ವಿಧಾನ ಪರಿಷತ್ ಉಪ ಕಾರ್ಯದರ್ಶಿ ಕೆ.ಜೆ. ಜಲಜಾಕ್ಷಿ ಅಮಾನತು ಆದೇಶ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ಸಂವಿಧಾನ ದಿನದ ಅಂಗವಾಗಿ ವಿಧಾನಪರಿಷತ್ತಿನ ಸಚಿವಾಲಯದಲ್ಲಿ 2024ರ ನವೆಂಬರ್ 26ರಂದು ಆಯೋಜಿಸಿದ್ದ ಸಂವಿಧಾನ ಪೀಠಿಕೆ ಓದು ಕಾರ್ಯಕ್ರಮದ ವೇಳೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರ ಇರಿಸದ ಆರೋಪದಲ್ಲಿ ಪರಿಷತ್ತಿನ ಉಪ ಕಾರ್ಯದರ್ಶಿ ಕೆ.ಜೆ. ಜಲಜಾಕ್ಷಿ ಅವರನ್ನು ಅಮಾನತುಗೊಳಿಸಿ ವಿಧಾನಪರಿಷತ್ತಿನ ಕಾರ್ಯದರ್ಶಿ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.

ಅಮಾನತು ಆದೇಶ ರದ್ದು ಕೋರಿ ಕೆ.ಜೆ. ಜಲಜಾಕ್ಷಿ ಸಲ್ಲಿಸಿದ್ದ ಅರ್ಜಿಯನ್ನು ಮಂಗಳವಾರ ಪುರಸ್ಕರಿಸಿರುವ ನ್ಯಾಯಮೂರ್ತಿ ಎಚ್.ಟಿ. ನರೇಂದ್ರಪ್ರಸಾದ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ಮಾಡಿದೆ.

ಘಟನೆ ನಡೆದ 7 ತಿಂಗಳ ಬಳಿಕ ಅರ್ಜಿದಾರರನ್ನು ಅಮಾನತುಗೊಳಿಸಲಾಗಿದೆ. ಅವರ ವಿರುದ್ಧ ಇಲಾಖಾ ವಿಚಾರಣೆ ಪ್ರಗತಿಯಲ್ಲಿದೆ. ಒಂದು ವೇಳೆ ಅರ್ಜಿದಾರರ ಅಮಾನತು ಆದೇಶ ತೆರವು ಮಾಡಿದರೆ ಅವರು ಸಾಕ್ಷಿಗಳನ್ನು ತಿರುಚುತ್ತಾರೆ ಎಂದೆನಿಸುವುದಿಲ್ಲ. ಅರ್ಜಿದಾರರು ತಪ್ಪು ಮಾಡಿದ್ದಾರೋ, ಇಲ್ಲವೋ ಎಂಬ ವಿಚಾರ ಇಲಾಖಾ ವಿಚಾರಣೆಯಿಂದ ಹೊರಬರಬೇಕಿದೆ. ಮೇಲ್ನೋಟಕ್ಕೆ ಅಮಾನತಿಗೆ ಬಲವಾದ ಸಾಕ್ಷ್ಯಾಧಾರಗಳು ಕಾಣುತ್ತಿಲ್ಲ ಎಂದಿರುವ ನ್ಯಾಯಾಲಯ, ಕೆ.ಜೆ. ಜಲಜಾಕ್ಷಿ ಅವರನ್ನು ಅಮಾನತುಗೊಳಿಸಿ ಜುಲೈ 4ರಂದು ಪರಿಷತ್ ಕಾರ್ಯದರ್ಶಿ ಹೊರಡಿಸಿದ್ದ ಆದೇಶವನ್ನು ರದ್ದುಪಡಿಸಿದೆ.

ಅರ್ಜಿದಾರರ ವಾದವೇನು?
ಸಂವಿಧಾನ ಪೀಠಿಕೆ ಓದು ಕಾರ್ಯಕ್ರಮಕ್ಕಾಗಿ ಹೊರಡಿಸಲಾಗಿದ್ದ ಸುತ್ತೋಲೆಯಲ್ಲಿ ಅಂಬೇಡ್ಕರ್ ಅವರ ಫೋಟೋ ಹಾಕುವ ಬಗ್ಗೆ ನಿರ್ದಿಷ್ಟವಾಗಿ ಹೇಳಿರಲಿಲ್ಲ. ಶಿಷ್ಠಾಚಾರ ಉಲ್ಲಂಘನೆ, ಕರ್ತವ್ಯಲೋಪ ಆಗಿರುವ ಬಗ್ಗೆ ನೀಡಲಾಗಿದ್ದ ನೋಟಿಸ್‌ಗೆ ಅರ್ಜಿದಾರರು ವಿವರವಾಗಿ ಉತ್ತರಿಸಿದ್ದಾರೆ. ಕಾರ್ಯಕ್ರಮದ ಆಯೋಜಕರು ತಾವಲ್ಲ, ಅದಕ್ಕೆ ತಾವು ಹೊಣೆಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸಭಾಪತಿಯವರು ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳಿ ಎಂದು ಎಚ್ಚರಿಕೆ ನೀಡಿ ಪ್ರಕರಣ ಮುಕ್ತಾಯಗೊಳಿಸಿದ್ದರು. ಆದರೆ, ಕೆಲವು ಸಂಘಟನೆಗಳು ಜುಲೈ 3ರಂದು ದೂರು ನೀಡಿ ಒತ್ತಡ ತಂದ ಹಿನ್ನೆಲೆಯಲ್ಲಿ ಅಮಾನತುಗೊಳಿಸಲಾಗಿದೆ. ಒಂದು ವರ್ಷದಲ್ಲಿ ಅರ್ಜಿದಾರರಿಗೆ ಬಡ್ತಿ ಸಿಗುವ ಸಾಧ್ಯತೆಯಿದೆ. ಅದನ್ನು ತಡೆಯಲು ಈ ರೀತಿ ಮಾಡಲಾಗಿದೆ. ಆದ್ದರಿಂದ, ಅಮಾನತು ಆದೇಶ ರದ್ದುಪಡಿಸಬೇಕು ಎಂದು ಕೆ.ಜೆ. ಜಲಜಾಕ್ಷಿ ಪರ ವಕೀಲರು ವಿಚಾರಣೆ ವೇಳೆ ನ್ಯಾಯಪೀಠಕ್ಕೆ ಮನವಿ ಮಾಡಿದ್ದರು.

ರಾಜ್ಯ ಸರ್ಕಾರದ ಪರ ವಕೀಲರು ವಾದ ಮಂಡಿಸಿ, ಸಂವಿಧಾನ ದಿನದಂದು ಶಿಷ್ಠಾಚಾರ ಪಾಲಿಸುವ ಕುರಿತು ಸರ್ಕಾರ ಸುತ್ತೋಲೆ ಹೊರಡಿಸಿದೆ. ಇದನ್ನು ಪಾಲಿಸದೇ ಇರುವುದರಿಂದ ಜಲಜಾಕ್ಷಿ ಅವರನ್ನು ಅಮಾನತು ಮಾಡಲಾಗಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದ್ದರು.

Related Articles

Comments (0)

Leave a Comment