ಬೆಟ್ಟಿಂಗ್ ಆರೋಪ; ಗೃಹಸಚಿವ ಡಾ.ಜಿ.ಪರಮೇಶ್ವರ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ

ಬೆಂಗಳೂರು: ತುಮಕೂರು ನಗರದಲ್ಲಿ ಕಳೆದ ವರ್ಷ ಅಕ್ಟೋಬರ್‌ನಲ್ಲಿ ನಡೆದಿದ್ದ ಕಬಡ್ಡಿ ಪಂದ್ಯಾವಳಿಯಲ್ಲಿ ಕಾನೂನುಬಾಹಿರ ಬೆಟ್ಟಿಂಗ್‌ನಲ್ಲಿ ತೊಡಗಿಸಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಬೆಟ್ಟಿಂಗ್ ಆರೋಪಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಿ ತನಿಖೆ ನಡೆಸಲು ಪೊಲೀಸಿರಿಗೆ ನಿರ್ದೇಶಿಸಿದ್ದ ಬೆಂಗಳೂರಿನ 42 ನೇ ಎಸಿಜೆಎಂ ನ್ಯಾಯಾಲಯದ ಆದೇಶ ಪ್ರಶ್ನಿಸಿ ಡಾ. ಜಿ. ಪರಮೇಶ್ವರ್ ಸಲ್ಲಿಸಿದ್ದ ಅರ್ಜಿಯನ್ನು ಗುರುವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ‌ ನ್ಯಾಯಪೀಠ ಈ ಮಧ್ಯಂತರ ಆದೇಶ ಮಾಡಿತು.

ವಿಚಾರಣೆ ವೇಳೆ ಪರಮೇಶ್ವರ್ ಪರ ಹಿರಿಯ ವಕೀಲ ಕೆ.ಎನ್. ಫಣೀಂದ್ರ ವಾದ ಮಂಡಿಸಿ, ಗೃಹಸಚಿವರು ಕಬಡ್ಡಿ ಟೂರ್ನಿಯ ಮುಖ್ಯ ಅತಿಥಿಯಾಗಿ ಹೋಗಿದ್ದರು. ವಿಜಯಪುರ ತಂಡ ಗೆಲ್ಲುತ್ತದೆಂದು 500 ರೂ. ಬೆಟ್ಟಿಂಗ್ ಕಟ್ಟಿದ್ದಾಗಿ ಹೇಳಿದ್ದಾರೆ. ಸೋತ ತಂಡಕ್ಕೆ ಬೇಸರವಾಗಬಾರದೆಂದು ಡಾ.ಜಿ. ಪರಮೇಶ್ವರ್ ಹೀಗೆ ಹೇಳಿದ್ದಾರೆ. ಇದನ್ನೇ ಅಪರಾಧವೆಂಬಂತೆ ಬಿಂಬಿಸಿ ಖಾಸಗಿ ದೂರು ದಾಖಲಿಸಲಾಗಿದೆ. ವಿಚಾರಣಾ ಕೋರ್ಟ್ ಎಫ್‌ಐಆರ್‌ ದಾಖಲಿಸಲು ಆದೇಶಿಸುವ ಮುನ್ನ ಪ್ರಕ್ರಿಯೆ ಪಾಲಿಸಿಲ್ಲವೆಂದು ಆಕ್ಷೇಪಿಸಿದರು.

ವಾದ ಆಲಿಸಿದ ನ್ಯಾಯಪೀಠ, ತಮಾಷೆಗಾಗಿ ಮಾತನಾಡಿದರೂ ಕೇಸ್ ಹಾಕಬಹುದೇ? ಎಂದು ಪ್ರಶ್ನಿಸಿತಲ್ಲದೆ, ಉದ್ದೇಶಪೂರ್ವಕವಾಗಿ ಇಂತಹ ಹೇಳಿಕೆ ನೀಡಿದಂತೆ ಕಾಣುತ್ತಿಲ್ಲ. ತನಿಖೆಗೆ ಆದೇಶಿಸುವ ಮುನ್ನ ಪೊಲೀಸರಿಂದ ವಿವರಣೆ ಪಡೆಯಬೇಕಿತ್ತು ಎಂದು ಅಭಿಪ್ರಾಯಪಟ್ಟು, ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿ ಅರ್ಜಿ ವಿಚಾರಣೆ ಮುಂದೂಡಿತು.

ಎಚ್.ಆರ್. ನಾಗಭೂಷಣ್ ಎಂಬುವವರು ಸಲ್ಲಿಸಿದ್ದ ಖಾಸಗಿ ದೂರನ್ನು‌ ಮಂಗಳವಾರ (ಏಪ್ರಿಲ್ 21) ವಿಚಾರಣೆ ನಡೆಸಿದ್ದ ಬೆಂಗಳೂರಿನ 42ನೇ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್‌ (ಎಸಿಜೆಎಂ) ಕೆ.ಎನ್‌. ಶಿವಕುಮಾರ್ ಅವರು ಪ್ರಕರಣದ ಸಂಬಂಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ತುಮಕೂರಿನ ಕೊರಟಗೆರೆ ತಾಲೂಕಿನ‌ ಕೊಡಿಗೇಹಳ್ಳಿ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್‌ಗೆ ನಿರ್ದೇಶಿಸಿದ್ದರು.

Related Articles

Comments (0)

Leave a Comment