ಶುದ್ಧ ಕುಡಿಯುವ ನೀರು ಪೂರೈಕೆ ಸರ್ಕಾರದ ಕರ್ತವ್ಯ; ನಿರ್ವಣೆಗೆ ಎಸ್ಒಪಿ ರಚಿಸಲು ಹೈಕೋರ್ಟ್ ನಿರ್ದೇಶನ
- by Prashanth Basavapatna
- May 30, 2025
- 66 Views

ಬೆಂಗಳೂರು: ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಪೂರೈಸುವುದು ಸರ್ಕಾರದ ಮೂಲಭೂತ ಕರ್ತವ್ಯ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ರಾಜ್ಯದ ಎಲ್ಲ ಜಿಲ್ಲೆ ಹಾಗೂ ಗ್ರಾಮಗಳಲ್ಲಿ ಕುಡಿಯುವ ನೀರು ಸೌಲಭ್ಯಗಳ ನಿರ್ವಹಣೆಗೆ ಸಮಗ್ರ ಪ್ರಮಾಣೀಕೃತ ಕಾರ್ಯವಿಧಾನ (ಎಸ್ಒಪಿ) ಸಿದ್ಧಪಡಿಸುವಂತೆ ಸರ್ಕಾರಕ್ಕೆ ಸೂಚಿಸಿದೆ.
ತುಮಕೂರು ಸೇರಿ ಮಧ್ಯ ಕರ್ನಾಟಕ ಹಾಗೂ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಪದೇಪದೆ ಎದುರಾಗುವ ಶುದ್ಧ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಸೂಕ್ತ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕೆಂದು ಕೋರಿ ತುಮಕೂರಿನ ವಕೀಲ ಎಲ್. ರಮೇಶ್ ನಾಯಕ್ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.
ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್. ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠ, ಅರ್ಜಿಯಲ್ಲಿ ಗಂಭೀರ ಸ್ವರೂಪದ ವಿಚಾರಗಳನ್ನು ಉಲ್ಲೇಖಿಸಲಾಗಿದೆ. ನೀರಿನ ಮೂಲಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡದಿದ್ದರೆ ನೀರು ಪೋಲು ಮತ್ತು ಕಲುಷಿತ ಆಗುತ್ತದೆ ಎಂಬ ಅರ್ಜಿದಾರರ ವಾದ ಸಮಂಜಸವಾಗಿದೆ. ಶುದ್ಧ ಕುಡಿಯುವ ನೀರಿನ ಬಳಕೆ ಸಂವಿಧಾನದ ಪರಿಚ್ಛೇದ 21ರ (ಜೀವಿಸುವ ಹಕ್ಕು ಹಾಗೂ ವೈಯಕ್ತಿಕ ಸ್ವಾತಂತ್ರ್ಯ) ಭಾಗವಾಗಿದೆ. ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಪೂರೈಸುವುದು ರಾಜ್ಯದ ಮೂಲಭೂತ ಕರ್ತವ್ಯ ಎಂದು ಅಭಿಪ್ರಾಯಪಟ್ಟಿದೆ.
ಕುಡಿಯುವ ನೀರಿನ ಪೂರೈಕೆಗೆ ಕೇವಲ ಶುದ್ಧೀಕರಣ ಘಟಕ, ಓವರ್ಹೆಡ್ ಟ್ಯಾಂಕ್, ಪೈಪ್ಲೈನ್ ಹಾಗೂ ಬೋರ್ವೆಲ್ಗಳ ವ್ಯವಸ್ಥೆ ಮಾಡಿದರೆ ಸಾಲದು. ಅವುಗಳನ್ನು ನಿರಂತರವಾಗಿ ವೈಜ್ಞಾನಿಕ ವಿಧಾನದಲ್ಲಿ ನಿರ್ವಹಣೆ ಮಾಡಬೇಕು. ಆ ಮೂಲಕ ಜನ ಸಾಮಾನ್ಯರಿಗೆ ಶುದ್ಧ ಮತ್ತು ಸುರಕ್ಷಿತ ಕುಡಿಯುವ ನೀರಿನ ನಿರಂತರ ಪೂರೈಕೆಯನ್ನು ಖಾತ್ರಿಪಡಿಸಬೇಕು. ಆದ್ದರಿಂದ, ರಾಜ್ಯದ ಎಲ್ಲ ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆಯ ನಿರ್ವಹಣೆಗಾಗಿ ಎಸ್ಒಪಿ ಸಿದ್ಧಪಡಿಸಬೇಕು. ಮುಂದಿನ ಎರಡು ತಿಂಗಳೊಳಗೆ ಆ ಎಸ್ಒಪಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
Related Articles
Thank you for your comment. It is awaiting moderation.
Comments (0)