ಕಲ್ಯಾಣ ಕಾರ್ಯಕ್ರಮಗಳ ಪರಿಣಾಮಕಾರಿ ಜಾರಿಗಾಗಿ ಸಮೀಕ್ಷೆ; ಹೈಕೋರ್ಟ್ನಲ್ಲಿ ರಾಜ್ಯ ಸರ್ಕಾರದ ಪ್ರತಿಪಾದನೆ
- by Jagan Ramesh
- September 23, 2025
- 298 Views
ಬೆಂಗಳೂರು: ರಾಜ್ಯ ಸರ್ಕಾರ ರೂಪಿಸುವ ಕಲ್ಯಾಣ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಉದ್ದೇಶದಿಂದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಲಾಗುತ್ತಿದೆಯೇ ಹೊರತು, ಯಾವುದೇ ರೀತಿಯ ಜಾತಿ ಗಣತಿ ನಡೆಸುತ್ತಿಲ್ಲ ಎಂದು ಹೈಕೋರ್ಟ್ನಲ್ಲಿ ರಾಜ್ಯ ಸರ್ಕಾರ ಪ್ರತಿಪಾದಿಸಿದೆ.
ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ ಸಮೀಕ್ಷೆ ನಡೆಸಲು 2025ರ ಆಗಸ್ಟ್ 13ರಂದು ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ರಾಜ್ಯ ಒಕ್ಕಲಿಗರ ಸಂಘ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ, ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ ಬಿ.ಆರ್. ಉದಯಶಂಕರ್ ಸೇರಿ 9 ಸದಸ್ಯರು ಹಾಗೂ ಹಿರಿಯ ವಕೀಲ ಕೆ.ಎನ್. ಸುಬ್ಬಾರೆಡ್ಡಿ ಸೇರಿ ನಾಲ್ವರು ಸಲ್ಲಿಸಿರುವ ಪ್ರತ್ಯೇಕ ನಾಲ್ಕು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ಸರ್ಕಾರದ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿ, ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಅರ್ಜಿದಾರರು ಜಾತಿ ಸಮೀಕ್ಷೆ ಎಂದು ವ್ಯಾಖ್ಯಾನಿಸುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಆಗ ನ್ಯಾಯಪೀಠ, ರಾಜ್ಯ ಸರ್ಕಾರ ನಡೆಸುತ್ತಿರುವ ಸಮೀಕ್ಷೆಯ ಪ್ರಕಾರ ಪ್ರತಿಯೊಬ್ಬ ನಿವಾಸಿಯನ್ನು ಪತ್ತೆ ಮಾಡಿ, ಅವರ ಜಾತಿ ಗುರುತಿಸಲಾಗುತ್ತಿದೆ ಎಂಬುದು ಅರ್ಜಿದಾರರ ವಾದವಾಗಿದೆ. ನೀವು ಹೇಳುತ್ತಿರುವಂತೆ ಸಮೀಕ್ಷೆಗೂ, ಗಣತಿಗೂ ಸಮೀಕ್ಷೆಗೂ ಇರುವ ವ್ಯತ್ಯಾಸವೇನು ಎಂದು ಪ್ರಶ್ನಿಸಿತು.
ಅದಕ್ಕೆ ಪ್ರತಿಕ್ರಿಯಿಸಿದ ಸಿಂಘ್ವಿ, ಕಲ್ಯಾಣ ಕಾರ್ಯಕ್ರಮಗಳನ್ನು ಕೈಗೊಳ್ಳುವುದಕ್ಕಾಗಿ ಸರ್ಕಾರಕ್ಕೆ ಅಂಕಿ ಅಂಶಗಳ ಅಗತ್ಯವಿದೆ. ಅದಕ್ಕಾಗಿ ಸಮೀಕ್ಷೆ ನಡೆಸಲು ಮುಂದಾಗಿದೆ. ದತ್ತಾಂಶವಿಲ್ಲದೆ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಲಾಗದು. ಇದು ನ್ಯಾಯಾಂಗ ಪರಿಶೀಲನೆಗೆ ಒಳಪಡುವುದಿಲ್ಲ. ವಿಶೇಷ ಪ್ರಕರಣಗಳಲ್ಲಿ ಮಾತ್ರ ನ್ಯಾಯಾಲಯ ಮಧ್ಯಂತರ ತಡೆ ನೀಡಬಹುದಾಗಿದೆ. ದತ್ತಾಂಶವಿಲ್ಲದೆ ತರ್ಕಬದ್ಧ ನೀತಿ ಅಥವಾ ತರ್ಕಬದ್ಧ ಸಲಹೆ ನೀಡುವುದಾದರೂ ಹೇಗೆ ಎಂದರು.
ಮಧ್ಯಂತರ ತಡೆಯ ಪ್ರಶ್ನೆಯೇ ಉದ್ಭವಿಸದು:
ಅರ್ಜಿದಾರರು ಸರ್ಕಾರದ ತೀರ್ಮಾನ ಪ್ರಶ್ನಿಸಲು ಬಯಸುತ್ತಿಲ್ಲ. ಆದರೆ, ನಿರ್ಧಾರ ಕೈಗೊಳ್ಳಲು ಮುಂದಾಗಿರುವ ದತ್ತಾಂಶ ಸಂಗ್ರಹ ಪ್ರಕ್ರಿಯೆಯನ್ನು ಪ್ರಶ್ನಿಸುತ್ತಿದ್ದಾರೆ. ರಾಜ್ಯ ಸರ್ಕಾರದ ನಡೆ ಸಂವಿಧಾನಬಾಹಿರ ಎಂದು ಪ್ರಕಟಿಸಬೇಕಾದರೆ, ನ್ಯಾಯಾಲಯ ಸಂಪೂರ್ಣ ವಿಚಾರಣೆ ನಡೆಸಬೇಕು. ಒಂದೊಮ್ಮೆ ಅರ್ಜಿದಾರರ ವಾದವನ್ನು ಪರಿಗಣಿಸಿದರೆ ಪ್ರತಿಯೊಂದು ದತ್ತಾಂಶ ಸಂಗ್ರಹವೂ ಗಣತಿ ಎಂದೇ ಪರಿಗಣಿಸಬೇಕಾಗುತ್ತದೆ. ಆದ್ದರಿಂದ, ಈ ಹಂತದಲ್ಲಿ ಮಧ್ಯಂತರ ತಡೆ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ವಿವರಿಸಿದರು.
ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಾನಮಾನಗಳನ್ನು ಅಳೆಯಲು ಹೊಸದಾಗಿ ನಡೆಸುವ ಸಮೀಕ್ಷೆಯಿಂದ ದೊರೆಯುವ ದತ್ತಾಂಶಗಳು ಮುಖ್ಯವಾಗಲಿದೆ. ಸಮೀಕ್ಷೆ ವೇಳೆ ಯಾವುದೇ ವ್ಯಕ್ತಿಯ ಗೌಪ್ಯತೆಗೆ ಧಕ್ಕೆಯಾಗುವುದಕ್ಕೆ ಅವಕಾಶವಿರುವುದಿಲ್ಲ. ದತ್ತಾಂಶ ಸಂಗ್ರಹಿಸಿದರೂ, ಯಾವುದೇ ಖಾಸಗಿ ವ್ಯಕ್ತಿಗಳಿಗೆ ಹಂಚಿಕೊಳ್ಳುವುದಕ್ಕೆ ಅವಕಾಶವೇ ಇರುವುದಿಲ್ಲ ಎಂದು ನ್ಯಾಯಪೀಠಕ್ಕೆ ಸ್ಪಷ್ಟಪಡಿಸಿದರು.
ಹಿಂದುಳಿದ ವರ್ಗಗಳ ಆಯೋಗದ ಪರ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್ ವಾದ ಮಂಡಿಸಿ, ಸಮೀಕ್ಷೆಯಲ್ಲಿ ಪಾಲ್ಗೊಳ್ಳುವ ನಾಗರಿಕರ ಗುರುತು ಖಾತ್ರಿಪಡಿಸಿಕೊಳ್ಳುವ ಉದ್ದೇಶಕ್ಕೆ ಮಾತ್ರ ಆಧಾರ್ ಕಾರ್ಡ್ ಪಡೆಯಲಾಗುತ್ತದೆ. ಅದನ್ನು ಹೊರತುಪಡಿಸಿ, ಆಧಾರ್ನ ಯಾವುದೇ ದತ್ತಾಂಶ ಸಂಗ್ರಹಿಸಲಾಗುವುದಿಲ್ಲ. ಜತೆಗೆ, ಸಮೀಕ್ಷೆಯಲ್ಲಿ ಮಾಹಿತಿ ನೀಡುವಂತೆ ಜನರನ್ನು ಒತ್ತಾಯಿಸುವುದಿಲ್ಲ. ಮಾಹಿತಿ ನೀಡುವುದು ನಾಗರಿಕರ ಸ್ವಯಂಪ್ರೇರಿತ ನಿರ್ಧಾರವಾಗಿರಲಿದೆ ಎಂದು ತಿಳಿಸಿದರು.
ಸಮೀಕ್ಷೆಗೆ ಅರ್ಜಿದಾರರ ಆಕ್ಷೇಪವೇನು?
ಇದಕ್ಕೂ ಮುನ್ನ ಅಖಿಲ ಭಾರತ ವೀರೈಶೈವ-ಲಿಂಗಾಯತ ಮಹಾಸಭಾ ಸದಸ್ಯರ ಪರ ವಾದ ಮಂಡಿಸಿದ ಹಿರಿಯ ವಕೀಲ ಪ್ರಭುಲಿಂಗ ನಾವದಗಿ, ಸಮೀಕ್ಷೆಗಾಗಿ ಸರ್ಕಾರ ಮತ್ತು ಆಯೋಗ ನೀಡಿರುವ ಹ್ಯಾಂಡ್ಬುಕ್ನಲ್ಲಿ ಆಧಾರ್ ಮತ್ತು ಮೊಬೈಲ್ ಸಂಖ್ಯೆ ನೀಡುವುದನ್ನು ಕಡ್ಡಾಯಗೊಳಿಸಲಾಗಿದೆ. ಸಂವಿಧಾನದ ಪರಿಚ್ಛೇದ 342ರ ಅಡಿ ನಿರ್ಬಂಧ ಇರುವುದರಿಂದ ಸಮೀಕ್ಷೆ ನಡೆಸುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ. ಕಾನೂನಿನ ಅಡಿ ರಾಜ್ಯ ಸರ್ಕಾರ ಅಥವಾ ಕೇಂದ್ರಾಡಳಿತ ಪ್ರದೇಶಗಳು ತಮ್ಮದೇ ಉದ್ದೇಶಕ್ಕಾಗಿ ಸಾಮಾಜಿಕ, ಆರ್ಥಿಕ ಹಿಂದುಳಿದಿರುವಿಕೆಯನ್ನು ಗುರುತಿಸಿ, ನಿರ್ವಹಿಸಬಹುದು. ಆದರೆ, ಇದು ಕೇಂದ್ರ ಸರ್ಕಾರದ ಪಟ್ಟಿಗಿಂತ ವಿಭಿನ್ನ ಎಂದರು.
ಮತ್ತೋರ್ವ ಹಿರಿಯ ವಕೀಲ ಜಯಕುಮಾರ್ ಪಾಟೀಲ್ ವಾದ ಮಂಡಿಸಿ, ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗ ಕಾಯ್ದೆ ಸೆಕ್ಷನ್ 9(1)(ii) ಅಡಿ ಸಮೀಕ್ಷೆ ನಡೆಸಲು ಯಾವುದೇ ವಿಧಾನವಿಲ್ಲ. ಈ ಕಾಯ್ದೆ ತಿದ್ದುಪಡಿ ಮಾಡಿರುವುದು ಸಂವಿಧಾನದ ಪರಿಚ್ಛೇದ 342 ಸೂಪರ್ ಸೀಡ್ ಮಾಡಲಾಗದು. ಸಮೀಕ್ಷೆಯಲ್ಲಿ ಇಡೀ ರಾಜ್ಯದ ಜನತೆಯನ್ನು ಒಳಗೊಳ್ಳಲಾಗುತ್ತದೆ. ಇದು ಗಣತಿಯಲ್ಲದೇ ಬೇರೇನೂ ಅಲ್ಲ. ಇದು ಸಂವಿಧಾನದ ಪರಿಚ್ಛೇದ 342 ಎ ಗೆ ವಿರುದ್ಧವಾಗಿದೆ. ರಾಜ್ಯ ಸರ್ಕಾರದ ಕ್ರಮ ಚುನಾವಣೆಗಾಗಿ ಪ್ರತಿ ಜಾತಿಯ ಸಂಖ್ಯೆಯನ್ನು ಪತ್ತೆ ಮಾಡುವ ಬಣ್ಣದ ತಂತ್ರವಾಗಿದೆ ಎಂದು ಆರೋಪಿಸಿದರು.
ರಾಜ್ಯ ಒಕ್ಕಲಿಗರ ಸಂಘದ ಪರ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ ವಾದ ಮಂಡಿಸಿ, ಜಾತಿ ಗುರುತಿಸುವುದಕ್ಕೆ ಪೂರಕವಾಗಿ ಸರ್ಕಾರ ಯಾವುದೇ ಅಧ್ಯಯನ ಮಾಡಿಲ್ಲ. ಇದರಿಂದ, ನಕಲಿ ಸಾಧ್ಯತೆ ಹೆಚ್ಚಾಗಲಿದ್ದು, ಜನರು ತಪ್ಪು ದತ್ತಾಂಶ ನೀಡುವ ಸಾಧ್ಯತೆ ಇದೆ. ಮಾಹಿತಿಯ ಖಾಸಗಿತನದ ಪ್ರಶ್ನೆಯೂ ಇಲ್ಲಿದ್ದು, ಡಿಜಿಟಲ್ ರೂಪದಲ್ಲಿ ದಾಖಲಿಸಿದ ದತ್ತಾಂಶ ಸೋರಿಕೆಯಾಗುವುದನ್ನು ಅಲ್ಲಗಳೆಯಲಾಗದು. ಸಮೀಕ್ಷೆಯಲ್ಲಿ ಎತ್ತಲಾಗಿರುವ ಪ್ರಶ್ನೆಗಳನ್ನು ನೋಡಿದರೆ ಅದು ವ್ಯಕ್ತಿಯೊಬ್ಬರ ವಿವರವಲ್ಲದೇ ಬೇರೇನೂ ಅಲ್ಲ. ಇಂಥ ಸಮೀಕ್ಷೆಗೆ ಅವಕಾಶವಿಲ್ಲ ಎಂದರು.
ಕೆ.ಎನ್. ಸುಬ್ಬಾರೆಡ್ಡಿ ಮತ್ತಿತರರ ಪರವಾಗಿ ಹಾಜರಿದ್ದ ಹಿರಿಯ ವಕೀಲ ವಿವೇಕ್ ರೆಡ್ಡಿ ವಾದ ಮಂಡಿಸಿ, ಹಲವು ಜಾತಿಗಳನ್ನು ಧರ್ಮದೊಂದಿಗೆ ತಳುಕು ಹಾಕಲಾಗಿದೆ. ಹೊಸ ಪಟ್ಟಿಯಲ್ಲಿ ಅವೈಜ್ಞಾನಿಕವಾಗಿ ನೂರಾರು ಜಾತಿಗಳನ್ನು ಸೃಷ್ಟಿಸಲಾಗಿದ್ದು, ಪ್ರಮುಖ ಜಾತಿಯನ್ನು ನಿರ್ವಹಿಸುವ ನಿಟ್ಟಿನಲ್ಲಿ ಆಯೋಗ ತನ್ನ ವಿವೇಚನೆ ಬಳಸಿಲ್ಲ. ಕೃತಕವಾಗಿ ಜಾತಿಗಳನ್ನು ಸೃಷ್ಟಿ ಮಾಡಲಾಗಿದ್ದು, ಇದು ಗೊಂದಲಕ್ಕೆ ನಾಂದಿಯಾಗಿದೆ. ಪ್ರಮುಖ ದತ್ತಾಂಶವನ್ನು ಅಸ್ತ್ರವಾಗಿಸಲು ದತ್ತಾಂಶ ಗಣಿಗಾರಿಕೆ ಮಾಡುವುದು ಸರ್ಕಾರದ ಉದ್ದೇಶವಾಗಿದೆ ಎಂದು ಆರೋಪಿಸಿದರು.
ಅಖಿಲ ಭಾರತ ಬ್ರಾಹ್ಮಣ ಮಹಾಸಭಾ ಪರ ವಾದ ಮಂಡಿಸಿದ ಹಿರಿಯ ವಕೀಲ ಶ್ರೀರಂಗ ಸುಬ್ಬಣ್ಣ ಅವರು, ಸಮೀಕ್ಷೆ ನಡೆಸಲು ಅತ್ಯಂತ ಅವಸರ ತೋರಲಾಗುತ್ತಿದ್ದು, ಕೆಲವು ವಿಚಾರಗಳು ನಿರ್ಧಾರವಾಗುವವರೆಗೆ ಸರ್ಕಾರ ಮತ್ತು ಆಯೋಗಕ್ಕೆ ಸಮೀಕ್ಷೆ ಮುಂದುವರಿಸದಂತೆ ನಿರ್ದೇಶಿಸುವುದು ಅಗತ್ಯವಾಗಿದೆ ಎಂದರು.
ಅರ್ಜಿಗಳ ಕುರಿತು ಸುದೀರ್ಘ 2 ತಾಸು ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿತು.
Related Articles
Thank you for your comment. It is awaiting moderation.


Comments (0)