ಕಾಂಗ್ರೆಸ್ ಭವನ ಟ್ರಸ್ಟ್‌ಗೆ ಸಿಎ ಸೈಟ್ ನೋಂದಣಿ; ಸಿಯುಡಿಎ ಆಯುಕ್ತರಿಗೆ ಹೈಕೋರ್ಟ್ ತುರ್ತು ನೋಟಿಸ್‌

ಬೆಂಗಳೂರು: ಚಿಕ್ಕಬಳ್ಳಾಪುರ ನಗರದ ಸದಾಶಿವನಗರ ಬಡಾವಣೆಯ ನಾಗರಿಕ ಸೌಲಭ್ಯಕ್ಕೆ ಮೀಸಲಿಟ್ಟ (ಸಿಎ) ನಿವೇಶನವನ್ನು ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ ನೋಂದಣಿ ಮಾಡಿಕೊಟ್ಟಿರುವ ಕ್ರಮವನ್ನು ಆಕ್ಷೇಪಿಸಿ ಸಲ್ಲಿಕೆಯಾಗಿರುವ ರಿಟ್ ಅರ್ಜಿ ಸಂಬಂಧ ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ (ಸಿಯುಡಿಎ) ಆಯುಕ್ತರಿಗೆ ಹೈಕೋರ್ಟ್‌ ತುರ್ತು ನೋಟಿಸ್‌ ಜಾರಿಗೊಳಿಸಿದೆ.

ಬೆಂಗಳೂರಿನ ಕಾವಲ್‌ ಬೈರಸಂದ್ರದ ಎಂಎಂ ಬಡಾವಣೆ ನಿವಾಸಿ ಬಿ. ಕೃಷ್ಣಮೂರ್ತಿ ಸಲ್ಲಿಸಿರುವ ಅರ್ಜಿ ಕುರಿತು ಬುಧವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್. ನಟರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಎರಡನೇ ಪ್ರತಿವಾದಿಯಾದ ಸಿಯುಡಿಎ ಆಯುಕ್ತರಿಗೆ ತುರ್ತು ನೋಟಿಸ್ ಜಾರಿಗೊಳಿಸಿತಲ್ಲದೆ, ಹ್ಯಾಂಡ್ ಸಮನ್ಸ್ ಮೂಲಕ ಆಯುಕ್ತರಿಗೆ ನೋಟಿಸ್ ತಲುಪಿಸಲು ಅರ್ಜಿದಾರರಿಗೆ ಅನುಮತಿಸಿ, ವಿಚಾರಣೆ ಮುಂದೂಡಿತು.

ಇದೇ ವೇಳೆ, ವಿವಾದಿತ ನಿವೇಶನದಲ್ಲಿ ಯಾವುದೇ ನಿರ್ಮಾಣ ಚಟುವಟಿಕೆ ಕೈಗೊಳ್ಳದಂತೆ ಅಥವಾ ನಿವೇಶನದ ಸ್ವರೂಪ ಬದಲಿಸದಂತೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (ಐಎನ್‌ಸಿ) ಹಾಗೂ ಕರ್ನಾಟಕ ಪ್ರದೇಶ‌ ಕಾಂಗ್ರೆಸ್ ಸಮಿತಿಯನ್ನು (ಕೆಪಿಸಿಸಿ) ನಿರ್ಬಂಧಿಸಿ, ಅಕ್ಟೋಬರ್ 24ರಂದು ಹೊರಡಿಸಿದ್ದ ಮಧ್ಯಂತರ ಆದೇಶವನ್ನು ಮುಂದಿನ ವಿಚಾರಣೆವರೆಗೆ ವಿಸ್ತರಿಸಿತು.

ಅಕ್ಟೋಬರ್ 24ರಂದು ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಿ, ಐಎನ್‌ಸಿ ಹಾಗೂ ಕೆಪಿಸಿಸಿ ಅಧ್ಯಕ್ಷರಿಗೆ ತುರ್ತು ನೋಟಿಸ್ ಜಾರಿಗೊಳಿಸಿತ್ತು. ಜತೆಗೆ, ನಿವೇಶನದಲ್ಲಿ ಯಾವುದೇ ನಿರ್ಮಾಣ ಕೈಗೊಳ್ಳದಂತೆ ಮಧ್ಯಂತರ ಆದೇಶ ಮಾಡಿತ್ತು.

ಅರ್ಜಿದಾರರ ಆಕ್ಷೇಪವೇನು?
ಚಿಕ್ಕಬಳ್ಳಾಪುರ ತಾಲೂಕಿನ ಅನಕನೂರು ಗ್ರಾಮದಲ್ಲಿ ಸದಾಶಿವನಗರ ಬಡಾವಣೆ ನಿರ್ಮಾಣಕ್ಕೆ ರಸ್ತೆ, ಉದ್ಯಾನ ಮತ್ತು ನಾಗರಿಕ ಸೌಲಭ್ಯ ನಿವೇಶನ ಜಾಗ ಮೀಸಲಿಡಬೇಕೆಂಬ ಷರತ್ತಿನೊಂದಿಗೆ ಪ್ರಾಧಿಕಾರವು 2025ರ ಅಕ್ಟೋಬರ್ 3ರಂದು ಸಂಭಾವ್ಯ ಅನುಮೋದನೆ ನೀಡಿತ್ತು. 3,404.26 ಚದರ ಮೀಟರ್‌ ಅನ್ನು ಸಿಎ ನಿವೇಶನಕ್ಕೆ ಹಾಗೂ 20,467.20 ಚ. ಮೀ. ಜಾಗವನ್ನು ಉದ್ಯಾನ/ಮುಕ್ತ ಪ್ರದೇಶಕ್ಕಾಗಿ ಪ್ರಾಧಿಕಾರಕ್ಕೆ ಬಿಟ್ಟುಕೊಟ್ಟು ಭೂ ಮಾಲೀಕರು ಕ್ರಯ ಮಾಡಿಕೊಟ್ಟಿದ್ದರು. ಉದ್ಯಾನ, ಸಿಎ ಸೈಟ್‌ ಮತ್ತು ರಸ್ತೆಗಳಿಗೆ ಮೀಸಲಿಟ್ಟ ಜಾಗವನ್ನು ತನ್ನ ಸುಪರ್ದಿಯಲ್ಲಿಟ್ಟುಕೊಂಡು ಪ್ರಾಧಿಕಾರವು ಸದಾಶಿವನಗರ ಬಡಾವಣೆಗೆ 2025ರ ಫೆಬ್ರವರಿ 7ರಂದು ಅಂತಿಮ ಅನುಮೋದನೆ ನೀಡಿ ಆದೇಶಿಸಿತ್ತು ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

ಆದರೆ, ಪ್ರಾಧಿಕಾರವು 3,404.26 ಚ. ಮೀ. ವಿಸ್ತೀರ್ಣದ ಸಿಎ ನಿವೇಶನವನ್ನು 2025ರ ಜುಲೈ 1ರಂದು ಕಾಂಗ್ರೆಸ್‌ ಭವನ ಟ್ರಸ್ಟ್‌ ಹೆಸರಿಗೆ ಮಾರಾಟ ಮಾಡಿದೆ. ಆ ಕುರಿತು ಶುದ್ಧಕ್ರಯ ನೋಂದಣಿ ಮಾಡಿಕೊಟ್ಟಿದೆ. ರಾಜಕೀಯ ಪಕ್ಷದ ಕಚೇರಿಗೆ ಭೂಮಿ ಮಂಜೂರು ಮಾಡಿರುವುದು ಕರ್ನಾಟಕ ನಗರ ಅಭಿವೃದ್ಧಿ ಪ್ರಾಧಿಕಾರಗಳ ಕಾಯ್ದೆ-1987ರ ಮತ್ತು ಕರ್ನಾಟಕ ನಗರಾಭಿವೃದ್ಧಿ (ನಾಗರಿಕ ಸೌಲಭ್ಯ ನಿವೇಶನಗಳ ಮಂಜೂರಾತಿ) ಅಧಿನಿಯಮಗಳು-1991ರ ಮತ್ತು ಸಾರ್ವಜನಿಕ ನಂಬಿಕೆ ತತ್ವಕ್ಕೆ ವಿರುದ್ಧವಾಗಿದೆ ಎಂದು ಅರ್ಜಿಯಲ್ಲಿ ಆಕ್ಷೇಪಿಸಲಾಗಿದೆ.

ಸಾರ್ವಜನಿಕ ಉದ್ಯಾನ, ಶಾಲೆ ಅಥವಾ ಸರ್ಕಾರಿ ಸೇವೆಗಳಿಗೆ ಮೀಸಲಿಟ್ಟಿರುವ ಜಾಗವನ್ನು ಖಾಸಗಿ ವ್ಯಕ್ತಿಗಳ ಬಳಕೆಗೆ ವರ್ಗಾಯಿಸಿರುವುದು ಅಕ್ರಮ ಮತ್ತು ರಾಜ್ಯದ ಮೇಲೆ ಸಾರ್ವಜನಿಕರು ಇಟ್ಟಿರುವ ನಂಬಿಕೆ-ವಿಶ್ವಾಸವನ್ನು ಬುಡಮೇಲು ಮಾಡುವುದಾಗಿದೆ. ಆದ್ದರಿಂದ, ಸಿಎ ನಿವೇಶನವನ್ನು ಕಾಂಗ್ರೆಸ್ ಭವನ ಟ್ರಸ್ಟ್‌ಗೆ ನೋಂದಣಿ ಮಾಡಿರುವ ಪ್ರಾಧಿಕಾರದ ಕ್ರಮವನ್ನು ರದ್ದುಪಡಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

Related Articles

Comments (0)

Leave a Comment