ನುಗು ಅಭಯಾರಣ್ಯ ಮೂಲಕ ಜಮೀನಿಗೆ ತೆರಳಲು ರಾಣಾ ಜಾರ್ಜ್‌ಗೆ ಅನುಮತಿಸಿ; ಸರ್ಕಾರಕ್ಕೆ ಹೈಕೋರ್ಟ್ ಆದೇಶ

ಬೆಂಗಳೂರು: ಮೈಸೂರು ಜಿಲ್ಲೆ ಎಚ್‌.ಡಿ. ಕೋಟೆ ತಾಲೂಕಿನ ಸರಗೂರು ಹೋಬಳಿಯ ಶಂಬುಗೌಡನಹಳ್ಳಿ ಮತ್ತು ಲಕ್ಕಸೋಗೆ ಗ್ರಾಮಗಳಲ್ಲಿರುವ ತಮ್ಮ ಖಾಸಗಿ ಜಮೀನಿಗೆ ನುಗು ವನ್ಯಜೀವಿ ಅಭಯಾರಣ್ಯದ ರಸ್ತೆ ಮೂಲಕ ಸಂಚರಿಸಲು ಇಂಧನ ಸಚಿವ ಕೆ.ಜೆ. ಜಾರ್ಜ್‌ ಪುತ್ರ ರಾಣಾ ಜಾರ್ಜ್‌ ಅವರಿಗೆ ಕಾನೂನು ಪ್ರಕಾರ ಅನುಮತಿ ನೀಡುವಂತೆ ಅರಣ್ಯ ಇಲಾಖೆಗೆ ಹೈಕೋರ್ಟ್‌ ಆದೇಶಿಸಿದೆ.

ಇದೇ ವೇಳೆ, ಜಮೀನಿಗೆ ತೆರಳುವಾಗ ವನ್ಯಜೀವಿ ತಾಣದಲ್ಲಿನ ಸಸ್ಯ ಮತ್ತು ಪ್ರಾಣಿ ಸಂಕುಲಕ್ಕೆ ಯಾವುದೇ ರೀತಿಯಲ್ಲಿ ಹಾನಿ ಮಾಡದಂತೆ ರಾಣಾ ಜಾರ್ಜ್‌ಗೆ ಹೈಕೋರ್ಟ್ ಷರತ್ತು ವಿಧಿಸಿದೆ.

ನುಗು ಅಭಯಾರಣ್ಯದಲ್ಲಿ ಹಾದು ಹೋಗುವ ರಸ್ತೆ ಬಳಸದಂತೆ ನಿರ್ಬಂಧಿಸಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಪಿಸಿಸಿಎಫ್) 2024ರ ಮಾರ್ಚ್ 1ರಂದು ಹೊರಡಿಸಿರುವ ಆದೇಶ ಪ್ರಶ್ನಿಸಿ ರಾಣಾ ಜಾರ್ಜ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿದೆ.

ಅಭಯಾರಣ್ಯದಲ್ಲಿ ಹಾದು ಹೋಗುವ ರಸ್ತೆ ಬಳಸದಂತೆ ಅರ್ಜಿದಾರರನ್ನು ನಿರ್ಬಂಧಿಸಿ ಪಿಸಿಸಿಎಫ್ ಹೊರಡಿಸಿದ್ದ ಆದೇಶ ರದ್ದುಪಡಿಸಲಾಗಿದೆ. ರಾಣಾ ಅವರು ಯಾವುದೇ ಅಡ್ಡಿ ಇಲ್ಲದೆ ಅವರ ಖಾಸಗಿ ಜಮೀನಿಗೆ ತೆರಳಲು ಕಾನೂನಿನ ಅನ್ವಯ ಅನುಕೂಲ ಮಾಡಿಕೊಡಬೇಕು. ಅಲ್ಲಿ ಓಡಾಡುವಾಗ ರಾಣಾ ಅವರು ಭೌತಿಕವಾಗಿ ಸಸ್ಯ ಮತ್ತು ಪ್ರಾಣಿ ಸಂಕುಲಕ್ಕೆ ಹಾನಿ ಉಂಟು ಮಾಡಬಾರದು ಎಂದು ನ್ಯಾಯಾಲಯ ಆದೇಶದಲ್ಲಿ ಹೇಳಿದೆ. ವಿಸ್ತೃತ ತೀರ್ಪಿನ ಪ್ರತಿ ಇನ್ನಷ್ಟೇ ಪ್ರಕಟವಾಗಬೇಕಿದೆ.

ರಾಣಾ ಜಾರ್ಜ್ ಮನವಿ ಏನು?
ಶಂಬುಗೌಡನಹಳ್ಳಿ ಮತ್ತು ಲಕ್ಕಸೋಗೆಯಲ್ಲಿನ ಸರ್ವೇ ಸಂಖ್ಯೆ 1, 2, 3, 26, 32 ಮತ್ತು 33ರ ಭೂಮಿಯ ಮಾಲೀಕತ್ವವನ್ನು ತಾವು ಹೊಂದಿದ್ದು, ಇದು ನುಗು ಅಭಯಾರಣ್ಯದ ವ್ಯಾಪ್ತಿಯಲ್ಲಿದೆ. ಈ ಆಸ್ತಿಯನ್ನು ವೈಯಕ್ತಿಕ ಬಳಕೆ ಮಾಡುತ್ತಿದ್ದು, ಯಾವುದೇ ವಾಣಿಜ್ಯ ಚಟುವಟಿಕೆ ನಡೆಸುತ್ತಿಲ್ಲ. ಇಡೀ ಪ್ರದೇಶ ಪರಿಸರ ಸೂಕ್ಷ್ಮ ವಲಯಕ್ಕೆ ಸೇರಿದೆ ಎಂಬ ಅರಿವು ತಮಗಿದೆ. ಖಾಸಗಿ ಭೂಮಿ ಮಾಲೀಕರಿಗೆ ತಮ್ಮ ಜಮೀನಿಗೆ ತೆರಳಲು ಜಾಗವಿಲ್ಲದಿದ್ದಾಗ ಸಾರ್ವಜನಿಕ ಜಾಗ ಬಳಕೆ ಮಾಡಲು ಅನುಮತಿಸಬೇಕು ಎಂಬುದು ಸ್ಥಾಪಿತ ಕಾನೂನು. ಅಭಯಾರಣ್ಯದ ವ್ಯಾಪ್ತಿಯಲ್ಲಿರುವ ತಮ್ಮ ಜಮೀನಿಗೆ ತೆರಳಲು ಮಣ್ಣಿನ ರಸ್ತೆಯನ್ನೇ ಆಶ್ರಯಿಸಬೇಕಿದ್ದು, ಅದು ಅರಣ್ಯ ಇಲಾಖೆಯ ವಶದಲ್ಲಿದೆ. ಜಮೀನಿಗೆ ತೆರಳಲು ಇನ್ನೊಂದು ರಸ್ತೆ ಇದ್ದು, ಮಳೆಗಾಲದಲ್ಲಿ ಅಥವಾ ನುಗು ಜಲಾಶಯದಲ್ಲಿ ನೀರಿನ ಮಟ್ಟ 100 ಅಡಿಗಿಂತ ಹೆಚ್ಚಾದಾಗ ಆ ರಸ್ತೆಯಲ್ಲಿ ಓಡಾಡಲು ಸಾಧ್ಯವಿಲ್ಲ. ಇಂಥ ಸಂದರ್ಭದಲ್ಲಿ ಅರಣ್ಯ ಇಲಾಖೆಯ ದಾರಿ ಬಳಸದೇ ವಿಧಿಯಿಲ್ಲದಂತಾಗಿದೆ ಎಂದು ರಾಣಾ ಅರ್ಜಿಯಲ್ಲಿ ವಿವರಿಸಿದ್ದರು.

ಅಭಯಾರಣ್ಯದ ವ್ಯಾಪ್ತಿಯಲ್ಲಿ ಭೂಮಿ ಹೊಂದಿರುವವರಿಗೆ ಓಡಾಡಲು ವನ್ಯಜೀವಿ ಸಂರಕ್ಷಣಾ ಕಾಯ್ದೆ ಸೆಕ್ಷನ್ 27(1)(ಸಿ) ಅಡಿ ವಿನಾಯಿತಿ ಇದೆ. ಈಗ ಅರಣ್ಯ ಇಲಾಖೆಯು ಸಂಜೆ 6ರಿಂದ ಬೆಳಗ್ಗೆ 6 ಗಂಟೆಯವರೆಗೆ ಅರಣ್ಯ ಇಲಾಖೆಯ ರಸ್ತೆಯಲ್ಲಿ ಓಡಾಡಲು ಕಾನೂನುಬಾಹಿರವಾಗಿ ನಿರ್ಬಂಧಿಸುವ ಮೂಲಕ ಕಿರುಕುಳ ನೀಡುತ್ತಿದೆ. ಅರಣ್ಯ ಇಲಾಖೆಯ ರಸ್ತೆಯನ್ನು ಬಳಕೆ ಮಾಡುವುದಕ್ಕೆ ಸಾರ್ವಜನಿಕರು ಆಕ್ಷೇಪಿಸಿರುವ ಸುದ್ದಿ ಮಾಧ್ಯಮಗಳಲ್ಲಿ ಪ್ರಕಟವಾಗಿರುವುದನ್ನು ಆಧರಿಸಿ ಹೆಡಿಯಾಲ ವಲಯದ ಸಹಾಯಕ ಅರಣ್ಯಾ ಸಂರಕ್ಷಣಾಧಿಕಾರಿ ಓಡಾಟಕ್ಕೆ ನಿರ್ಬಂಧಿಸಿದ್ದಾರೆ. ಆದ್ದರಿಂದ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಆದೇಶ ರದ್ದುಪಡಿಸಿ, ದಿನದ 24 ತಾಸು ಜಮೀನಿಗೆ ಓಡಾಡಲು ಅನುಮತಿಸಬೇಕು ಎಂದು ರಾಣಾ ಜಾರ್ಜ್‌ ಮನವಿ ಮಾಡಿದ್ದರು.

Related Articles

Comments (0)

Leave a Comment