ಮುಡಾ ಹಗರಣ; ಬಿ ವರದಿ ಅಂಗೀಕರಿಸಿದ್ದ ವಿಶೇಷ‌ ನ್ಯಾಯಾಲಯದ ಕ್ರಮ ಪ್ರಶ್ನಿಸಿ ಹೈಕೋರ್ಟ್‌ಗೆ ರಿಟ್

ಬೆಂಗಳೂರು: ಮುಡಾ ನಿವೇಶನಗಳ ಅಕ್ರಮ ಹಂಚಿಕೆ ಆರೋಪ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತಿತರರ ವಿರುದ್ಧ ಲೋಕಾಯುಕ್ತ ಪೊಲೀಸರು ಸಲ್ಲಿಸಿದ ಬಿ ವರದಿ ಅಂಗೀಕರಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಕ್ರಮ ಪ್ರಶ್ನಿಸಿ ಪ್ರಕರಣದ ಖಾಸಗಿ ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್‌‌ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.

ಪ್ರಕರಣದ ತನಿಖೆ ನಡೆಸಿ ಮೈಸೂರು ಲೋಕಾಯುಕ್ತ ಪೊಲೀಸ್‌ ವರಿಷ್ಠಾಧಿಕಾರಿ 2025ರ ಫೆಬ್ರವರಿ 12ರಂದು ಸಲ್ಲಿಸಿದ್ದ ಬಿ ವರದಿಯನ್ನು ಅಂಗೀಕರಿಸಿ ವಿಶೇಷ‌‌ ನ್ಯಾಯಾಲಯ 2026ರ ಜನವರಿ 28ರಂದು ಆದೇಶ ಹೊರಡಿಸಿದೆ. ಆದ್ದರಿಂದ, ಲೋಕಾಯುಕ್ತ ಪೊಲೀಸರು ಸಲ್ಲಿಸಿರಿವ ಬಿ ವರದಿಯನ್ನು ಪಡೆದು ಪರಿಶೀಲಿಸಬೇಕು. ವರದಿ ಅಂಗೀಕರಿಸಿದ ವಿಶೇಷ ನ್ಯಾಯಾಲಯದ ಆದೇಶ ರದ್ದುಪಡಿಸಬೇಕು. ಜತೆಗೆ, ಪ್ರಕರಣದ ತ‌ನಿಖೆಯನ್ನು ಸ್ವತಂತ್ರ ತನಿಖಾ ಸಂಸ್ಥೆಗೆ ವರ್ಗಾಯಿಸಬೇಕು ಹಾಗೂ ತನಿಖೆ ನಡೆಸಿ ಹೊಸದಾಗಿ ವರದಿ ಸಲ್ಲಿಸಲು ಸ್ವತಂತ್ರ ತನಿಖಾ ಸಂಸ್ಥೆಗೆ ನಿರ್ದೇಶಿಸಬೇಕು ಎಂದು ಸ್ನೇಹಮಯಿ ಕೃಷ್ಣ ಮನವಿ ಮಾಡಿದ್ದಾರೆ‌.

ಅರ್ಜಿಯಲ್ಲಿ ಮೈಸೂರು ಜಿಲ್ಲಾ ಲೋಕಾಯುಕ್ತದ ಪೊಲೀಸ್‌ ಅಧೀಕ್ಷಕರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಬಿ.ಎಂ. ಪಾರ್ವತಿ, ಬಾವಮೈದ ಮಲ್ಲಿಕಾರ್ಜುನ ಸ್ವಾಮಿ, ವಿವಾದಿತ ಜಮೀನಿನ ಮೂಲ ಮಾಲೀಕ ಜೆ. ದೇವರಾಜು, ಮುಡಾ ಮಾಜಿ ಆಯುಕ್ತ ಜಿ.ಟಿ. ದಿನೇಶ್‌ ಕುಮಾರ್‌ ಮತ್ತು ಜಾರಿ ನಿರ್ದೇಶನಾಲಯದ ಸಹಾಯಕ ನಿರ್ದೇಶಕರನ್ನು ಪ್ರತಿವಾದಿಗಳನ್ನಾಗಿಸಲಾಗಿದ್ದು, ಅರ್ಜಿಯು ಇನ್ನಷ್ಟೇ ನ್ಯಾಯಪೀಠದ ಮುಂದೆ ವಿಚಾರಣೆಗೆ ನಿಗದಿಯಾಗಬೇಕಿದೆ.

Related Articles

Comments (0)

Leave a Comment