ಪೂರ್ವಾನುಮತಿಯಿಲ್ಲದೆ ಪ್ರತಿಭಟನೆ; ತೇಜಸ್ವಿನಿ ಗೌಡ ವಿರುದ್ಧದ ಜನಪ್ರತಿನಿಧಿಗಳ ಕೋರ್ಟ್ ವಿಚಾರಣೆಗೆ ಹೈಕೋರ್ಟ್ ತಡೆ
- by Prashanth Basavapatna
- May 27, 2025
- 105 Views

ಬೆಂಗಳೂರು: ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆಯದೆ ಸಾರ್ವಜನಿಕ ಸ್ಥಳದಲ್ಲಿ ಪ್ರತಿಭಟನೆ ನಡೆಸಿದ ಆರೋಪದ ಮೇಲೆ ಬಿಜೆಪಿಯ ಮಾಜಿ ಮುಖಂಡರಾದ ತೇಜಸ್ವಿನಿ ಗೌಡ (ಕಾಂಗ್ರೆಸ್ ಹಾಲಿ ನಾಯಕಿ) ವಿರುದ್ಧದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಬಿಜೆಪಿಯಲ್ಲಿದ್ದ ಸಂದರ್ಭದಲ್ಲಿ 2023ರಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ ಪ್ರಕರಣ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ಮತ್ತು ವಿಶೇಷ ನ್ಯಾಯಾಲಯದ ವಿಚಾರಣೆ ರದ್ದು ಕೋರಿ ತೇಜಸ್ವಿನಿ ಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ರಜಾಕಾಲದ ನ್ಯಾಯಪೀಠ ಈ ಆದೇಶ ಮಾಡಿದೆ. ಜತೆಗೆ, ಪ್ರತಿವಾದಿ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿ ಅರ್ಜಿ ವಿಚಾರಣೆ ಮುಂದೂಡಿತು.
ಪ್ರಕರಣವೇನು?
ಕಾಂಗ್ರೆಸ್ ಸರ್ಕಾರ ಜನ ವಿರೋಧಿ ಧೋರಣೆಗಳನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ 2023ರ ಜೂನ್ 20ರಂದು ನಗರದ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಎದುರು ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿತ್ತು. ಅದರಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಆರ್. ಅಶೋಕ್, ತೇಜಸ್ವಿನಿ ಗೌಡ ಸೇರಿ 30ರಿಂದ 35 ಜನ ಮುಖಂಡರು ಭಾಗವಹಿಸಿ, ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದರು.
ಇದರಿಂದ, ಹೈಗ್ರೌಂಡ್ಸ್ ಪೊಲೀಸ್ ಠಾಣೆ ಪಿಎಸ್ಐ ಅನಿಲ್ ಕುಮಾರ್ ಮುಳ್ಳೂರ ಅವರು ನಗರದ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಖಾಸಗಿ ದೂರು ದಾಖಲಿಸಿ, ಪ್ರತಿಭಟನೆ ನಡೆಸಲು ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆದಿಲ್ಲ. ಈ ಬಗ್ಗೆ ಸೂಕ್ತ ತಿಳಿವಳಿಕೆ ನೀಡಿದರೂ ಪ್ರತಿಭಟನೆ ಮುಂದುವರಿಸಿದರು ಎಂದು ಆರೋಪಿಸಿದ್ದರು. ನ್ಯಾಯಾಲಯ ಪ್ರಕರಣ ಕುರಿತು ತನಿಖೆ ನಡೆಸುವಂತೆ ಆದೇಶಿಸಿತ್ತು.
ಅದರಂತೆ ತನಿಖೆ ನಡೆಸಿದ್ದ ಹೈಗ್ರೌಂಡ್ಸ್ ಠಾಣೆ ಪೊಲೀಸರು, ಸಾರ್ವಜನಿಕ ಸ್ಥಳದಲ್ಲಿ ಪ್ರತಿಭಟನೆ ನಡೆಸಲು ಅನುಮತಿ ಪಡೆಯದೆ ಅಕ್ರಮವಾಗಿ ಪ್ರತಿಭಟನೆ ನಡೆಸಿದ ಆರೋಪದ ಮೇಲೆ ಕರ್ನಾಟಕ ಪೊಲೀಸ್ ಕಾಯ್ದೆ ಸೆಕ್ಷನ್ 103 ಅಡಿಯಲ್ಲಿ ದೋಷಾರೋಪಪಟ್ಟಿ ಸಲ್ಲಿಸಿದ್ದರು. ವಿಶೇಷ ನ್ಯಾಯಾಲಯ 2025ರ ಫೆಬ್ರವರಿ 12ರಂದು ಪ್ರಕರಣವನ್ನು ವಿಚಾರಣೆ ಪರಿಗಣಿಸಿತ್ತು. ಇದರಿಂದ, ತೇಜಸ್ವಿನಿ ಗೌಡ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
Related Articles
Thank you for your comment. It is awaiting moderation.
Comments (0)