ಆರ್‌ಸಿಬಿ ವಿಜಯಯಾತ್ರೆ ವೇಳೆ ಕಾಲ್ತುಳಿತ ಪ್ರಕರಣ; ಸ್ವತಂತ್ರ ನ್ಯಾಯಾಂಗ ತನಿಖೆಗೆ ಕೋರಿ ಹೈಕೋರ್ಟ್‌ಗೆ ಪಿಐಎಲ್

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ತಂಡದ ವಿಜಯೋತ್ಸವ ಆಚರಣೆ ವೇಳೆ ಸಂಭಿವಿಸಿದ ಕಾಲ್ತುಳಿತ ಪ್ರಕರಣ ಸಂಬಂಧ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸ್ವತಂತ್ರ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೋರಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಕೆಯಾಗಿದೆ.

ಬೆಂಗಳೂರಿನ ವಕೀಲ ಲೋಹಿತ್‌ ಜಿ. ಹನುಮಪುರ ಪಿಐಎಲ್ ಸಲ್ಲಿಸಿದ್ದು, ಅರ್ಜಿಯಲ್ಲಿ ರಾಜ್ಯ ಸರ್ಕಾರ, ಗೃಹ ಇಲಾಖೆ, ರಾಜ್ಯ ಪೊಲೀಸ್ ಮಹಾನಿರ್ದೇಶಕರು, ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್‌ನ (ಕೆ‌ಎಸ್‌ಸಿಎ) ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಕಾರ್ಯದರ್ಶಿಯನ್ನು ಪ್ರತಿವಾದಿಯನ್ನಾಗಿಸಲಾಗಿದೆ. ಅರ್ಜಿಯನ್ನು ಮಧ್ಯಾಹ್ನ ವಿಚಾರಣೆ ನಡೆಸುವುದಾಗಿ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ತಿಳಿಸಿದೆ.

ಗುರುವಾರ ಬೆಳಗ್ಗೆ ನ್ಯಾಯಾಲಯದ ಕಲಾಪ ಆರಂಭವಾಗುತ್ತಿದ್ದಂತೆ ಅರ್ಜಿದಾರರ ಪರ ವಕೀಲರು ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ. ಕಾಮೇಶ್ವರ್ ರಾವ್ ಹಾಗೂ ನ್ಯಾಯಮೂರ್ತಿ ಸಿ.ಎಂ ಜೋಷಿ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಅರ್ಜಿ ಕುರಿತು ಪ್ರಸ್ತಾಪಿಸಿ, ವಿಚಾರಣೆಗೆ ಮನವಿ ಮಾಡಿದರು.

ನ್ಯಾಯಾಲಯದಲ್ಲಿ ಹಾಜರಿದ್ದ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು, ಪ್ರಕರಣ ಸಂಬಂಧ ಸರ್ಕಾರ ಯಾವೆಲ್ಲ ಕ್ರಮಕೈಗೊಳ್ಳುತ್ತಿದೆ ಎಂಬ ಬಗ್ಗೆ ನ್ಯಾಯಪಪೀಠಕ್ಕೆ ವರದಿ ಸಲ್ಲಿಸಲಿದ್ದೇವೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗುವುದು. ಘಟನಾ ಸ್ಥಳದಲ್ಲಿ ಏನೆಲ್ಲ ನಡೆದಿದೆ ಎಂಬ ವಾಸ್ತವಿಕ ವಿಚಾರಗಳನ್ನು ಪೀಠಕ್ಕೆ ಸಲ್ಲಿಸಲಾಗುವುದು. ಅರ್ಜಿದಾರರ ಬಳಿ ಏನಾದರೂ ಸಲಹೆಗಳಿದ್ದರೆ ನೀಡಬಹುದು ಎಂದರಲ್ಲದೆ, ಮಧ್ಯಾಹ್ನ 2.30ಕ್ಕ ನ್ಯಾಯಾಲಯಕ್ಕೆ ಮಾಹಿತಿ ಒದಗಿಸಲಾಗುವುದು. ಅಲ್ಲಿಯವರೆಗೂ ಕಾಲಾವಕಾಶ ನೀಡಬೇಕು ಎಂದು ಕೋರಿದರು. ಈ ಅಂಶ ದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆಯನ್ನು ಮಧ್ಯಾಹ್ನಕ್ಕೆ ಮುಂದೂಡಿತು.

ಅರ್ಜಿದಾರರ ಆಕ್ಷೇಪವೇನು?
ರಾಜ್ಯ ಸರ್ಕಾರದ ಗಂಭೀರ ಲೋಪದಿಂದ ಈ ದುರ್ಘಟನೆ ಸಂಭವಿಸಿದೆ. ಕಾಲ್ತುಳಿತದಲ್ಲಿ 11 ಮಂದಿ ಜೀವ ಕಳೆದುಕೊಂಡಿದ್ದರೆ, 50ಕ್ಕೂ ಅಧಿಕ ಮಂದಿಗೆ ಗಂಭೀರ ಗಾಯಗಳಾಗಿವೆ. ಆರ್‌ಸಿಬಿ ವಿಜಯೋತ್ಸವವನ್ನು ತರಾತುರಿಯಲ್ಲಿ ಆಯೋಜಿಸಲಾಗಿತ್ತು. ಲಕ್ಷಾಂತರ ಅಭಿಮಾನಿಗಳು ಸೇರುವುದನ್ನು ನಿರೀಕ್ಷಿಸುವಲ್ಲಿ ರಾಜ್ಯ ಗುಪ್ತಚರ ಇಲಾಖೆ ವಿಫಲವಾಗಿದೆ. ಸೂಕ್ತ ರೀತಿಯ ಸಿದ್ಧತೆ ಇಲ್ಲದೆ ಆರ್‌ಸಿಬಿ ಫ್ರಾಂಚೈಸಿ ಉಚಿತ ಪಾಸ್ ವಿತರಣೆ ಮಾಡಿದೆ. ಅಭಿಮಾನಿಗಳು ಹೆಚ್ಚಾದ ನಂತರವೂ ಯಾವುದೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿಲ್ಲ. ಅಭಿಮಾನಿಗಳನ್ನು ನಿಯಂತ್ರಿಸುವಲ್ಲಿ ಪೊಲೀಸ್ ಅಧಿಕಾರಿಗಳು ಸಂಪೂರ್ಣ ವಿಫಲರಾಗಿದ್ದಾರೆ. ಕ್ರೀಡಾಂಗಣ ಪ್ರವೇಶಕ್ಕೆ ಸರತಿ ಸಾಲು ವ್ಯವಸ್ಥೆ ಇರಲಿಲ್ಲ. ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿಲ್ಲ. ಸೂಕ್ತ ಪ್ರಮಾಣದಲ್ಲಿ ಸಿಬ್ಬಂದಿ ನಿಯೋಜಿಸದ ಹೊರತಾಗಿಯೂ, ವಿಧಾನಸೌಧದ ಮುಂಭಾಗ ಆಟಗಾರರನ್ನು ಸನ್ಮಾನಿಸಿರುವುದೇ ಘಟನೆಗೆ ಪ್ರಮುಖ ಕಾರಣವಾಗಿದೆ. ಆದ್ದರಿಂದ, ರಾಜ್ಯ ಸರ್ಕಾರವೇ ಇದಕ್ಕೆಲ್ಲ ನೇರ ಹೊಣೆಯಾಗಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ನ್ಯಾಯಾಂಗ ತನಿಖೆಗೆ ಮನವಿ:
ಕಾಲ್ತುಳಿತ ಪ್ರಕರಣ ಕುರಿತು ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳ ಮೇಲ್ವಿಚಾರಣೆಯಲ್ಲಿ ಸ್ವತಂತ್ರ ನ್ಯಾಯಾಂಗ ತನಿಖೆಗೆ ನಿರ್ದೇಶಿಸಬೇಕು. ಚಿನ್ನಸ್ವಾಮಿ ಕ್ರೀಡಾಂಗಣ ಮತ್ತು ವಿಧಾನಸೌಧದ ಮುಂದೆ ನಡೆದ ಎರಡೂ ಕಾರ್ಯಕ್ರಮಗಳಿಗೆ ನೀಡಲಾಗಿರುವ ಅನುಮೋದನೆಗಳು, ಕೈಗೊಂಡ ಸುರಕ್ಷತಾ ಕ್ರಮಗಳು ಮತ್ತು ಜನಸಂದಣಿ ನಿಯಂತ್ರಣ ಯೋಜನೆಗಳ ಕುರಿತು ವಿವರವಾದ ವರದಿಗಳನ್ನು ಸಲ್ಲಿಸಲು ರಾಜ್ಯ ಸರ್ಕಾರ ಮತ್ತು ಕೆಎಸ್‌ಸಿಎಗೆ ನಿರ್ದೇಶಿಸಬೇಕು. ಕಾನೂನು ಉಲ್ಲಂಘನೆ ಮಾಡಿದ ಯಾವುದೇ ಅಧಿಕಾರಿಗಳು, ಸಂಘಟಕರು ಅಥವಾ ಖಾಸಗಿ ಸಂಸ್ಥೆಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ನಿರ್ದೇಶಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

Related Articles

Comments (0)

Leave a Comment