ಮದ್ ವಿರುದ್ಧ ಸಲ್ಲಿಸಲಾಗಿದ್ದ ಇಂತಹದ್ದೇ ಅರ್ಜಿಯಲ್ಲಿ ನೀಡಲಾಗಿರುವ ತೀರ್ಪನ್ನು ಉಲ್ಲೇಖಿಸಿರುವ ನ್ಯಾಯಾಲಯ ಪ್ರಭಾ ಮಲ್ಲಿಕಾರ್ಜುನ್ ವಿರುದ್ಧದ ಅರ್ಜಿಯನ್ನೂ ತಿರಸ್ಕರಿಸಿದೆ.

ಚುನಾವಣಾ ತಕರಾರು ಅರ್ಜಿಗಳನ್ನು ಸಲ್ಲಿಸಿದಾಗ ಸಿಪಿಸಿ ಆರ್ಡರ್ 7, ರೂಲ್ 11(ಎ) ಹಾಗೂ ಪ್ರಜಾಪ್ರತಿನಿಧಿ ಕಾಯ್ದೆ 1951ರ ಸೆಕ್ಷನ್ 86(1)ರ ಅನ್ವಯ ಕೆಲವು ಕಾನೂನು ಪ್ರಕ್ರಿಯೆಗಳನ್ನು ಅರ್ಜಿದಾರರು ಪಾಲಿಸದಿದ್ದರೆ, ಆರಂಭಿಕ ಹಂತದಲ್ಲೇ ಚುನಾವಣಾ ತಕರಾರು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಬಹುದು. ಈ ಅಧಿಕಾರದಡಿ ಹೈಕೋರ್ಟ್ ಪ್ರಭಾ ಮಲ್ಲಿಕಾರ್ಜುನ್ ವಿರುದ್ಧದ ಅರ್ಜಿ ವಜಾಗೊಳಿಸಿ ಆದೇಶಿಸಿದೆ.

ಪ್ರಕರಣವೇನು?
ಪ್ರಭಾ ಮಲ್ಲಿಕಾರ್ಜುನ್ ಅವರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಿಸಿ ಮತದಾರರ ಮೇಲೆ ಪ್ರಭಾವ ಬೀರಿದ್ದಾರೆ. ಗ್ಯಾರಂಟಿ ಕಾರ್ಡ್‌ನಲ್ಲಿ ಹಲವು ಆಮಿಷಗಳನ್ನು ಒಡ್ಡಲಾಗಿದ್ದು, ಪ್ರಮುಖವಾಗಿ ಯುವಜನತೆಗೆ 1 ಲಕ್ಷ ರೂ. ವೇತನ, ಬಡ ಕುಟುಂಬದ ಪ್ರತಿ ಮಹಿಳೆಗೆ 1 ಲಕ್ಷ ರೂ. ಹಣ, ಸಾಲ ಮನ್ನಾ ಇನ್ನಿತರ ಸೌಲಭ್ಯಗಳ ಆಮಿಷ ಒಡ್ಡಲಾಗಿತ್ತು. ಈ ರೀತಿಯ ಚುನಾವಣಾ ಅಕ್ರಮಗಳನ್ನು ಎಸಗುವ ಮೂಲಕ 26,094 ಮತಗಳ ಅಂತರದಿಂದ ಪ್ರಭಾ ಮಲ್ಲಿಕಾರ್ಜುನ್ ಗೆದ್ದಿದ್ದಾರೆ. ಚುನಾವಣಾ ಫಲಿತಾಂಶ ಘೋಷಣೆಯಾದ ಬಳಿಕ ಮಾಧ್ಯಮಗಳಿಗೆ ಹೇಳಿಕೆ ನೀಡುವಾಗ, ತಮ್ಮ ಗೆಲುವಿಗೆ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಸಹ ಕಾರಣವಾಗಿದೆ ಎಂದು ಪ್ರಭಾ ಮಲ್ಲಿಕಾರ್ಜುನ್ ಅವರೇ ಹೇಳಿದ್ದಾರೆ. ಮತದಾರರ ಮೇಲೆ ಪ್ರಭಾವ ಬೀರಿರುವುದು ಪ್ರಜಾಪ್ರತಿನಿಧಿ ಕಾಯ್ದೆಗೆ ವಿರುದ್ಧವಾಗಿದೆ. ಆದ್ದರಿಂದ, ಅವರ ಆಯ್ಕೆ ಅಸಿಂಧು ಎಂದು ಘೋಷಿಸಬೇಕೆಂದು ಅರ್ಜಿದಾರರು ಕೋರಿದ್ದರು.

Related Articles

Comments (0)

Leave a Comment