ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಕೊಕಾ ಹೇರಿದ್ದ ಆದೇಶ ರದ್ದು; ಬೈರತಿ ಬಸವರಾಜ್ ನಿರೀಕ್ಷಾ ಜಾಮೀನು ಅರ್ಜಿ ವಜಾ

ಬೆಂಗಳೂರು: ರೌಡಿಶೀಟರ್‌ ಶಿವಪ್ರಕಾಶ್‌ ಅಲಿಯಾಸ್‌ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಸೇರಿ ಐವರು ಆರೋಪಿಗಳ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯ್ದೆ (ಕೊಕಾ) ಅನ್ವಯಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.

ಆದರೆ, ಇದೇ ಪ್ರಕರಣದ 5ನೇ ಆರೋಪಿ ಬೈರತಿ ಬಸವರಾಜ್ ಅವರಿಗೆ ನಿರೀಕ್ಷಣಾ ಜಾಮೀನು ನೀಡಲು ನ್ಯಾಯಾಲಯ ನಿರಾಕರಿಸಿದೆ. ಸದ್ಯ ಕೊಕಾ ಅನ್ವಯಿಸಿದ್ದ ಆದೇಶ ರದ್ದುಗೊಂಡಿರುವ ಹಿನ್ನೆಲೆಯಲ್ಲಿ ವಿಚಾರಣಾ‌ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಪಡೆಯುವವರೆಗೆ ಬೈರತಿ ಬಸವರಾಜ್ ಅವರು ಬಂಧನದ ಭೀತಿ ಎದುರಿಸುವಂತಾಗಿದೆ.

ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಕೊಕಾ ನಿಯಮಗಳನ್ನು ಅನ್ವಯಿಸಿರುವುದನ್ನು ಪ್ರಶ್ನಿಸಿ ಮತ್ತು ಕೊಲೆ ಆರೋಪದ ಸಂಬಂಧ ದಾಖಲಾಗಿರುವ ಎಫ್‌ಐಆರ್‌ ರದ್ದು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ಬೈರತಿ ಬಸವರಾಜ್ ಇದೇ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಮಧ್ಯಂತರ ಅರ್ಜಿ ಸಲ್ಲಿಸಿದ್ದರು. ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿ, ನವೆಂಬರ್‌ 20ರಂದು ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಸ್‌. ಸುನೀಲ್‌ ದತ್‌ ಯಾದವ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ಪ್ರಕಟಿಸಿತು.

ಹೈಕೋರ್ಟ್ ತೀರ್ಪು:
ಆರೋಪಿಗಳ ವಿರುದ್ಧ ಕೊಕಾ ಅನ್ವಯಿಸಿ ಹೊರಡಿಸಲಾಗಿರುವ ಆದೇಶ ರದ್ದುಪಡಿಸಲಾಗಿದೆ. ಪ್ರಕರಣದ ಆರೋಪಿಗಳೆಲ್ಲರಿಗೂ ಈ ಆದೇಶ ಅನ್ವಯಿಸಲಿದೆ ಎಂದು ಹೈಕೋರ್ಟ್ ಆದೇಶಿಸಿದೆ. ಆದರೆ, ಕೊಲೆ ಪ್ರಕರಣದಲ್ಲಿ ತನಿಖೆ ಇನ್ನಷ್ಟೇ ಪೂರ್ಣಗೊಳ್ಳಬೇಕಿದ್ದು, ಹೀನ ಕೃತ್ಯದಲ್ಲಿ ನಿರೀಕ್ಷಣಾ ಜಾಮೀನು ಮಂಜೂರು ಮಾಡುವ ಮೂಲಕ ತನಿಖೆಯಲ್ಲಿ ಮಧ್ಯಪ್ರವೇಶಿಸಲು ಬಯಸುವುದಿಲ್ಲ. ಆದ್ದರಿಂದ, ನಿರೀಕ್ಷಣಾ ಜಾಮೀನು ಕೋರಿರುವ ಮಧ್ಯಂತರ ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂದು ಆದೇಶಿಸಿದೆ.

ಇನ್ನು ಭಾರತಿನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬೈರತಿ ಬಸವರಾಜ್ ಅವರು ಹಿಂಪಡೆದಿರುವುದರಿಂದ ಆ ಅರ್ಜಿಯನ್ನೂ ನ್ಯಾಯಾಲಯ ವಜಾಗೊಳಿಸಿದೆ. ವಿಸ್ತೃತ ತೀರ್ಪಿನ ಪ್ರತಿ ಇನ್ನಷ್ಟೇ ಬಿಡುಗಡೆಯಾಗಬೇಕಿದೆ.

ನ್ಯಾಯಪೀಠ ತೀರ್ಪು ಪ್ರಕಟಿಸಿದ ನಂತರ ಬೈರತಿ ಬಸವರಾಜ್ ಪರ ಹಿರಿಯ ವಕೀಲ ಸಂದೇಶ್‌ ಚೌಟ ಅವರು, ಕೊಕಾ ಅನ್ವಯಿಸಿರುವ ಆದೇಶ ರದ್ದುಗೊಂಡಿರುವುದರಿಂದ ವಿಚಾರಣಾ ನ್ಯಾಯಾಲಯದಲ್ಲಿ ಬೈರತಿ ಬಸವರಾಜು ಅವರು ನಿರೀಕ್ಷಣಾ ಜಾಮೀನು ಕೋರುವವರೆಗೆ ರಕ್ಷಣೆ ಒದಗಿಸಬೇಕು ಎಂದು ಕೋರಿದರು. ಇದಕ್ಕೆ ನ್ಯಾಯಪೀಠ ನಿರಾಕರಿಸಿತು.

Related Articles

Comments (0)

Leave a Comment