ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣ; ಪ್ರಕರಣದಿಂದ ಖುಲಾಸೆ ಕೋರಿದ್ದ ಆರೋಪಿಗಳ ಅರ್ಜಿ ವಜಾ
- by Prashanth Basavapatna
- May 27, 2025
- 106 Views

ಬೆಂಗಳೂರು: ನಗರದ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2020ರ ಆಗಸ್ಟ್ 11 ರಂದು ನಡೆದಿದ್ದ ಗಲಭೆ ಪ್ರಕರಣದಿಂದ ಆರೋಪಮುಕ್ತಗೊಳಿಸುವಂತೆ ಕೋರಿ 15ಕ್ಕೂ ಅಧಿಕ ಆರೋಪಿಗಳು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಸೈಯದ್ ಅಬ್ಬಾಸ್ ಮತ್ತಿತರ ಆರೋಪಿಗಳು ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ರೀನಿವಾಸ ಹರೀಶ್ ಕುಮಾರ್ ಹಾಗೂ ಕೆ.ಎಸ್. ಹೇಮಲೇಖಾ ಅವರಿದ್ದ ವಿಭಾಗೀಯ ನ್ಯಾಯಪೀಠ, ಎಲ್ಲ ಅರ್ಜಿಗಳನ್ನು ವಜಾಗೊಳಿಸಿ ಆದೇಶಿಸಿದೆ.
ಅರ್ಜಿದಾರರು ಪ್ರಕರಣದಿಂದ ಮುಕ್ತಗೊಳಿಸಲು ಕೋರಿ ಸಲ್ಲಿಸಿದ್ದ ಅರ್ಜಿ ಕುರಿತು ವಿಚಾರಣಾ ನ್ಯಾಯಾಲಯ ಈಗಾಗಲೇ ಮಧ್ಯಂತರ ಆದೇಶ ನೀಡಿದೆ. ಆ ಆದೇಶ ಪ್ರಶ್ನಿಸಿ ಹೈಕೋರ್ಟ್ಗೆ ಕ್ರಿಮಿನಲ್ ಮೇಲ್ಮನವಿ ಸಲ್ಲಿಸಬಹುದು. ಆದರೆ, ಅರ್ಜಿದಾರರು ರಿಟ್ ಅರ್ಜಿ ಸಲ್ಲಿಸಿದ್ದು, ಅದು ವಿಚಾರಣೆಗೆ ಅರ್ಹರಾಗುವುದಿಲ್ಲ ಎಂದು ತಿಳಿಸಿದೆ.
ಆರೋಪ ಪಟ್ಟಿಯಲ್ಲಿನ ಅಂಶಗಳನ್ನು ಪರಿಶೀಲಿಸಿದರೆ, ಅರ್ಜಿದಾರರ ವಿರುದ್ಧದ ಆರೋಪಗಳು ಕಾನೂನುಬಾಹಿರ ಚಟುವಟಿಕೆ ನಿಯಂತ್ರಣ ಕಾಯ್ದೆಯ (ಯುಎಪಿಎ) ಸೆಕ್ಷನ್ 15ರ (ಸಾರ್ವಜನಿಕರಲ್ಲಿ ಭೀತಿಯನ್ನುಂಟು ಮಾಡುವ ಉದ್ದೇಶದಿಂದ ಎಸಗುವ ಕೃತ್ಯ) ವ್ಯಾಪ್ತಿಗೆ ಬರಲಿದೆ. ಅರ್ಜಿದಾರರನ್ನು ಪ್ರಕರಣದಿಂದ ಬಿಡುಗಡೆ ಮಾಡಬೇಕಾದ ಸನ್ನಿವೇಶದಲ್ಲಿ ಆರೋಪಿಸಲಾದ ಸಾಕ್ಷ್ಯಾಧಾರಗಳನ್ನು ನ್ಯಾಯಾಲಯ ಪರಿಗಣಿಸುವುದಕ್ಕೆ ಅವಕಾಶವಿರಲಿದೆ. ಆದರೆ, ಪ್ರಕರಣದಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸಬೇಕಾದ ಯಾವುದೇ ಅಪರೂಪದ ಸನ್ನಿವೇಶ ಎದುರಾಗಿರುವ ಕುರಿತು ಅರ್ಜಿದಾರರು ತೋರಿಸಿಲ್ಲ ಎಂದು ಹೈಕೋರ್ಟ್ಆದೇಶದಲ್ಲಿ ಅಭಿಪ್ರಾಯಪಟ್ಟಿದೆ.
ಪ್ರಕರಣವೇನು?
ಫೇಸ್ಬುಕ್ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಪಿ. ನವೀನ್ ಎಂಬಾತನನ್ನು ಬಂಧಿಸುವಂತೆ ಒತ್ತಾಯಿಸಿ ಒಂದು ಕೋಮಿಗೆ ಸೇರಿದ ಕೆಲವರು 2020ರ ಆಗಸ್ಟ್ 11ರ ರಾತ್ರಿ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿ ಹಿಂಸಾಚಾರ ಸೃಷ್ಟಿಸಿದ್ದರು. ಅವಹೇಳನಕಾರಿ ಪೋಸ್ಟ್ ಮಾಡಿದ್ದ ವ್ಯಕ್ತಿ ಅಂದಿನ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರ ಸಂಬಂಧಿ ಎಂದು ಆರೋಪಿಸಿ ಅವರ ಮನೆಗೂ ಬೆಂಕಿ ಹಚ್ಚಿದ್ದರಲ್ಲದೇ, ಮನೆಯಲ್ಲಿದ್ದ ಎಲ್ಲ ವಸ್ತುಗಳನ್ನು ನಾಶ ಪಡಿಸಿದ್ದರು.
ಗಲಭೆ ನಡೆಸಿದವರ ವಿರುದ್ಧ ಯುಎಪಿಎ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅಧಿಕಾರಿಗಳು ತನಿಖೆ ನಡೆಸುತ್ತಿದ್ದರು. ಪ್ರಕರಣದಿಂದ ತಮ್ಮನ್ನು ಮುಕ್ತಗೊಳಿಸಬೇಕು ಎಂದು ಕೋರಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.
Related Articles
Thank you for your comment. It is awaiting moderation.
Comments (0)