ಲೋಕಾಯುಕ್ತ ಹೆಸರಿನಲ್ಲಿ ಸುಲಿಗೆ ಆರೋಪ; ಐಪಿಎಸ್ ಶ್ರೀನಾಥ್ ಜೋಶಿಗೆ ಜಾರಿಯಾಗಿದ್ದ ನೋಟಿಸ್ಗೆ ಹೈಕೋರ್ಟ್ ತಡೆ
- by Jagan Ramesh
- June 19, 2025
- 291 Views

ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳ ಹೆಸರಿನಲ್ಲಿ ಸರ್ಕಾರಿ ನೌಕರರಿಂದ ಹಣ ವಸೂಲಿ ಮಾಡಿದ ಆರೋಪ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಹಿರಿಯ ಐಪಿಎಸ್ ಅಧಿಕಾರಿ ಶ್ರೀನಾಥ್ ಎಂ. ಜೋಶಿ ಅವರಿಗೆ ಜಾರಿ ಮಾಡಲಾಗಿದ್ದ ನೋಟಿಸ್ಗೆ ಕರ್ನಾಟಕ ಹೈಕೋರ್ಟ್ ಗುರುವಾರ ತಡೆ ನೀಡಿದೆ.
ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಜೂನ್ 15ರಂದು ಲೋಕಾಯುಕ್ತ ಪೊಲೀಸರು ಜಾರಿ ಮಾಡಿರುವ ನೋಟಿಸ್ಗೆ ತಡೆ ಕೋರಿ ಶ್ರೀನಾಥ್ ಮಹದೇವ ಜೋಶಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಆರ್. ಕೃಷ್ಣ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.
ಅರ್ಜಿ ಕುರಿತು ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಅರ್ಜಿದಾರರಿಗೆ ನೀಡಲಾಗಿರುವ ನೋಟಿಸ್ಗೆ ತಡೆ ನೀಡಲಾಗಿದೆ. ಪ್ರಕರಣದ ಮತ್ತೊಬ್ಬ ಆರೋಪಿ ನಿಂಗಪ್ಪ ಉಲ್ಲೇಖಿಸಿರುವ ಇತರ ಅಧಿಕಾರಿಗಳ ವಿರುದ್ಧ ತನಿಖೆ ಮುಂದುವರಿಯಲಿದೆ ಎಂದು ತಿಳಿಸಿ, ವಿಚಾರಣೆಯನ್ನು ಜೂನ್ 30ಕ್ಕೆ ಮುಂದೂಡಿತು.
ಇದಕ್ಕೂ ಮುನ್ನ ಲೋಕಾಯುಕ್ತ ಪೊಲೀಸರ ಪರ ವಿಶೇಷ ಸರ್ಕಾರಿ ಅಭಿಯೋಜಕ ವೆಂಕಟೇಶ ಅರಬಟ್ಟಿ ವಾದ ಮಂಡಿಸಿ, ಪ್ರಮುಖ ಆರೋಪಿ ನಿಂಗಪ್ಪ 35 ಅಧಿಕಾರಿಗಳ ಹೆಸರುಗಳನ್ನು ಉಲ್ಲೇಖಿಸಿದ್ದಾರೆ. ಶ್ರೀನಾಥ್ ಜೋಶಿ ಅವರಿಗೆ ನೀಡಿರುವ ನೋಟಿಸ್ಗೆ ತಡೆ ನೀಡಿದರೆ ತನಿಖೆಗೆ ಸಮಸ್ಯೆಯಾಗಲಿದೆ. ಆದ್ದರಿಂದ, ತನಿಖೆಗೆ ಅನುಮತಿ ನೀಡಬೇಕು ಎಂದು ಕೋರಿದರು.
ಜೋಶಿ ಪರ ವಾದ ಮಂಡಿಸಿದ ವಕೀಲ ಸಿ.ಎನ್. ಮಹದೇಶ್ವರನ್, ಅರ್ಜಿದಾರರು ಚಿತ್ರದುರ್ಗದಲ್ಲಿ 5 ವರ್ಷಗಳ ಹಿಂದೆ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದಾಗ ನಿಂಗಪ್ಪನ ಸಹೋದ್ಯೋಗಿಯಾಗಿದ್ದರು. ಆನಂತರ, ನಿಂಗಪ್ಪಗೂ, ಅರ್ಜಿದಾರರಿಗೂ ಯಾವುದೇ ಸಂಪರ್ಕವಿಲ್ಲ. ಅರ್ಜಿದಾರರ ಸೇವಾ ದಾಖಲೆಗಳಿಗೆ ಸಮಸ್ಯೆ ಉಂಟು ಮಾಡಲು ಅವರನ್ನು ತಪ್ಪಾಗಿ ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ದೂರಿದರು.
ಆಕ್ಷೇಪವೇನು?
ಜೂನ್ 15ರಂದು ಜೋಶಿ ಅವರ ಮನೆಯಲ್ಲಿ ಶೋಧ ನಡೆಸಿ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್ಎಸ್ಎಸ್) ಸೆಕ್ಷನ್ 35(a) ಅಡಿ ನೋಟಿಸ್ ಜಾರಿ ಮಾಡಲಾಗಿದೆ. ಜೂನ್ 16ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದ್ದು, ಕಾರಣ ಬಹಿರಂಗಪಡಿಸಿಲ್ಲ. ನೋಟಿಸ್ ಜತೆಗೆ ದೂರು ಅಥವಾ ಎಫ್ಐಆರ್ ಲಗತ್ತಿಸಿಲ್ಲ. ಎಫ್ಐಆರ್ ಅಥವಾ ದೂರಿನಲ್ಲಿ ಜೋಶಿ ಹೆಸರು ಉಲ್ಲೇಖಿಸಿಲ್ಲ. ನಿಂಗಪ್ಪ ವಿರುದ್ಧ ದೂರು ದಾಖಲಾಗಿರುವುದನ್ನು ತಿಳಿಸದೇ ಜೋಶಿ ಅವರನ್ನು ತನಿಖೆಗೆ ಬರುವಂತೆ ಸೂಚಿಸಿರುವುದು ಲೋಕಾಯುಕ್ತ ಪೊಲೀಸರ ನಡೆ ಶಂಕಾಸ್ಪದವಾಗಿದೆ ಎಂದು ಅರ್ಜಿಯಲ್ಲಿ ಆಕ್ಷೇಪಿಸಲಾಗಿದೆ.
ನಿಂಗಪ್ಪಗೆ ಮಧ್ಯಂತರ ಜಾಮೀನು:
ಲೋಕಾಯುಕ್ತ ದಾಳಿ ನೆಪದಲ್ಲಿ ಸರ್ಕಾರಿ ನೌಕಕರನ್ನು ಬೆದರಿಸಿ ಹಣ ಸುಲಿಗೆ ಮಾಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಹೆಡ್ ಕಾನ್ಸ್ಟೆಬಲ್ ನಿಂಗಪ್ಪ ಸಾವಂತ್ಗೆ ಹೈಕೋರ್ಟ್ ಗುರುವಾರ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಆರೋಪಿ ನಿಂಗಪ್ಪ ಪತ್ನಿ ಜಿ.ಕೆ. ಚಂದ್ರಕಲಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ, ಆರೋಪಿಯು ತನಿಖೆಗೆ ಸಹಕರಿಸಬೇಕು, ನ್ಯಾಯಾಲಯದ ವ್ಯಾಪ್ತಿ ತೊರೆಯಬಾರದು ಎಂಬ ಷರತ್ತುಗಳನ್ನು ವಿಧಿಸಿ, ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಈ ಮಧ್ಯಂತರ ಜಾಮೀನು, ಅರ್ಜಿಯ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ ಎಂದು ಸ್ಪಷ್ಟಪಡಿಸಿರುವ ನ್ಯಾಯಾಲಯ, ಆರೋಪಿ ನಿಂಗಪ್ಪ ಮತ್ತು ಲೋಕಾಯುಕ್ತ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ಜತೆ ಮಾತನಾಡುವಂತಿಲ್ಲ ಎಂಬ ಷರತ್ತನ್ನೂ ವಿಧಿಸಿದೆ.
Related Articles
Thank you for your comment. It is awaiting moderation.
Comments (0)