ಆದಾಯ ಮೀರಿ ಆಸ್ತಿಗಳಿಕೆ ಆರೋಪ; ಕೆಎಎಸ್ ಅಧಿಕಾರಿ ಸುಧಾ ವಿರುದ್ಧದ ಕೇಸ್ ರದ್ದತಿಗೆ ಹೈಕೋರ್ಟ್ ನಕಾರ
- by Prashanth Basavapatna
- September 6, 2025
- 21 Views

ಬೆಂಗಳೂರು: ಕೆಎಎಸ್ ಅಧಿಕಾರಿ ಬಿ. ಸುಧಾ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣ ರದ್ದುಪಡಿಸಲು ನಿರಾಕರಿಸಿರುವ ಹೈಕೋರ್ಟ್, ಸುಧಾ ಅವರು ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ ಎಂದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಅಭಿಪ್ರಾಯಪಟ್ಟಿದೆ.
ಜತೆಗೆ, ಹೈಕೋರ್ಟ್ ಅನುಮತಿ ಇಲ್ಲದೇ ಸಕ್ಷಮ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಬಾರದು ಎಂದು ಈ ಹಿಂದೆ ನೀಡಿದ್ದ ಮಧ್ಯಂತರ ಆದೇಶವನ್ನೂ ನ್ಯಾಯಪೀಠ ತೆರವುಗೊಳಿಸಿದೆ.
ಪ್ರಕರಣ ರದ್ದು ಕೋರಿ ಮೊದಲನೇ ಆರೋಪಿ ಸುಧಾ ಮತ್ತು ಎರಡನೇ ಆರೋಪಿಯಾಗಿರುವ ಆಕೆಯ ಪತಿ ಸ್ಟ್ರೋಯ್ನಿ ಜೋಸೆಫ್ ಪ್ಯಾಸ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ಮಾಡಿದೆ.
ಹೈಕೋರ್ಟ್ ಆದೇಶ:
ಆರೋಪ ಪಟ್ಟಿಯಲ್ಲಿನ ಅಂಶಗಳನ್ನು ಆದೇಶದಲ್ಲಿ ಉಲ್ಲೇಖಿಸಿದರೆ ವಿಚಾರಣಾ ನ್ಯಾಯಾಲಯದಲ್ಲಿ ಅರ್ಜಿದಾರರಿಗೆ ಸಮರ್ಥನೆ ಮಾಡಿಕೊಳ್ಳಲು ಕಷ್ಟವಾಗುತ್ತದೆ. ಆದ್ದರಿಂದ, ಆರೋಪ ಪಟ್ಟಿಯಲ್ಲಿರುವ ಅಂಶಗಳನ್ನು ಉಲ್ಲೇಖಿಸುವುದರಿಂದ ಈ ನ್ಯಾಯಾಲಯ ಅಂತರ ಕಾಯ್ದುಕೊಂಡಿದೆ. ಆದರೆ, ನಿಸ್ಸಂಶಯವಾಗಿ ಅಪರಾಧ ಕೃತ್ಯಗಳು ಗಂಭೀರವಾಗಿದ್ದು, ಎಲ್ಲ ಅಪರಾಧಗಳು ನಿರ್ದಿಷ್ಟವಾಗಿ ಸುಧಾ ಅವರು ಭ್ರಷ್ಟಾಚಾರದಲ್ಲಿ ಆಳವಾಗಿ ಮುಳುಗಿರುವುದರತ್ತ ಬೆರಳು ಮಾಡುತ್ತವೆ. ಮೇಲ್ನೋಟಕ್ಕೆ ತನಿಖೆಯ ಸಂದರ್ಭದಲ್ಲಿ ಸಂಗ್ರಹಿಸಿರುವ ಅಪಾರವಾದ ದಾಖಲೆಗಳು ನಿಸ್ಸಂಶಯವಾಗಿ ವಿಚಾರಣೆಯನ್ನು ಬೇಡುತ್ತವೆ. ಇಲ್ಲಿ ನಿರಪರಾಧಿಯಾಗಿ ಹೊರಬರುವುದು ಅರ್ಜಿದಾರರಿಗೆ ಬಿಟ್ಟ ವಿಚಾರವಾಗಿದೆ ಎಂದು ನ್ಯಾಯಾಲಯ ಹೇಳಿದೆ.
ಕಾನೂನಿಗೆ ವಿರುದ್ಧವಾಗಿ ತನಿಖೆ ನಡೆಸಲಾಗಿದೆ ಎಂಬ ಸುಧಾ ಅವರ ವಾದವನ್ನು ಅಲ್ಲಗಳೆದಿರುವ ನ್ಯಾಯಾಲಯ, ಭ್ರಷ್ಟಾಚಾರ ತಡೆ (ಪಿಸಿ) ಕಾಯ್ದೆ ಸೆಕ್ಷನ್ 13 ಆದಾಯ ಮೀರಿದ ಆಸ್ತಿಗೆ ಸಂಬಂಧಿಸಿದ್ದು, ತನಿಖೆ ನಡೆಸಲು ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಬೇಕಿಲ್ಲ. ದೂರಿನ ತನಿಖೆಗೆ ಆದೇಶಿಸಿರುವ ವಿಶೇಷ ನ್ಯಾಯಾಲಯದ ಆದೇಶದಲ್ಲಿ ಯಾವುದೇ ಲೋಪವಾಗಿಲ್ಲ ಎಂದು ಹೇಳಿದೆ.
ಪ್ರಕರಣವೇನು?
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ (ಬಿಡಿಎ) ಉಪವಿಭಾಗಾಧಿಕಾರಿ ಮತ್ತು ಭೂಸ್ವಾಧೀನ ಅಧಿಕಾರಿಯಾಗಿದ್ದಾಗ ಪಡೆದ ಲಂಚದ ಹಣದಲ್ಲಿ ಬೆಂಗಳೂರು, ಉಡುಪಿ ಮತ್ತು ದೊಡ್ಡಬಳ್ಳಾಪುರದಲ್ಲಿ ಹಲವು ಕೋಟಿ ಮೌಲ್ಯದ ಬೆಲೆ ಸ್ಥಿರಾಸ್ತಿಗಳನ್ನು ಖರೀದಿಸಿದ್ದಾರೆ ಎಂದು ಸುಧಾ ವಿರುದ್ಧ ಆರೋಪಿಸಲಾಗಿತ್ತು.
ಭೂಸ್ವಾಧೀನಕ್ಕೆ ಸಂಬಂಧಿಸಿದ ಕಡತಗಳನ್ನು ಮುಂದಿನ ಹಂತಕ್ಕೆ ಕಳುಹಿಸುವಾಗ ಆ ಭೂಮಾಲೀಕರ ಸಂಪರ್ಕ ಸಂಖ್ಯೆಯನ್ನು ತನ್ನ ಏಜೆಂಟ್ಗೆ ನೀಡುತ್ತಿದ್ದರು. ಸ್ವಾಧೀನಪಡಿಸಿಕೊಂಡ ಭೂಮಿಗೆ ಪರಿಹಾರಕ್ಕೆ ನೀಡುವಾಗ ಅವರಿಂದ ಏಜೆಂಟ್ ಲಂಚ ಪಡೆದುಕೊಂಡಿದ್ದರು ಎಂದು ಅಬ್ರಹಾಂ ಆರೋಪಿಸಿದ್ದರು.
2020ರ ಆಗಸ್ಟ್ 20ರಂದು ಟಿ.ಜೆ. ಅಬ್ರಾಹಂ ಸಲ್ಲಿಸಿದ್ದ ಖಾಸಗಿ ದೂರನ್ನು ವಿಶೇಷ ನ್ಯಾಯಾಲಯವು ಅಂದಿನ ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ)ವಹಿಸಿತ್ತು. ಎಸಿಬಿ ರದ್ದಾದ ಬಳಿಕ ಪ್ರಕರಣ ಲೋಕಾಯುಕ್ತ ಪೊಲೀಸ್ಗೆ ವರ್ಗಾವಣೆಗೊಂಡಿತ್ತು.
ಪ್ರಕರಣ ರದ್ದು ಕೋರಿ ಆರೋಪಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ತನ್ನ ಅನುಮತಿ ಪಡೆಯದೇ ವಿಶೇಷ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಬಾರದು ಎಂದು 2024ರ ಆಗಸ್ಟ್ನಲ್ಲಿ ಲೋಕಾಯುಕ್ತ ಪೊಲೀಸರಿಗೆ ನಿರ್ದೇಶಿಸಿತ್ತು. ಇದರಂತೆ, ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು ಪ್ರಸ್ತಾವಿತ ಆರೋಪ ಪಟ್ಟಿಯನ್ನು ಹೈಕೋರ್ಟ್ಗೆ ಸಲ್ಲಿಸಿದ್ದರು.
Related Articles
Thank you for your comment. It is awaiting moderation.
Comments (0)