ಪ್ರಭಾರ ಡಿಜಿ-ಐಜಿಪಿಯಾಗಿ ಎ.ಎಂ. ಸಲೀಂ ನೇಮಕ; ಸರ್ಕಾರದ ಆದೇಶ ರದ್ದು ಕೋರಿ ಹೈಕೋರ್ಟ್‌ಗೆ ಪಿಐಎಲ್

ಬೆಂಗಳೂರು: ಹಿರಿಯ ಐಪಿಎಸ್‌ ಅಧಿಕಾರಿ ಡಾ.ಎಂ.ಎ. ಸಲೀಂ ಅವರನ್ನು ರಾಜ್ಯ ಪ್ರಭಾರ ಪೊಲೀಸ್‌ ಮಹಾ ನಿರ್ದೇಶಕರಾಗಿ (ಡಿಜಿ-ಐಜಿಪಿ) ನೇಮಕ ಮಾಡಿ ಸರ್ಕಾರ ಹೊರಡಿಸಿರುವ ಆದೇಶ ರದ್ದು ಕೋರಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.

ಬೆಂಗಳೂರಿನ ವಕೀಲೆ ಸುಧಾ ಕಾಟ್ವಾ ಪಿಐಎಲ್ ಸಲ್ಲಿಸಿದ್ದು, ಅರ್ಜಿಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಪ್ರಧಾನ ಕಾರ್ಯದರ್ಶಿ, ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಹಾಗೂ ಪ್ರಭಾರ ಡಿಜಿಪಿ ಡಾ.ಎಂ.ಎ. ಸಲೀಂ ಅವರನ್ನು ಪ್ರತಿವಾದಿ ಮಾಡಲಾಗಿದೆ. ಅರ್ಜಿ ಇನ್ನಷ್ಟೇ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬರಬೇಕಿದೆ.

ಅರ್ಜಿದಾರರ ಆಕ್ಷೇಪವೇನು?
ಕಾಯಂ ಡಿಜಿಪಿಯನ್ನು ನೇಮಕ ಮಾಡುವಾಗ ಅನುಸರಿಸಬೇಕಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಬೇಕು. ಯಾವುದೇ ಕಾರಣಕ್ಕೂ ಕಾರ್ಯಕಾರಿ ಅಥವಾ ಪ್ರಭಾರ ಡಿಜಿಪಿಯನ್ನು ನೇಮಿಸಬಾರದು. ಪ್ರಭಾರ ಡಿಜಿಪಿ ಎಂಬ ಪರಿಕಲ್ಪನೆಯೇ ಇಲ್ಲ ಎಂದು ಸುಪ್ರೀಂಕೋರ್ಟ್‌ ಆದೇಶಿಸಿದೆ. ಈ ಆದೇಶ ಉಲ್ಲಂಘಿಸಿ ಡಾ. ಎಂ.ಎ. ಸಲೀಂ ಅವರನ್ನು ಪ್ರಭಾರ ಡಿಜಿ-ಐಜಿಪಿಯಾಗಿ ನೇಮಿಸಿ 2025ರ ಮೇ 21ರಂದು ಸರ್ಕಾರ ಆದೇಶ ಹೊರಡಿಸಿದೆ ಎಂದು ಅರ್ಜಿಯಲ್ಲಿ ಆಕ್ಷೇಪಿಸಲಾಗಿದೆ.

ಡಿಜಿಪಿ ನೇಮಕಾತಿಗೆ ಯುಪಿಎಸ್‍ಸಿ ಉನ್ನತ ಮಟ್ಟದ ಸಮಿತಿ ರಚಿಸಬೇಕು. ಆ ಸಮಿತಿ ರಾಜ್ಯದಲ್ಲಿನ ಸೇವಾಹಿರಿತನ ಹೊಂದಿರುವ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳ ಸೇವೆ ಹಾಗೂ ನಡಾವಳಿ ಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಬೇಕು. ಶಿಫಾರಸ್ಸುಗೊಂಡವರಲ್ಲಿ ಒಬ್ಬರನ್ನು ಮುಖ್ಯಮಂತ್ರಿಗಳು ಡಿಜಿಪಿಯಾಗಿ ನೇಮಿಸಬೇಕು. ಈ ಕುರಿತು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆ ಅಡಿ ಯುಪಿಎಸ್‌ಸಿಯಿಂದ ಮಾಹಿತಿ ಕೇಳಲಾಗಿತ್ತು. ಮೇ 21ರಿಂದ ಖಾಲಿಯಾಗಲಿರುವ ಡಿಜಿಪಿ ನೇಮಕಕ್ಕೆ ಉನ್ನತ ಸಮಿತಿ ರಚನೆ ಮಾಡಲು ಸರ್ಕಾರ ಪ್ರಸ್ತಾವನೆ ಕಳುಹಿಸಿದೆ. ಆ ಪ್ರಕ್ರಿಯೆಯಲ್ಲಿ ಕೆಲ ಲೋಪ ಉಂಟಾಗಿದೆ. ಆ ಬಗ್ಗೆ ಸರ್ಕಾರದಿಂದ ಸ್ಪಷ್ಟೀಕರಣಕ್ಕಾಗಿ ಕಾಯುತ್ತಿರುವುದಾಗಿ ಯುಪಿಎಸ್‌ಸಿ ಉತ್ತರಿಸಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

ಡಾ. ಎಂ.ಎ. ಸಲೀಂ ಅವರನ್ನು ಮೇ 21 ಹಾಗೂ ಅದಕ್ಕೂ ಮುಂಚಿತವಾಗಿ ಡಿಜಿಪಿ ಹುದ್ದೆಗೆ ನೇಮಕ ಮಾಡಲು ಉನ್ನತ ಮಟ್ಟದ ಸಮಿತಿಗೆ ಯಾವುದೇ ಶಿಫಾರಸು ಮಾಡಿರಲಿಲ್ಲ ಎಂದು ಆರ್‌ಟಿಐ ಉತ್ತರದಲ್ಲಿ ಯುಪಿಎಸ್‌ಸಿ ದೃಢಪಡಿಸುತ್ತದೆ. ನಿಯಮಗಳನ್ನು ಗಾಳಿಗೆ ತೂರಿ, ಸಲೀಂ ಅವರನ್ನು ಪ್ರಭಾರ ಡಿಜಿಪಿ ಹುದ್ದೆಗೆ ನೇಮಿಸಲಾಗಿದೆ. ಇದು ಸುಪ್ರೀಂಕೋರ್ಟ್‌ ಆದೇಶದ ಸ್ಪಷ್ಟ ಉಲ್ಲಂಘನೆಯಾಗಿದ್ದು, ಸಲೀಂ ಅವರ ನೇಮಕಾತಿ ಆದೇಶ ರದ್ದುಪಡಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

Related Articles

Comments (0)

Leave a Comment