ಸರ್ಕಾರಿ ಕಾಲೇಜು ಗ್ರಂಥಪಾಲಕರ ವೇತನ‌ ಕುರಿತ ನ್ಯಾಯಾಂಗ ನಿಂದನೆ ಅರ್ಜಿ; ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಅನುದಾನಿತ ಕಾಲೇಜುಗಳ ಗ್ರಂಥಪಾಲಕರಿಗೆ ನೀಡಲಾಗುವ ವೇತನಕ್ಕೆ ಸರಿಸಮನಾಗಿ ಸರ್ಕಾರಿ ಪದವಿಪೂರ್ವ ಕಾಲೇಜುಗಳ ಗ್ರಂಥಪಾಲಕರಿಗೆ ವೇತನ ನೀಡುವ ಕುರಿತು ನ್ಯಾಯಾಲಯ ನೀಡಿರುವ ಆದೇಶ ಪಾಲನೆಯಾಗಿಲ್ಲ ಎಂದು ಆರೋಪಿಸಿ ಸಲ್ಲಿಕೆಯಾಗಿರುವ ನ್ಯಾಯಾಂಗ ನಿಂದನೆ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜು ಗ್ರಂಥಪಾಲಕರ ಸಂಘ ಸಲ್ಲಿಸಿರುವ ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿಯನ್ನು ಮಂಗಳವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ವಿಭಾಗೀಯ ನ್ಯಾಯಪೀಠ, ಶಿಕ್ಷಣ ಇಲಾಖೆ ಹಾಗೂ ಇತರ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ, ಅರ್ಜಿ ವಿಚಾರಣೆಯನ್ನು ಫೆಬ್ರವರಿ 28ಕ್ಕೆ ಮುಂದೂಡಿತು.

ಪ್ರಕರಣವೇನು?
ವೇತನ ತಾರತಮ್ಯ ಪ್ರಶ್ನಿಸಿ ಅರ್ಜಿದಾರ ಸಂಘ 2018ರಲ್ಲಿ ಹೈಕೋರ್ಟ್ ಮೆಟ್ಟಿಲೇರಿತ್ತು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಏಕಸದಸ್ಯ ಪೀಠ, ಅನುದಾನಿತ ಕಾಲೇಜುಗಳ ಗ್ರಂಥಪಾಲಕರಿಗೆ ನೀಡಲಾಗುವ ವೇತನಕ್ಕೆ ಸರಿಸಮನಾದ ವೇತನವನ್ನು ಸರ್ಕಾರಿ ಪದವಿಪೂರ್ವ ಕಾಲೇಜುಗಳ ಗ್ರಂಥಪಾಲಕರಿಗೂ ನೀಡುವ ನಿಟ್ಟಿನಲ್ಲಿ 3 ತಿಂಗಳಲ್ಲಿ ಕ್ರಮ ಕೈಗೊಳ್ಳುವಂತೆ 2024ರ ಜುಲೈ 19ರಂದು ಆದೇಶಿಸಿತ್ತು. ಆದರೆ, ಈವರೆಗೂ ನ್ಯಾಯಾಲಯದ ಆದೇಶ ಪಾಲನೆಯಾಗಿಲ್ಲ ಎಂದು ಆಕ್ಷೇಪಿಸಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿರುವ ಅರ್ಜಿದಾರರು, ಉದ್ದೇಶಪೂರ್ವಕವಾಗಿ ಕೋರ್ಟ್ ಆದೇಶ ಪಾಲಿಸದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಕಾರ್ಯದರ್ಶಿ ರಿತೀಶ್ ಕುಮಾರ್ ಸಿಂಗ್, ಪದವಿಪೂರ್ವ ಮಂಡಳಿ ನಿರ್ದೇಶಕಿ ಸಿಂಧೂ ಬಿ. ರೂಪೇಶ್ ವಿರುದ್ಧ ನ್ಯಾಯಾಂಗ ನಿಂದನೆಯಡಿ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.

 

ಪ್ರಕರಣದ ವಿವರ:
CCC 1358/2024
The Karnataka State Pre University College Librarians association Vs Riteesh Kumar Singh & Others

 

Related Articles

Comments (0)

Leave a Comment